Prashant Madal; ಲೋಕಾಯುಕ್ತ ಪೊಲೀಸರ ವಶಕ್ಕೆ ಪ್ರಶಾಂತ್ ಮಾಡಾಳ್
40 ಲಕ್ಷ ರೂ. ಲಂಚ ಪ್ರಕರಣದ ಆರೋಪಿ ಪ್ರಶಾಂತ್ ಮಾಡಾಳ್ರನ್ನು ಮೂರು ದಿನಗಳ ಕಾಲ ಲೋಕಾಯುಕ್ತರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು, ಮಾರ್ಚ್ 13; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ಗೆ ಲಂಚ ಪ್ರಕರಣದ ಆರೋಪಿ ಪ್ರಶಾಂತ್ ಮಾಡಾಳ್ರನ್ನು ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 2ರ ಗುರುವಾರ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದರು. ರಾಜ್ಯದಲ್ಲಿ ಈ ಲಂಚ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ.
ಸೋಮವಾರ ನ್ಯಾಯಾಲಯ ಪ್ರಶಾಂತ್ ಮಾಡಾಳ್ರನ್ನು ಮೂರು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ. ಮಾರ್ಚ್ 3ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.

40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶಾಸಕರ ಖಾಸಗಿ ಕಚೇರಿಯಲ್ಲಿ ಪ್ರಶಾಂತ್ ಮಾಡಾಳ್ ಬಂಧಿಸಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಎಂದು ಲೋಕಾಯುಕ್ತರು ಎಫ್ಐಆರ್ ದಾಖಲು ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ಶಾಸಕರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಶಾಂತ್ ಮಾಡಾಳ್ ತಂದೆ ಕೆ. ಮಾಡಾಳು ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದರು. ರಾಸಾಯನಿಕ ಪೂರೈಕೆ ಮಾಡುವ ಟೆಂಡರ್ಗೆ ಪ್ರಶಾಂತ್ ಮಾಡಾಳ್ 80 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು, 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದರು. ಆದರೆ ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.
ಲಂಚ ಪ್ರಕರಣ ಬೆಳಕಿಗೆ ಬಂದ ಬಳಿಕ ಕೆ. ಮಾಡಾಳು ವಿರೂಪಾಕ್ಷಪ್ಪ ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುವಾಗ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಷರತ್ತು ಹಾಕಿತ್ತು. ಗುರುವಾರ ಮತ್ತು ಶುಕ್ರವಾರ ಕೆ. ಮಾಡಾಳು ವಿರೂಪಾಕ್ಷಪ್ಪ ವಕೀಲರ ಜೊತೆ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದರು. ತನಿಖಾಧಿಕಾರಿ ಅಂಥೋನಿ ಜಾನ್ ಲೋಕಾಯುಕ್ತ ಕಚೇರಿಯ ಮೂರನೇ ಮಹಡಿಯಲ್ಲಿ ಶಾಸಕರ ವಿಚಾರಣೆ ನಡೆಸಿದ್ದರು.

ಈ ಲಂಚ ಪ್ರಕರಣದಲ್ಲಿ ಇದುವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಶಾಂತ್ ಮಾಡಾಳ್, ಅವರ ಸಂಬಂಧಿ ಸಿದ್ದೇಶ್, ಅಕೌಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕಲೋಸ್, ಗಂಗಾಧರ್ ಬಂಧನವಾಗಿದೆ. ಎಲ್ಲಾ ಆರೋಪಿಗಳನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು 7 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು.
ಲೋಕಾಯುಕ್ತರು ಕೆಎಸ್ಡಿಎಲ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಕೆ. ಮಾಡಾಳು ವಿರೂಪಾಕ್ಷಪ್ಪ ವಿಚಾರಣೆ ನಡೆಸಿದ ಬಳಿಕ ಲೋಕಾಯುಕ್ತರು ಈಗ ಪ್ರಶಾಂತ್ ಮಾಡಾಳ್ ವಿಚಾರಣೆ ಮಾಡುತ್ತಿದ್ದಾರೆ. ಕೆಎಸ್ಡಿಎಲ್ ಕಚೇರಿಗೆ ಕೆ. ಮಾಡಾಳು ವಿರೂಪಾಕ್ಷಪ್ಪ ಕೋರ್ಟ್ ಅನುಮತಿ ಇಲ್ಲದೇ ಭೇಟಿ ನೀಡುವಂತಿಲ್ಲ ಎಂದು ಸಹ ಹೈಕೋರ್ಟ್ ಷರತ್ತು ಹಾಕಿದೆ. ರಾಜ್ಯದಲ್ಲಿಯೇ ತೀವ್ರ ಚರ್ಚೆಗೆ ಕಾರಣವಾಗಿರುವ ಪ್ರಕರಣದ ತನಿಖೆ ವೇಗವಾಗಿ ಸಾಗುತ್ತಿದೆ.












Click it and Unblock the Notifications