ನಿಗಮ-ಮಂಡಳಿ ಕಗ್ಗಂಟು ಬಿಡಿಸಲು ಸಿಂಗ್ ಸೂತ್ರ
ಬೆಂಗಳೂರು, ಅ. 16 : ನಿಗಮ ಮಂಡಳಿ ನೇಮಕದ ಬಗ್ಗೆ ಅಕ್ಟೋಬರ್ ಅಂತ್ಯದೊಳಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದು ದಿಗ್ವಿಜಯ್ ಸಿಂಗ್ ಸೂಚನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಸಿಂಗ್ ಹೇಳಿದ್ದಾರೆ.
ಗುರುವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕುಮಾರಕೃಪಾ ಅತಿಥಿ ಗೃಹದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನಿಗಮ ಮಂಡಳಿಗಳ ನೇಮಕಾತಿ ಕುರಿತು ನಾಯಕರು ಚರ್ಚೆ ನಡೆಸಿದ್ದಾರೆ.

ಈ ವೇಳೆ ಅಕ್ಟೋಬರ್ ಅಂತ್ಯದೊಳಗೆ ನಿಗಮ-ಮಂಡಳಿ ನೇಮಕಾತಿ ಪೂರ್ಣಗೊಳಿಸುವಂತೆ ದಿಗ್ವಿಜಯ್ ಸಿಂಗ್ ಸೂಚನೆ ನೀಡಿದ್ದಾರೆ. ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರಿಗೆ ಸ್ಥಾನನೀಡಬಾರದು ಎಂದು ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು, ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ. [ನಿಗಮ-ಮಂಡಳಿ ನೇಮಕಕ್ಕೆ ಎಐಸಿಸಿ ಮಾರ್ಗಸೂಚಿಗಳು]
ಪರಮೇಶ್ವರ್ಗೆ ಸಚಿವ ಸ್ಥಾನ : ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು, ತಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿ ಎಂದು ಕೇಳಿಲ್ಲ, ಬದಲಾಗಿ ಅವರ ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದರು. [ನಿಗಮ-ಮಂಡಳಿ ನೇಮಕ ಮತ್ತಷ್ಟು ವಿಳಂಬ]

ಇಡ್ಲಿ, ವಡೆ ತಿಂದ ಸಿಎಂ, ಪರಂ : ದಿಗ್ವಿಜಯ್ ಸಿಂಗ್ ಭೇಟಿ ಬಳಿಕ ಒಂದೇ ಕಾರಿನಲ್ಲಿ ಹೊರಟ ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಶಿವಾನಂದ ಸರ್ಕಲ್ ಬಳಿಯ ಜನಾರ್ದನ್ ಹೋಟೆಲ್ನಲ್ಲಿ ಒಟ್ಟಿಗೆ ಇಡ್ಲಿ, ವಡೆ ತಿಂದರು. ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪರಮೇಶ್ವರ್ ಹೇಳಿದರು.












Click it and Unblock the Notifications