ಕರ್ನಾಟಕ; ರಾಜ್ಯಸಭಾ ಉಪ ಚುನಾವಣೆ ಗೆದ್ದ ಬಿಜೆಪಿ
ಬೆಂಗಳೂರು, ಡಿಸೆಂಬರ್ 5 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ನಿಗದಿಯಾಗಿದ್ದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದರು.
ಗುರುವಾರ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ, ರಾಜ್ಯಸಭಾ ಚುನಾವಣೆ ಚುನಾವಣಾಧಿಕಾರಿ ಈ ಕುರಿತು ಅಧಿಕೃತ ಘೋಷಣೆ ಮಾಡಿದರು. ನಾಮಪತ್ರಗಳನ್ನು ವಾಪಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಒಬ್ಬರೇ ಅಭ್ಯರ್ಥಿ ಕಣದಲ್ಲಿ ಉಳಿದ ಕಾರಣ ಅವಿರೋಧ ಆಯ್ಕೆ ಎಂದು ಘೋಷಿಸಲಾಯಿತು.
ಬಿಜೆಪಿ ಅಭ್ಯರ್ಥಿಯಾಗಿ ಕೆ. ಸಿ. ರಾಮಮೂರ್ತಿ ನಾಮಪತ್ರವನ್ನು ಸಲ್ಲಿಸಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
ಪಕ್ಷೇತರ ಅಭ್ಯರ್ಥಿಗಳಾಗಿ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಆದರೆ, ನಾಮಪತ್ರಕ್ಕೆ ಸೂಚಕರಾಗಿ ಯಾವುದೇ ಶಾಸಕರ ಸಹಿ ಇಲ್ಲದ ಕಾರಣ ಪರಿಶೀಲನೆ ವೇಳೆ ತಿರಸ್ಕರಿಸಲಾಯಿತು. ಡಿಸೆಂಬರ್ 12ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಕೆ. ಸಿ. ರಾಮಮೂರ್ತಿ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದ್ದಾರೆ.

ಕೆ. ಸಿ. ರಾಮಮೂರ್ತಿ ರಾಜ್ಯಸಭೆಗೆ ಆಯ್ಕೆ
ಬೆಂಗಳೂರಿನ ನಿವಾಸಿ ಕೆ. ಸಿ. ರಾಮಮೂರ್ತಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅವಿರೋಧವಾಗಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯಸಭಾ ಸದಸ್ಯತ್ವದ ಅವಧಿ 2022ರ ಜೂನ್ ತನಕ ಇದೆ. ಕೆ. ಸಿ. ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವರೇ ಜಯಗಳಿಸಿದ್ದಾರೆ.

ಅಭ್ಯರ್ಥಿಯನ್ನೇ ಹಾಕಲಿಲ್ಲ
ರಾಜ್ಯಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಿಲ್ಲ. ಬಿಜೆಪಿ ಪ್ರಸ್ತುತ ವಿಧಾನಸಭೆಯಲ್ಲಿ 105 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುವುದು ಸಾಧ್ಯವಿರಲಿಲ್ಲ. ಆದ್ದರಿಂದ, ಚುನಾವಣೆಗೆ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಿಲ್ಲ.

ಮಾಜಿ ಐಪಿಎಸ್ ಅಧಿಕಾರಿ
ಕೆ. ಸಿ. ರಾಮಮೂರ್ತಿ ನಿವೃತ್ತ ಐಪಿಎಸ್ ಅಧಿಕಾರಿ. ಬೆಂಗಳೂರಿನಲ್ಲಿರುವ ಸಿಎಂಆರ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು. 2016ರಲ್ಲಿ ಕಾಂಗ್ರೆಸ್ ಸೇರಿದ್ದ ಅವರು, ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ, ಅವಧಿ ಮುಗಿಯುವ ಮುನ್ನವೇ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿತ್ತು.

ಕಾಂಗ್ರೆಸ್ ಬಿಟ್ಟದ್ದ ರಾಮಮೂರ್ತಿ
ಅಕ್ಟೋಬರ್ 16ರಂದು ಕೆ. ಸಿ. ರಾಮಮೂರ್ತಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ಬಿಜೆಪಿ ಸೇರಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಉಪ ಚುನಾವಣೆಗೆ ಸ್ಫರ್ಧೆ ಮಾಡಿದ್ದರು.












Click it and Unblock the Notifications