ಕಾಂಗ್ರೆಸ್ನ ಹಣ, ತೋಳ ಬಲದ ಮೂಲಕ ಗೆಲ್ಲುವುದು ತಿರುಕನ ಕನಸಷ್ಟೇ : ಯಡಿಯೂರಪ್ಪ
ಬೀದರ್,ಮಾರ್ಚ್ 3: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಸದ್ಯ ಸಕ್ರಿಯರಾಗಿದ್ದಾರೆ.
ಶುಕ್ರವಾರ ಬೀದರ್ ನಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ 3 ನೇ ರಥಯಾತ್ರೆಗೆ ಚಾಲನೆ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ನ ಹಣ, ತೋಳ ಬಲದ ಮೂಲಕ ಗೆಲ್ಲುವುದು ತಿರುಕನ ಕನಸಷ್ಟೇ ಎಂದು ಸವಾಲೆಸೆದರು. ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

4 ರಥಗಳು 224 ಕ್ಷೇತ್ರಗಳಿಗೆ ಭೇಟಿ ಕೊಡಲಿವೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬೃಹತ್ ಸಭೆ ನಡೆಯಲಿದೆ. ಮಹಾನ್ ನಾಯಕ ನರೇಂದ್ರ ಮೋದಿಜಿ ಅವರು ಬರಲಿದ್ದಾರೆ.ಬಸವಕಲ್ಯಾಣ ಹೇಗಿತ್ತು? ಇವತ್ತು ಸಾವಿರಾರು ಕೋಟಿ ಹಣದಿಂದ ಹೇಗೆ ಅಭಿವೃದ್ಧಿ ಆಗಿದೆ ಎಂದು ಗಮನಿಸಿ. ಮೋದಿಜಿ, ಅಮಿತ್ ಶಾಜಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಬಸವಣ್ಣನ ಕರ್ಮಭೂಮಿಯಿಂದ ಈ ಯಾತ್ರೆ ಆರಂಭವಾಗಿದೆ. ಇದಕ್ಕೆ ಬಸವಣ್ಣನ ಪ್ರೇರಣೆ ಇದೆ. ಬಸವಕಲ್ಯಾಣವು ಜನರ ಆಕರ್ಷಣೆಯ ಕೇಂದ್ರ ಬಿಂದು. ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ನರೇಂದ್ರ ಮೋದಿಜಿ ಅವರ ಸಾಧನೆಗಳನ್ನು ಜಗತ್ತೇ ಕೊಂಡಾಡುತ್ತಿದೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣದ ಮಹತ್ವದ ಕಾರ್ಯವನ್ನು ನಮ್ಮ ಪ್ರಧಾನಿ ಮೋದಿಜಿ ಮಾಡಿದ್ದಾರೆ. 140 ಕೋಟಿ ಜನರಿಗೆ ಉಚಿತ ಲಸಿಕೆ ನೀಡಿದ್ದಾರೆ ಎಂದ ಅವರು, ಶ್ರೀಲಂಕಾ- ಪಾಕಿಸ್ತಾನಗಳು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿವೆ. ಪಾಕ್ ಜನತೆ ಮೋದಿಜಿ ಅವರಂಥ ನಾಯಕತ್ವ ಬಯಸುತ್ತಿದ್ದಾರೆ ಎಂದು ವಿವರಿಸಿದರು. ದೇಶದ ಸಾಧನೆ, ದೇಶ, ರಾಜ್ಯಗಳ ಅಭಿವೃದ್ಧಿಯನ್ನು ಗಮನಿಸಿ ಮತ್ತೆ ಬಿಜೆಪಿ ಆಡಳಿತಕ್ಕೆ ಅವಕಾಶ ಕೊಡಬೇಕೆಂದು ಹೇಳಿದರು.
ಕಾಂಗ್ರೆಸ್ ದೇಶದಲ್ಲಿ ದೂಳಿಪಟವಾಗಿದೆ. ರಾಜ್ಯದಲ್ಲೂ ಕಾಂಗ್ರೆಸ್ ಅಂತ್ಯಯಾತ್ರೆ ಈ ಚುನಾವಣೆ ಮೂಲಕ ನಡೆಯಲಿದೆ ಎಂದು ತಿಳಿಸಿದರು. 2023ರ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ತಿಳಿಸಿದರು.
ರಾಜ್ಯದ ಸಚಿವ ಬಿ.ಶ್ರೀರಾಮುಲು ಅವರು ಮಾತನಾಡಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಬಿಜೆಪಿ ಮಾಡಿದೆ. ಭಾರತವು ಮೋದಿಜಿ ಅವರ ನೇತೃತ್ವದಲ್ಲಿ ವಿಶ್ವವಂದ್ಯ ರಾಷ್ಟ್ರವಾಗಲು ಸಹಕರಿಸಿ ಎಂದು ಮನವಿ ಮಾಡಿದರು.
ಈ ವೇಳೆ ರಾಜ್ಯದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ.ಅರುಣಾ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್, ಶಾಸಕ ರಘುನಾಥ ಮಲ್ಕಾಪುರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಶಾಸಕ ಶರಣು ಸಲಗರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ರಾಜ್ಯ- ಜಿಲ್ಲೆ, ಸ್ಥಳೀಯ ಮುಖಂಡರು ಹಾಜರಿದ್ದರು












Click it and Unblock the Notifications