ಬಿಪಿಎಲ್ ಕುಟುಂಬಗಳಿಗೆ ಪಂಚೆ, ಸೀರೆ ಭಾಗ್ಯ!
ಬೆಂಗಳೂರು, ಜನವರಿ 15 : ಚುನಾವಣೆ ಮೇಲೆ ಕಣ್ಣಿಟ್ಟಿರುವ ಕರ್ನಾಟಕ ಸರ್ಕಾರ ಬಿಪಿಎಲ್ ಕುಟುಂಬಗಳಿಗೆ ಪಂಚೆ ಮತ್ತು ಸೀರೆ ನೀಡುವ ಕುರಿತು ಚಿಂತನೆ ನಡೆಸುತ್ತಿದೆ. ಫೆಬ್ರವರಿಯಲ್ಲಿ ಮಂಡನೆಯಾಗಲಿರುವ ಬಜೆಟ್ನಲ್ಲಿ ಈ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.29ರಂದು ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಜವಳಿ ಸಚಿವ ರುದ್ರಪ್ಪ ಲಮಾಣಿ ಅವರು ಸಭೆಯಲ್ಲಿ ಈ ಕುರಿತ ಪ್ರಸ್ತಾವನೆಯನ್ನು ಮುಂದಿಡಲಿದ್ದಾರೆ.
ಇಂದಿರಾ ಕ್ಯಾಂಟೀನ್ ಆಯ್ತು, ಇದೀಗ ಇಂದಿರಾ ಕ್ಲಿನಿಕ್ ಉದ್ಘಾಟನೆ
ಸಚಿವ ರುದ್ರಪ್ಪ ಲಮಾಣಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಇಂದಿರಾ ವಸ್ತ್ರಭಾಗ್ಯ ಎಂಬ ಯೋಜನೆಯಡಿ ಮಹಿಳೆಯರಿಗೆ ಸೀರೆ ಮತ್ತು ಬೌಸ್ ಪೀಸ್, ಪುರುಷರಿಗೆ ಪಂಚೆ ಮತ್ತು ಶರ್ಟ್ ಪೀಸ್ ನೀಡಲಾಗುತ್ತದೆ' ಎಂದು ಹೇಳಿದ್ದಾರೆ.
'ಪ್ರತಿ ವರ್ಷ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬ ಸದಸ್ಯರಿಗೆ ಸೀರೆ, ಪಂಚೆ ವಿತರಣೆ ಮಾಡಲು ಯೋಜನೆ ರೂಪಿಸಲಾಗಿದೆ. ಸಿದ್ದರಾಮಯ್ಯ ಅವರು ಫೆ.16ರಂದು ಮಂಡಿಸುವ ಬಜೆಟ್ನಲ್ಲಿ ಯೋಜನೆ ಘೋಷಣೆಯಾಗುವ ಸಾಧ್ಯತೆ ಇದೆ' ಎಂದು ಸಚಿವರು ತಿಳಿಸಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದೆ. ಆದ್ದರಿಂದ, ವಿವಿಧ ಸಚಿವರು ಬಜೆಟ್ನಲ್ಲಿ ಜನಪ್ರಿಯ ಯೋಜನೆ ಘೋಷಣೆ ಮಾಡಲು ಮುಖ್ಯಮಂತ್ರಿಗಳ ಮುಂದೆ ಬೇಡಿಕೆ ಇಡಲಿದ್ದಾರೆ. ಯಾವುದಕ್ಕೆ ಸಿದ್ದರಾಮಯ್ಯ ಒಪ್ಪಿಗೆ ನೀಡಲಿದ್ದಾರೆ ಎಂದು ಕಾದು ನೋಡಬೇಕು.
ಕರ್ನಾಟಕ ಸರ್ಕಾರದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಇಂದಿರಾ ಕ್ಲಿನಿಕ್ ಸಹ ಆರಂಭವಾಗಿದೆ. ಈಗ ಇಂದಿರಾ ವಸ್ತ್ರ ಭಾಗ್ಯ ಎಂಬ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.