ಬಿಜೆಪಿಗೆ ಅಖಂಡ ಶ್ರೀನಿವಾಸಮೂರ್ತಿ? ಆರ್. ಅಶೋಕ್ ಸ್ಪಷ್ಟನೆ!
ಬೆಂಗಳೂರು, ಆ. 17: ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ನಡೆದಿದ್ದ ಗಲಭೆಯ ಮರುದಿನ ಬೆಂಗಳೂರಿನ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆದಿದ್ದ ಸಭೆಗೆ ಹೋಗಿರಲಿಲ್ಲ. ಅದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿದ್ದರು. ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಆರ್. ಅಶೋಕ್ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಮಾತನಾಡಿದ್ದರು. ಅಲ್ಲಿ ರಾಜಕೀಯ ವಿಚಾರಗಳು ಪ್ರಸ್ತಾಪವಾಗಿರಲಿಲ್ಲ. ಆದರೂ ಈಗ ಬೆಂಗಳೂರು ಗಲಭೆಯ ಬಳಿಕ ಅಂದುಕೊಂಡಂತೆಯೆ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ.
ಆದರೆ ತಮ್ಮದೇ ನಿವಾಸದ ಮೇಲೆ ಆಗಿರುವ ದಾಳಿಯ ಕುರಿತು, ತಮ್ಮದೇ ಪಕ್ಷದ ಅಧ್ಯಕ್ಷರು ಕರೆದಿದ್ದ ಮಹತ್ವದ ಸಭೆಗೆ ಅಖಂಡ ಶ್ರೀನಿವಾಸಮೂರ್ತಿ ಗೈರಾಗಿದ್ದು ಕಾಂಗ್ರೆಸ್ಸಿಗರು ಹುಬ್ಬೇರಿಸುವಂತೆ ಮಾಡಿತ್ತು. ಇದೀಗ ಅವರನ್ನು ಬಿಜೆಪಿಗೆ ಆಹ್ವಾನಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಅಣ್ಣ ತಮ್ಮಂದಿರಂತೆ ಇದ್ದೇವೆ
ಗಲಭೆ ಬಳಿಕ ಇಂದು ಮತ್ತೆ ಮಾತನಾಡಿರುವ ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು, ನನ್ನ ಕ್ಷೇತ್ರಕ್ಕೆ ಯಾವುದೇ ಕೆಟ್ಟ ಹೆಸರು ಬರುವುದು ಬೇಡ ಎಂದು ವಿನಂತಿಸಿದ್ದಾರೆ. ಯಾರೋ ಕಿಡಿಗೇಡಿಗಳು ಮಾಡಿರುವ ಕೆಲಸಕ್ಕೆ ಎಲ್ಲರೂ ಅನುಭವಿಸುವುದು ಬೇಡ. ನಾವೆಲ್ಲರೂ ಕ್ಷೇತ್ರದಲ್ಲಿ ಅಣ್ಣ ತಮ್ಮಂದಿರಂತೆ ಇದ್ದೇವೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿ ಅವರಿಗೆ ಶಿಕ್ಷೆ ಆಗಲಿ. ಆದರೆ ಇದೇ ಸಂದರ್ಭದಲ್ಲಿ ನಿರಪರಾಧಿಗಳಿಗೆ ಶಿಕ್ಷೆ ಆಗದಂತೆ ನಾನು ಮುಖ್ಯ,ಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿ ಕೊಳ್ಳುತ್ತೇನೆ ಎಂದಿದ್ದಾರೆ.
ನಿರಪರಾಧಿಗಳನ್ನು ಹಿಡಿದುಕೊಂಡು ಹೋಗುತ್ತಿದ್ದಾರೆಂದು ಸ್ಥಳೀಯರು ದೂರುತ್ತಿದ್ದಾರೆ. ಪೋಲೀಸರ ಬಳಿ ನಾನೂ ಮಾತಾಡುತ್ತಿದ್ದೇನೆ. ಪೊಲೀಸರು ವಿಡಿಯೋ ನೋಡಿ ನಿರಪರಾಧಿಗಳನ್ನು ಬಿಟ್ಟುಕಳುಹಿಸುತ್ತಿದ್ದಾರೆ. ಹಾಲು ತರಕಾರಿ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ. ಅವರ ಹೇಳಿಕೆ ಬೆನ್ನಲ್ಲಿಯೇ ಸಚಿವ ಆರ್. ಅಶೋಕ್ ಹೇಳಿಕೆ ಕೊಟ್ಟಿದ್ದಾರೆ.

