ಮೈಸೂರಲ್ಲಿ ರಾಜು ಹತ್ಯೆ : ಯಾರು, ಏನು ಹೇಳಿದರು?
ಬೆಂಗಳೂರು, ಮಾರ್ಚ್ 15 : ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಸೋಮವಾರ ಕರೆ ನೀಡಿದ್ದ ಮೈಸೂರು ಬಂದ್ ವೇಳೆ ಹಿಂಸಾಚಾರ ನಡೆಸಿದೆ. ಕ್ಯಾತಮಾರನಹಳ್ಳಿಯಲ್ಲಿ ಸೋಮವಾರ ಸಂಜೆ ರಾಜು ಅವರ ಅಂತ್ಯಕ್ರಿಯೆ ನಡೆಸಲಾಗಿದೆ.
ರಾಜು ಅವರ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ನೂರಾರು ಜನರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮೈಸೂರಿನಲ್ಲಿ ಸದ್ಯ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಜು ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. [ಬಿಜೆಪಿ ಕಾರ್ಯಕರ್ತನ ಕೊಲೆ, ಕೋಮು ಗಲಭೆ ಎಚ್ಚರಿಕೆ]
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು ಮಂಗಳವಾರ ನಗರಕ್ಕೆ ಭೇಟಿ ನೀಡಲಿದ್ದು, ಶಾಂತಿ ಸಭೆ ನಡೆಸಲಿದ್ದಾರೆ. ಹತ್ಯೆಯಾದ ರಾಜು ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಶಿಫಾರಸು ಮಾಡಿದೆ. [ಮೈಸೂರು ಬಂದ್ ಹಿಂಸಾಚಾರಕ್ಕೆ ತಿರುಗಿದ್ದು ಹೇಗೆ?]
ರಾಜು ಹತ್ಯೆ ರಾಜಕೀಯ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಬಿಜೆಪಿ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆರೋಪಿಗಳನ್ನು ಬಂಧಿಸಿ ಎಂದರೆ ನಮ್ಮನ್ನು ದೂರುತ್ತಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ರಾಜು ಹತ್ಯೆ ಬಗ್ಗೆ ಯಾರು, ಏನು ಹೇಳಿದರು? ಚಿತ್ರಗಳಲ್ಲಿ ನೋಡಿ......[ಮೈಸೂರು : ರಾಜು ಕೊಲೆ ಪ್ರಕರಣದ ತನಿಖೆ ಸಿಸಿಬಿಗೆ]

'ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಲಾಗಿದೆ'
'ಮೈಸೂರಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದು ಅನಿರೀಕ್ಷಿತ ಘಟನೆ. ಪ್ರಕರಣ ಮುಂದಿಟ್ಟುಕೊಂಡು ರಾಜಕಾರಣ ಮಾಡಬಾರದು. ಜನರು ಶಾಂತಿ ಕಾಪಾಡಬೇಕು. ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.

'ಬಿಜೆಪಿ ರಾಜಕಾರಣ ಮಾಡುತ್ತಿದೆ'
'ರಾಜು ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಇಂತಹ ಪ್ರಕರಣ ಪದೇ-ಪದೇ ನಡೆಯುತ್ತಿದೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕಾನೂನು ಸುವ್ಯವಸ್ಥೆಗೆ ಅಡ್ಡಿ ಪಡಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

'ಸಿದ್ದರಾಮಯ್ಯ ತಲೆ ತಗ್ಗಿಸಬೇಕು'
'ಮಂಗಳೂರು, ಕೊಡಗು ಆಯ್ತು ಈಗ ಮೈಸೂರಲ್ಲಿಯೂ ಹಿಂದೂ ಕಾರ್ಯಕರ್ತನ ಕೊಲೆ ಆಗಿದೆ. ಆರೋಪಿಗಳನ್ನು ಬಂಧಿಸಿ ಎಂದರೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಹೇಳಿಕೊಂಡು ತಿರುಗುತ್ತಿರುವುದು ನಾಚಿಗೇಡು. ಸಿಎಂ ತವರು ಜಿಲ್ಲೆಯಲ್ಲಿ ಕೊಲೆ ನಡೆದಿರುವುದಕ್ಕೆ ಸಿದ್ದರಾಮಯ್ಯ ತಲೆ ತಗ್ಗಿಸಬೇಕು' ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

'ಶಾಂತಿ ಕಾಪಾಡಲು ಸರ್ಕಾರ ವಿಫಲ'
'ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯಿಂದಾಗಿ ಶಾಂತಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಶಾಂತಿ ಸುವ್ಯವಸ್ಥೆ ಹಾಳಾಗಲು ಕಾರಣವಾಗಿದೆ' ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಸರ್ಕಾರ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಪರೋಕ್ಷವಾಗಿ ಈ ಘಟನೆಗಳ ಬೆನ್ನಿಗೆ ನಿಂತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ' ಎಂದು ಹೇಳಿದ್ದಾರೆ.

'ಅಹಿಂದ ಮುಖ್ಯಮಂತ್ರಿಯಾಗಿದ್ದಾರೆ'
'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ' ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಆರೋಪಿಸಿದ್ದಾರೆ. 'ಕರ್ನಾಟಕ ಶಾಂತಿ ಬೀಡಾಗಿತ್ತು. ಆದರೆ, ಈಗ ಉತ್ತರ ಪ್ರದೇಶ, ಅಸ್ಸಾಂನಂತರ ಗಲಭೆಯ ನಾಡಾಗುತ್ತಿದೆ. ಸಿದ್ದರಾಮಯ್ಯ ಅವರು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಂತೆ ವರ್ತಿಸುತ್ತಿಲ್ಲ. ಅವರು ಅಹಿಂದ ಮುಖ್ಯಮಂತ್ರಿಯಾಗಿದ್ದಾರೆ' ಎಂದು ಪ್ರತಾಪ್ ಸಿಂಹ ದೂರಿದ್ದಾರೆ.

'ಸರ್ಕಾರದ ನಿರ್ಲಕ್ಷ್ಯಕ್ಕೆ ಮೂರನೇ ಬಲಿ'
'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯಕ್ಕೆ ಇದು ಮೂರನೇ ಬಲಿ. ಈ ಹಿಂದಿನ ಪ್ರಕರಣಗಳಂತೆಯೇ ಇದರಲ್ಲಿಯೂ ಹಂತಕರನ್ನು ಪತ್ತೆ ಹಚ್ಚಲು ಆರಕ್ಷಕ ಇಲಾಖೆ ವಿಫಲವಾಗಿದೆ. ಮೃತ ರಾಜು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು, ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕು ಎಂದು' ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.












Click it and Unblock the Notifications