2.5 ಮಿಲಿಯನ್ ಡಾಲರ್ ಹಣಕ್ಕೆ ಡಿಮ್ಯಾಂಡ್; ಡಿಸಿಎಂ, ಸಿಎಂಗೆ ಬಾಂಬ್ ಬೆದರಿಕೆ
ಬೆಂಗಳೂರು, ಮಾರ್ಚ್ 06: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಆತಂಕ ಇರುವಾಗಲೇ ಬಾಂಬ್ ಬೆದರಿಕೆಯ ಮೇಲ್ ಸರ್ಕಾರಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವರಿಗೆ ಬೆದರಿಕೆಯ ಮೇಲ್ ಬಂದಿದ್ದು, ಭಯ ಹುಟ್ಟಿಸುವಂತೆ ಮಾಡಿದೆ.
ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ,ಎರಡು ಮೂರು ದಿನಗಳ ಹಿಂದೆಯೇ ಬಂದಿದ್ದು, ಇದನ್ನು ಬಹಿರಂಗಗೊಳಿಸಿರಲಿಲ್ಲ. ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಈ ಮೇಲ್ ಶಾಹಿರ್ ಖಾನ್10786 ಎಂಬ ಇ ಮೇಲ್ ಮೂಲಕ ನಮಗೆ 5 ಮಿಲಿಯನ್ ಡಾಲರ್ ಹಣ ಹಾಕದಿದ್ದರೆ ಬಸ್, ರೈಲು, ದೇವಾಲಯ, ಹೋಟೆಲ್ ಸೇರಿದಂತೆ ಕರ್ನಾಟಕದಾದ್ಯಂತ ಸ್ಫೋಟ ನಡೆಸುತ್ತೇವೆ. ಅಂಬಾರಿ ಉತ್ಸವ್ ಬಸ್ ಸ್ಫೋಟಗೊಳಿಸಿ ಮತ್ತೊಂದು ಟ್ರೇಲರ್ ತೋರಿಸುತ್ತೇವೆ.

ನಂತರ ನಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸುತ್ತೇವೆ ಎಂದು ಎರಡು ಮೇಲ್ ಗಳಲ್ಲಿ ತಿಳಿಸಿದ್ದಾನೆ. ಇದು ಬೋಗಸ್ ಅಥವಾ ನಿಜವೋ ಗೊತ್ತಿಲ್ಲ. ನಾವು ಮೇಲ್ ಬಂದ ಕೂಡಲೇ ಪೊಲೀಸರಿಗೆ ಕಳುಹಿಸಿದ್ದು ಅವರು ತನಿಖೆ ನಡೆಸುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಏನಾದರೂ ಆಗಲಿ ಬೆಂಗಳೂರಿಗೆ ನೀರು ಪೂರೈಸುತ್ತೇವೆ
ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಈ ರೀತಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆಗ್ರಹಿಸಿ ನೀರಿಗಾಗಿ ನಡಿಗೆ ಪಾದಯಾತ್ರೆ ಮಾಡಿದೆವು.
ಬೆಂಗಳೂರಿನ ಪರಿಸ್ಥಿತಿಯನ್ನು ಕಂಡು ಕೇಂದ್ರ ಸರ್ಕಾರ ಈಗಲಾದರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಸಮಸ್ಯೆಗೆ ಪರಿಹಾರ ನೀಡಬೇಕು ಒತ್ತಾಯಿಸುತ್ತೇನೆ. ಬರ ಪರಿಸ್ಥಿತಿಯಲ್ಲಿ ನೀರಿನ ಅಭಾವವನ್ನು ನೀಗಿಸಲು. ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಸೇರಿದಂತೆ ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಚರ್ಚೆ ಮಾಡಿದ್ದೇವೆ. ನಗರದಲ್ಲಿ ನೀರು ಇಲ್ಲದಿದ್ದರೆ 15 ಕಿ. ಮೀ ಸುತ್ತಮುತ್ತಲ ನೀರಿನ ಮೂಲಗಳನ್ನು ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ.

ಇದೇ ರೀತಿ ಬೆಂಗಳೂರಿನಲ್ಲೂ ಸೂಚನೆ ನೀಡಿದ್ದೇವೆ. ಬೆಂಗಳೂರಿನಲ್ಲಿ ಕುಡಿಯುವ ನೀರು ಕೊರತೆ ನೀಗಿಸಲು ಹೊಸಕೋಟೆ, ರಾಮನಗರ, ಚನ್ನಪಟ್ಟಣ, ಮಾಗಡಿ, ರಾಮನಗರದಿಂದ ದೊಡ್ಡ ಟ್ಯಾಂಕರ್ ನಲ್ಲಿ ನೀರು ತರಲು ಸೂಚಿಸಿದ್ದೇವೆ. ಕೆಲವು ಟ್ಯಾಂಕರ್ ಗಳು ₹600ಕ್ಕೂ ನೀರು ನೀಡುತ್ತಿದ್ದಾರೆ.
ಮತ್ತೆ ಕೆಲವರು 3 ಸಾವಿರಕ್ಕೂ ನೀಡುತ್ತಿದ್ದಾರೆ. ಹೀಗಾಗಿ ಎಲ್ಲರನ್ನೂ ನೋಂದಣಿ ಮಾಡಿಕೊಳ್ಳಲು ತಿಳಿಸಿದ್ದೇವೆ. ಎಲ್ಲರ ನೋಂದಣಿ ನಂತರ ಎಲ್ಲವನ್ನೂ ಒಂದು ವ್ಯವಸ್ಥೆ ಮೂಲಕ ನೀಡಲಾಗುವುದು. ನೀರನ್ನು ಎಷ್ಟು ದೂರದಿಂದ ತರಲಾಗಿದೆ ಎಂದು ನೋಡಿ ದರ ನಿಗದಿ ಮಾಡುತ್ತೇವೆ."
ನೀರಿನ ಟ್ಯಾಂಕರ್ ವಶಕ್ಕೆ ತೆಗೆದುಕೊಳ್ಳುವುದರಿಂದ ಕೆಲವು ಅಪಾರ್ಟ್ಮೆಂಟ್ ಗಳಿಗೆ ಸಮಸ್ಯೆ ಎದುರಾಗಲಿದೆ ಎಂಬ ವಿಚಾರವಾಗಿ ಮಾತನಾಡಿ, "ನಾವು ಎಲ್ಲರಿಗೂ ನೆರವು ನೀಡುತ್ತೇವೆ. ಅಪಾರ್ಟ್ಮೆಂಟ್ ಗಳಿಗೂ ನಾವು ನೀರನ್ನು ಪೂರೈಸುತ್ತೇವೆ. ಅಪಾರ್ಟ್ಮೆಂಟ್ ನಿವಾಸಿಗಳಾಗಲಿ, ಕೊಳಗೇರಿ ನಿವಾಸಿಗಳಾಗಲಿ ಎಲ್ಲರಿಗೂ ನೆರವಾಗುವುದು ನಮ್ಮ ಕರ್ತವ್ಯ" ಎಂದು ತಿಳಿಸಿದರು.












Click it and Unblock the Notifications