BPL Card: ಬಿಪಿಎಲ್ ಕಾರ್ಡ್ ಇ-ಕೆವೈಸಿ ಕಡ್ಡಾಯ, ಏನು ಮಾಡಬೇಕು?
ಬೆಂಗಳೂರು, ಆಗಸ್ಟ್ 24:ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಕುರಿತು ಈಗಾಗಲೇ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಒಂದು ಬಾರಿ ಎಲ್ಲಾ ಸದಸ್ಯರ ಇ-ಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕಡ್ಡಾಯವಾಗಿದೆ. ಈಗ ಕಾರ್ಡ್ದಾರರಿಗೆ ಈ ಕುರಿತು ಮಾಹಿತಿ ನೀಡಲಾಗುತ್ತಿದೆ.
ಯಾವ ಕಾರ್ಡ್ದಾರರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇ-ಕೆವೈಸಿ ನೋಂದಣಿಯಾಗಿಲ್ಲ ಎಂಬುದನ್ನು ಪರಿಶೀಲಿಸಿ ಈಗ ಮಾಹಿತಿ ನೀಡಲಾಗುತ್ತಿದೆ. ಅಂತಹ ಕುಟುಂಬದವರು ಆಗಸ್ಟ್ 31ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ಸೂಚನೆ ನೀಡಲಾಗುತ್ತಿದೆ.

ಈಗಾಗಲೇ ಇ-ಕೆವೈಸಿ ಕಾರ್ಯ ಪೂರ್ಣಗೊಂಡವರ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಅಲ್ಲದೇ ಇ-ಕೆವೈಸಿ ಆಗದೇ ಇರುವವರ ಪಟ್ಟಿಯನ್ನು ಆಯಾಯ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಪ್ರದರ್ಶಿಸಲಾಗುತ್ತಿದೆ. ಜನರು ಈ ಕುರಿತು ಮಾಹಿತಿ ತಿಳಿದು, ಇ-ಕೆವೈಸಿ ಮಾಡಿಸಬೇಕು ಎಂದು ಮನವಿ ಮಾಡಲಾಗುತ್ತಿದೆ.
ಸಂಪೂರ್ಣ ಉಚಿತ: ಈಗಾಗಲೇ ಇ-ಕೆವೈಸಿಗೆ ಆಗಸ್ಟ್ 31ರ ದಿನಾಂಕ ನಿಗದಿ ಮಾಡಲಾಗಿದೆ. ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸುವುದು ಸಂಪೂರ್ಣವಾಗಿ ಉಚಿತವಾಗಿದೆ ಎಂದು ಪಡಿತರ ಚೀಟಿದಾರರಿಗೆ ಸ್ಪಷ್ಟಪಡಿಸಲಾಗಿದೆ.
ವರ್ತಕರಿಗೆ ಇಲಾಖೆಯಿಂದ ನೀಡಲಾಗಿರುವ ಲಾಗಿನ್ ಐಡಿಯಲ್ಲಿಯೇ ಇ-ಕೆವೈಸಿ ಮಾಡಿಸಬೇಕು, ಎಲ್ಲಾ ಸದಸ್ಯರ ಆಧಾರ್ ದೃಢೀಕರಣವಾಗಬೇಕು. ಸರ್ಕಾರಿ ನೌಕರರು, ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎಂಬ ಆರೋಪವಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ಇಂತಹ ಅನರ್ಹರನ್ನು ಹುಡುಕಿ ಕಾರ್ಡ್ ರದ್ದುಗೊಳಿಸುವ ಕಾರ್ಯವನ್ನು ನಡೆಸಲಾಗುತ್ತಿದೆ.
ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚಿಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಛೇರಿ/ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ತಿಂಗಳು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಪತ್ತೆಗೆ ಸೂಚನೆ ನೀಡಲಾಗಿತ್ತು. ವಿವಿಧ ಇಲಾಖೆಗಳು ಜಂಟಿಯಾಗಿ ಸೇರಿ ಈ ಕಾರ್ಯ ಮಾಡಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿತ್ತು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಕಾರ್ಡ್ ರದ್ದುಗೊಳಿಸಿ ಅರ್ಹರಿಗೆ ಮಾತ್ರ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂಬುದು ಸರ್ಕಾರದ ನಿಲುವಾಗಿದೆ.












Click it and Unblock the Notifications