ಗಡಿವಿವಾದ; ಮಹಾರಾಷ್ಟ್ರ ಕನಸು ಎಂದಿಗೂ ನನಸಾಗುವುದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು, ನವೆಂಬರ್ 23: ''ಕರ್ನಾಟಕ ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ'' ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ''ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹ'' ಎಂದಿದ್ದಾರೆ.
ಇನ್ನೂ ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದಿದ್ದಾರೆ.

ಮಹಾರಾಷ್ಟ್ರ ಉಪ ಮುಖಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದೇನು..?
ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ ಮತ್ತು ಯಾವುದೇ ಗಡಿ ಗ್ರಾಮವು ಎಲ್ಲಿಯೂ ಹೋಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳು ಕರ್ನಾಟಕದೊಂದಿಗೆ ವಿಲೀನಗೊಳಿಸಲು ಈ ಹಿಂದೆ ನಿರ್ಣಯ ಅಂಗೀಕರಿಸಿದ್ದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು.
ಈ ಕುರಿತು ದೇವೇಂದ್ರ ಫಡ್ನವೀಸ್ ಮಾತನಾಡಿ, ಈ ಗ್ರಾಮಗಳು 2012 ರಲ್ಲಿ ನೀರಿನ ಕೊರತೆಯ ಸಮಸ್ಯೆಯ ಬಗ್ಗೆ ನಿರ್ಣಯವನ್ನು ಮಂಡಿಸಿದ್ದವು. ಪ್ರಸ್ತುತ ಯಾವುದೇ ಗ್ರಾಮಗಳು ಯಾವುದೇ ನಿರ್ಣಯವನ್ನು ಮಂಡಿಸಿಲ್ಲ ಎಂದು ತಿಳಿಸಿದ್ದಾರೆ.
ಪ್ರಸ್ತುತ ಯಾವುದೇ ಗ್ರಾಮಗಳು ಅಂತಹ (ಕರ್ನಾಟಕದೊಂದಿಗೆ ವಿಲೀನ) ಬೇಡಿಕೆಯನ್ನು ಎತ್ತಿಲ್ಲ, 2012ರ ಬೇಡಿಕೆಯಗಿದೆ. ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ರಾಜ್ಯಕ್ಕೆ ಸೇರಿಸುವ ಪ್ರಯತ್ನಗಳು ಮುಂದುವರೆದಿವೆ. ಆದರೆ ಯಾವುದೇ ಗ್ರಾಮ ಕರ್ನಾಟಕಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ಹೇಳಿದ್ದಾರೆ.
ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ: ಬಸವರಾಜ ಬೊಮ್ಮಾಯಿ
ಇನ್ನೂ ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ, ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡ ತಂಡವನ್ನ ರಚಿಸಲಾಗಿದೆ ಎಂದರು.
ವಕೀಲರ ತಂಡವು ಈಗಾಗಲೇ 2-3 ಬಾರಿ ಸಭೆ ಸೇರಿ ವಿಷಯಗಳ ಬಗ್ಗೆ ಏನು ವಾದ ಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಈ ವಕೀಲರೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದು, ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ಹಾಗೂ ಎಲ್ಲಾ ಪಕ್ಷದ ನಾಯಕರಿಗೆ ಈಗಾಗಲೇ ಪತ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ ಕಳಿಸಿಕೊಡಲಾಗಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.












Click it and Unblock the Notifications