ಬಿ.ಎಸ್.ಯಡಿಯೂರಪ್ಪಗೆ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಬೆಂಗಳೂರು, ಜೂನ್ 16 : ಕರ್ನಾಟಕ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ತೆರಳುತ್ತಿದ್ದರು.
ಜೂನ್ 16ರ ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಹೊರಟಿದ್ದರು. ಮೌರ್ಯ ಸರ್ಕಲ್ ಬಳಿಯಿಂದ ಗಾಂಧಿ ಭವನದ ತನಕ ಪ್ರತಿಭಟನಾ ಜಾಥಾ ನಡೆಸಿದರು.
ಶಿವಾನಂದ ವೃತ್ತದ ಬಳಿಯ ಗಾಂಧಿ ಭವನದ ಮುಂದೆ ಬ್ಯಾರಿಕೇಡ್ ಹಾಕಿ ಪೊಲೀಸರು ಎಲ್ಲರನ್ನೂ ತಡೆದರು. ಬ್ಯಾರಿಕೇಡ್ ದಾಟಿ ಮುಂದೆ ಸಾಗಲು ಪ್ರಯತ್ನ ನಡೆಸಿದ ನಾಯಕರನ್ನು ವಶಕ್ಕೆ ಪಡೆದು, ಬಿಎಂಟಿಸಿ ಬಸ್ನಲ್ಲಿ ಪೊಲೀಸರು ಕರೆದುಕೊಂಡು ಹೋದರು.

ರಾಜ್ಯದಲ್ಲಿ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರತಿಭಟಿಸಿ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಅಹೋರಾತ್ರಿ ಧರಣಿಯನ್ನು ಶುಕ್ರವಾರದಿಂದ ನಡೆಸುತ್ತಿದ್ದರು.
ಕುಮಾರಸ್ವಾಮಿ ಪತ್ರ ಬರೆದಿದ್ದರು : ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಪತ್ರ ಬರೆದಿದ್ದರು.
ತಮ್ಮೊಂದಿಗೆ ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದರು. ಸಚಿವ ವೆಂಕಟರಾವ್ ನಾಡಗೌಡ ಅವರು ಬಿಜೆಪಿ ನಾಯಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಪತ್ರವನ್ನು ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದ್ದರು.












Click it and Unblock the Notifications