ಕಾಂಗ್ರೆಸ್ನಲ್ಲಿ ಬ್ಲಾಕ್ಮೇಲ್ ಕೆಲಸ ಮಾಡಲ್ಲ ಎಂದ ಡಿಕೆ ಶಿವಕುಮಾರ್, ಹೀಗೇಳಿದ್ಯಾಕೆ?
ಬೆಂಗಳೂರು, ಏಪ್ರಿಲ್ 3: ವಿಧಾನಸಭಾ ಚುನಾವಣೆ ಟಿಕೆಟ್ಗಾಗಿ ಆಂತರಿಕ ಕಚ್ಚಾಟದ ವಿರುದ್ಧ ಕಠಿಣವಾಗಿ ಮಾತನಾಡಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬ್ಲಾಕ್ಮೇಲಿಂಗ್ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಶಿವಕುಮಾರ್ ಪ್ರತಿಕ್ರಿಯಿಸಿದರು. ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಕೈ ಮೀರಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಕೈ-ಕೈ ಮಿಲಾಯಿಸಿಕೊಂಡಿದ್ದರು.

ಕಾಂಗ್ರೆಸ್ನಲ್ಲಿ ಬ್ಲ್ಯಾಕ್ಮೇಲ್ ಕೆಲಸ ಮಾಡುವುದಿಲ್ಲ. ಕೆಲವು ಕ್ಷೇತ್ರಗಳಲ್ಲಿ ಹಲವಾರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇಂತಹ ಸಮಸ್ಯೆಗಳು ಎಲ್ಲ ಪಕ್ಷಗಳಲ್ಲೂ ಇವೆ. ಬಿಜೆಪಿಯಲ್ಲಿ ಅದು ಇಲ್ಲ ಎಂದು ನೀವು ಭಾವಿಸುತ್ತೀರಾ? ಅವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಏಕೆ ಬಾಕಿ ಉಳಿಸಿಕೊಂಡಿದ್ದಾರೆ? ಬಿಜೆಪಿ ಮತ್ತು ಜೆಡಿಎಸ್ನಲ್ಲೂ ಸಾಕಷ್ಟು ಆಂತರಿಕ ಸಮಸ್ಯೆಗಳಿವೆ ಎಂದು ಶಿವಕುಮಾರ್ ಹೇಳಿದರು.
ಟಿಕೆಟ್ಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಏಪ್ರಿಲ್ 4 ರಂದು ಸಭೆ ಸೇರಲಿದ್ದು, ಕಾಂಗ್ರೆಸ್ ಹಲವಾರು ವಿಭಾಗಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹರಸಾಹಸ ಮಾಡುತ್ತಿದೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಗ್ಗ ಜಗ್ಗಾಟ ನಡೆದಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಉದಾಹರಣೆಗೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ನಾಯಕ ಎಚ್ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದು ಶಿವಕುಮಾರ್ ಬಯಸಿದ್ದರೆ, ಸಿದ್ದರಾಮಯ್ಯ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗಿದೆ. ತರೀಕೆರೆಯಲ್ಲಿಯೂ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿತ ತಲಾ ಇಬ್ಬರು ಆಕಾಂಕ್ಷಿಗಳಿದ್ದಾರೆ. ಈ ಎಲ್ಲದರಲ್ಲೂ ಜಾತಿ ಸಂಯೋಜನೆಯನ್ನು ಸರಿ ಪಡಿಸುವ ಸವಾಲು ಕಾಂಗ್ರೆಸ್ಗೆ ಎದುರಾಗಿದೆ.

ಹುಬ್ಬಳ್ಳಿ-ಧಾರವಾಡ (ಪಶ್ಚಿಮ)ದಲ್ಲಿ ಬಿಜೆಪಿಯ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರಿಗೆ ಟಿಕೆಟ್ ಸಿಗುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಇಷ್ಟವಿಲ್ಲ. ಸಿ.ವಿ.ರಾಮನ್ ನಗರದಲ್ಲಿ ಮಾಜಿ ಮೇಯರ್ ಆರ್.ಸಂಪತ್ ರಾಜ್ ಅವರಿಗೆ ಟಿಕೆಟ್ ನೀಡುವುದಕ್ಕೆ ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜಾಜಿನಗರದಲ್ಲಿ ಬಿಜೆಪಿಯ ಮಾಜಿ ಎಂಎಲ್ ಸಿ ಪುಟ್ಟಣ್ಣ ಅವರಿಗೆ ಟಿಕೆಟ್ ಸಿಗುವುದಕ್ಕೆ ವಿರೋಧ ವ್ಯಕ್ತವಾಗಿತ್ತು.
ಬೇಲೂರು, ಅರಕಲಗೂಡು, ತುಮಕೂರು ನಗರ, ಮಂಗಳೂರು ನಗರ (ದಕ್ಷಿಣ), ಕೆಆರ್ ಪುರಂ, ಯಶವಂತಪುರ ಮತ್ತಿತರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ವರುಣಾದ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಅವರ ಒಲವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಜನರು ಕೇಳುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ (ಎರಡು ಸ್ಥಾನಗಳಿಂದ ಸ್ಪರ್ಧಿಸಿ) ಆದರೆ ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದನ್ನು ನಾವು ಅನುಸರಿಸಬೇಕು ಎಂದರು.
ಕಾಂಗ್ರೆಸ್ ಶಾಸಕರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್ ಮತ್ತು ಬಿಝಡ್ ಜಮೀರ್ ಅಹಮದ್ ಖಾನ್ ಅವರು ಭಾನುವಾರ ಸಭೆ ನಡೆಸಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಪುಲಿಕೇಶಿನಗರ ಟಿಕೆಟ್ ಖಾತ್ರಿಪಡಿಸುವ ಕುರಿತು ಚರ್ಚಿಸಿದರು. ಮೂಲಗಳ ಪ್ರಕಾರ, ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ಸಿಗುವುದಾಗಿ ಖಾನ್ ಹೇಳಿದ್ದಾರೆ.












Click it and Unblock the Notifications