ಬಿಜೆಪಿಗೆ ಅಖಂಡ ಶ್ರೀನಿವಾಸಮೂರ್ತಿ?
ಗಲಭೆಯ ಮರುದಿನ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ನಾಯಕರನ್ನು ಕಡೆಗಣಿಸಿದಂತೆ ಕಂಡು ಬಂದಿತ್ತು. ಹೀಗಾಗಿ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎಂಬಂತೆ ಬಿಂಬಿಸಲಾಗಿತ್ತು. ಆದರೆ ಇದೀಗ ಬಿಜೆಪಿ ನಾಯಕರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ ಎಸ್ಡಿಪಿಐ ಕುರಿತು ಆರ್. ಅಶೋಕ್ ಮಾತನಾಡಿದ್ದಾರೆ.
ಎಸ್ಡಿಪಿಐ ಬ್ಯಾನ್ ಮಾಡಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಬೇಕು. ಆದರೆ ಅದನ್ನು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ ಎಂದಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಸೆಳೆಯಲು ಬಿಜೆಪಿ ಒತ್ತಡ ಹಾಕುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿರುವ ಸಚಿವ ಆರ್. ಅಶೋಕ್ ಅವರು, ಅಖಂಡ ಶ್ರೀನಿವಾಸಮೂರ್ತಿ ಅವರನ್ನ ಬಿಜೆಪಿಗೆ ಕರೆಯೋದೇ ಇಲ್ಲ. ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳು ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಕ್ತದಲ್ಲಿಯೇ ಕಾಂಗ್ರೆಸ್ ಇದೆ
ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸೂಕ್ತ ಭದ್ರತೆ ಕೊಡುವಂತೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿರುವ ಅವರು, ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ನಮ್ಮ ತಂದೆಯೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ನಾನೂ ಕಾಂಗ್ರೆಸ್ ಪಕ್ಷ ಬಿಡೋ ಮಾತೇ ಇಲ್ಲ. ನನ್ನ ರಕ್ತದಲ್ಲಿ ಇರೋದು ಕಾಂಗ್ರೆಸ್ ಪಕ್ಷ ಎಂದಿದ್ದಾರೆ.
ಹೀಗಾಗಿ ನಾನಂತು ಕಾಂಗ್ರೆಸ್ ಬಿಡಲ್ಲ. ಆದರೆ ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ನನ್ನ ರಕ್ಷಣೆಗೆ ಬರಬೇಕು ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ.

ಸಿಬಿಐ ತನಿಖೆ ಬಗ್ಗೆ ಚರ್ಚೆ ಆಗಿಲ್ಲ
ಪ್ರಕರಣದ ತನಿಖೆಯನ್ನು ಬೇರೆ ಯಾವುದೇ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ. ಗೋಲಿಬಾರ್ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಿದ್ದಾರೆ. ಉಳಿದಂತೆ ಪ್ರಕರಣದ ಕಾರಣಗಳ ಬಗ್ಗೆ ಸಿಸಿಬಿ ತನಿಖೆ ನಡೆಯುತ್ತಿದೆ. ಪ್ರಸ್ತುತ ಇವೆರಡೇ ತನಿಖೆಗಳಿಗೆ ಸರ್ಕಾರದ ಬದ್ಧವಾಗಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದಾರೆ.
ಸಿಬಿಐ, ಎನ್ಐಎ ತನಿಖೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ತನಿಖೆಗಳ ಅಗತ್ಯ ಈಗ ಕಂಡು ಬಂದಿಲ್ಲ ಎಂದಿದ್ದಾರೆ.

ಅನುಮಾನಾಸ್ಪದ ವ್ಯಕ್ತಿ ವಶಕ್ಕೆ
ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಾಸ್ಪದ ವರ್ತನೆ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪೊಲೀಸರ ವಶದಲ್ಲಿರುವ ಯುವಕ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮುಂದೆ ಫೋಟೋ ಹಾಗೂ ವೀಡಿಯೋ ಚಿತ್ರೀಕರಣ ಮಾಡಿ ಶೇರ್ ಮಾಡುತ್ತಿದ್ದ ಎನ್ನಲಾಗಿದೆ. ಎಸಿಪಿ ನೇತೃತ್ವದಲ್ಲಿ ಶಂಕಿತ ವ್ಯಕ್ತಿಯನ್ನ ವಶಕ್ಕೆ ಪಡೆದ ಪೊಲೀಸರು ತನಿಖೆ ಮಾಡಿದ್ದಾರೆ.












Click it and Unblock the Notifications