ಮತ್ತೆ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿದ ಸಿಎಂ ಪುತ್ರ ವಿಜಯೇಂದ್ರ
ಬೆಂಗಳೂರು, ಫೆ 22: ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ.
ಕಳೆದ ಎರಡು ವಾರದಲ್ಲಿ ಸಿದ್ದರಾಮಯ್ಯನವರ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡುತ್ತಿರುವುದು ಇದು ಎರಡನೆಯ ಬಾರಿ. ಸಂಪುಟ ವಿಸ್ತರಣೆಗೆ ಆಹ್ವಾನಿಸಲು ವಿಜಯೇಂದ್ರ, ಸಿದ್ದರಾಮಯ್ಯ ನಿವಾಸಕ್ಕೆ ಈ ಹಿಂದೆ ಹೋಗಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪನವರ ಜನ್ಮದಿನವನ್ನು ಅವರ ಅಭಿಮಾನಿಗಳು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ "ದಣಿವರಿಯದ ಧೀಮಂತ' ಎನ್ನುವ ಹೆಸರನ್ನು ಇಡಲಾಗಿದೆ.

ಇದೇ ಫೆಬ್ರವರಿ 27ರಂದು ಯಡಿಯೂರಪ್ಪ 78ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಸಂಬಂಧ ಬೆಂಗಳೂರು ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪಕ್ಷಾತೀತವಾಗಿ ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಈ ಸಂಬಂಧ, ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಲು ಅವರ ಮನೆಗೆ ತೆರಳಿದ್ದರು.
ಎಸ್.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಬಿ.ಎಲ್.ಸಂತೋಷ್ ಆದಿಯಾಗಿ ಎಲ್ಲಾ ಪಕ್ಷದ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.












Click it and Unblock the Notifications