ಬಿಹಾರ ಮಾದರಿ ಕರ್ನಾಟಕದಲ್ಲೂ ಜಾತಿ ಗಣತಿ ನಡೆಸುವಂತೆ ಬಿಕೆ ಹರಿಪ್ರಸಾದ್ ಆಗ್ರಹ
ಬೆಂಗಳೂರು, ಅಕ್ಟೋಬರ್ 03: ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಸರ್ಕಾರ ಜಾತಿಗಣತಿ ನಡೆಸಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಬಿಕೆ ಹರಿಪ್ರಸಾದ್ ಅವರು ಶ್ಲಾಘಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು "ಇಂಡಿಯಾ"ಮೈತ್ರಿ ಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರ್ಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ,ಶೋಷಿತವೂ ಸೇರಿದಂತೆ ಎಲ್ಲಾ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರೆದು ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗ ಪಡಿಸುವ ದಿಟ್ಟತನ ತೋರಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಗಾಂಧಿ ಜಯಂತಿಯಂದು ಬಿಹಾರದ ಜಾತಿ ಗಣತಿ ಸಮೀಕ್ಷೆಯ ಅಂಕಿಅಂಶಗಳು ಬಿಡುಗಡೆಯಾಗಿವೆ. ಇದೇ ರೀತಿಯ ಜಾತಿ ಗಣತಿಯನ್ನು ರಾಷ್ಟ್ರದಾದ್ಯಂತ ನಡೆಸುವಂತೆ ಒತ್ತಡಗಳು ಹೆಚ್ಚಿವೆ. ಜಾತಿ ಗಣತಿ ಮೂಲಕ ಜನಸಂಖ್ಯೆಗೆ ಆಧಾರವಾಗಿ ಸೌಲಭ್ಯ ಹಂಚಿಕೆ ಮಾಡಲು ಇದು ನೆರವಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ.
ಬಿಹಾರ ಸಿಎಂ ಕಳೆದ ಹಲವಾರು ತಿಂಗಳ ಹಿಂದೆಯೇ ರಾಜ್ಯದಲ್ಲಿ ಕೈಗೊಂಡಿದ್ದ ಈ ಸಮೀಕ್ಷೆಗೆ ವಿರೋಧ ಪಕ್ಷ ಬಿಜೆಪಿಯು ವಿರೋಧ ವ್ಯಕ್ತಪಡಿಸಿತ್ತು. ಜಾತಿ ಸಮೀಕ್ಷೆ ಹೊರ ಬಂದ ಬಳಿಕ ಈಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ರಾಜ್ಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಇಲ್ಲಿ ಕಳೆದ ವರ್ಷ ಜೂನ್ನಲ್ಲಿ ತಮ್ಮ ಸರ್ಕಾರ ಆದೇಶಿಸಿದ್ದ ಸಮೀಕ್ಷೆಯ ಫಲಿತಾಂಶವನ್ನು ಸಿಎಂ ಔಪಚಾರಿಕವಾಗಿ ಮಂಡಿಸುವ ನಿರೀಕ್ಷೆಯಿದೆ.
ರಾಜ್ಯ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ರಾಜ್ಯದ ಕನಿಷ್ಠ ಒಂಬತ್ತು ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯ ವಿಧಾನಸಭೆಯಲ್ಲಿ ಅಸ್ತಿತ್ವವನ್ನು ಹೊಂದಿರುವ ಎಲ್ಲಾ ಒಂಬತ್ತು ಪಕ್ಷಗಳ ಪ್ರತಿನಿಧಿಗಳ ಮುಂದೆ ನಾನು ಸಮೀಕ್ಷೆಯ ಫಲಿತಾಂಶಗಳನ್ನು ಮಂಡಿಸುತ್ತೇನೆ. ಈ ಸಭೆಯಲ್ಲಿ ಜಾತಿ ಸಮೀಕ್ಷೆಗೆ ಒಪ್ಪಿಗೆ ನೀಡಿದ ನಾಯಕರೂ ಸೇರಿದ್ದಾರೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಭಾರತದಲ್ಲಿ 1932ರ ಬಳಿಕ ಜಾತಿವಾರು ಗಣತಿ ನಡೆದಿಲ್ಲ. ವಿವಿಧ ಧರ್ಮ, ಜಾತಿ, ಉಪ ಜಾತಿಗಳ ಜನಸಂಖ್ಯೆ ಎಷ್ಟಿದೆ ಎಂಬ ನಿಖರವಾದ ಅಂಕಿಅಂಶಗಳಿಲ್ಲ. ಇದನ್ನು ಅರಿಯುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗುವುದು ಎಂದು ಕಳೆದ ಜೂನ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.












Click it and Unblock the Notifications