5 ಮತ್ತು 8 ನೇ ತರಗತಿ ಬೋರ್ಡ್ ಪರೀಕ್ಷೆ; ಸುಪ್ರೀಂ ಮೆಟ್ಟಿಲೇರಿದ ವಿವಾದ
5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿದ ಷರತ್ತುಬದ್ಧ ಅನುಮತಿಯನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 20; ಕರ್ನಾಟಕದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿವಾದ ಸದ್ಯಕ್ಕೆ ಬಗೆಹರಿಸುವ ಸಾಧ್ಯತೆಗಳು ಕಾಣುತ್ತಿಲ್ಲ. ಪರೀಕ್ಷೆಗೆ ಒಪ್ಪಿಗೆ ನೀಡಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದೆ, ಅಲ್ಲದೇ ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಲಾಗಿದೆ.
ಸೋಮವಾರ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿದ ಷರತ್ತುಬದ್ಧ ಅನುಮತಿಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಿದೆ. ಅರ್ಜಿಯ ತುರ್ತು ವಿಚಾರಣೆಗೆ ಕೋರ್ಟ್ಗೆ ಮನವಿ ಮಾಡಲಾಗಿತ್ತು. ಕೋರ್ಟ್ ಮಾರ್ಚ್ 27ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತು. ಖಾಸಗಿ ಶಾಲೆಗಳ ಪರವಾಗಿ ವಾದ ಮಂಡನೆ ಮಾಡಿದ ವಕೀಲರು ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರಿಂದ ಮೌಲ್ಯ ಮಾಪನ ವಿಧಾನವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮೌಲ್ಯಾಂಕನ ಪರೀಕ್ಷೆ ನಡೆಸುವ ಕುರಿತು ಸರ್ಕಾರವು ಪೋಷಕರು, ಶಾಲೆಗಳ ಜೊತೆ ಯಾವುದೇ ಸಭೆ ನಡೆಸಿಲ್ಲ ಎಂದರು.
ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಮಾರ್ಚ್ 27ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದರು. ಖಾಸಗಿ ಶಾಲೆಗಳ ಪರ ವಕೀಲರು ನಾವು 4 ಸಾವಿರ ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ಮಾರ್ಚ್ 27ರಿಂದ ಪರೀಕ್ಷೆ ಆರಂಭವಾಗಲಿದೆ. ಅದಕ್ಕೂ ಮೊದಲೇ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಆದರೆ ಸಿಜೆಐ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯದಲ್ಲಿ ಉತ್ತಮ ಪರೀಕ್ಷೆ ವಿಧಾನ ಯಾವುದು ಎಂದು ಹೈಕೋರ್ಟ್ಗೆ ಗೊತ್ತಿದೆ ಎಂದು ಹೇಳಿದರು.

ಏನಿದು ಪ್ರಕರಣ?; ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ ಕರ್ನಾಟಕ ಸರ್ಕಾರ 2022ರ ಡಿಸೆಂಬರ್ 12, 13 ಮತ್ತು 2023ರ ಜನವರಿ 4ರಂದು ಸುತ್ತೋಲೆ ಹೊರಡಿಸಿತ್ತು. ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಹಾಗೂ ಇತರರು ಇದನ್ನು ರದ್ದುಪಡಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ಪುರಸ್ಕರಿಸಿ, ಬೋರ್ಡ್ ಪರೀಕ್ಷೆ ನಡೆಸುವ ಆದೇಶವನ್ನು ರದ್ದುಗೊಳಿಸಿತ್ತು.
ಕರ್ನಾಟಕ ಸರ್ಕಾರ ಈ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನೆ ಮಾಡಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ನ್ಯಾಯಮೂರ್ತಿ ನರೇಂದರ್ ಹಾಗೂ ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿತ್ತು. ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಷರತ್ತು ಬದ್ಧ ಅನುಮತಿಯನ್ನು ನೀಡಿತ್ತು. ಮಾರ್ಚ್ 27ರಿಂದ ಪರೀಕ್ಷೆಗಳನ್ನು ನಡೆಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಹೇಳಿತ್ತು. ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಈ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಕೆ ಮಾಡಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠ ಸದ್ಯ ಬೋರ್ಡ್ ಪರೀಕ್ಷೆಗೆ ಸಿದ್ಧಪಡಿಸಿರುವ ಪ್ರಶ್ನೆಪತ್ರಿಕೆಗಳಲ್ಲಿ ಪಠ್ಯಕ್ರಮದಿಂದ ಹೊರತಾದ ಯಾವುದಾದರೂ ಪ್ರಶ್ನೆಗಳು ಇವೆಯೇ?. ಇಲ್ಲವೇ? ಎಂಬುದನ್ನು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ. ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು, ಕಲಿಕಾ ಚೇತರಿಕೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಅನ್ವಯ ಆಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಇದರನ್ವಯ ಪ್ರಶ್ನೆಗಳನ್ನು ಉತ್ತರಿಸಲು ಮಕ್ಕಳಿಗೆ ಕಷ್ಟವಾಗುತ್ತದೆ ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು.












Click it and Unblock the Notifications