ಬ್ರೇಕಿಂಗ್ ನ್ಯೂಸ್ : ಶಾಸಕಾಂಗ ಪಕ್ಷದ ಸಭೆ ಕರೆದ ಯಡಿಯೂರಪ್ಪ!
Recommended Video

ಬೆಂಗಳೂರು, ಸೆಪ್ಟೆಂಬರ್ 17 : ಕರ್ನಾಟಕದಲ್ಲಿ ಹಲವಾರು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಸೋಮವಾರ ಯಡಿಯೂರಪ್ಪ ಅವರು ಪಕ್ಷದ ಎಲ್ಲಾ ಶಾಸಕರಿಗೆ ಕರೆ ಮಾಡಿ ಮಂಗಳವಾರ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ತರಾತುರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಬೆಳಗ್ಗೆ 10.30ಕ್ಕೆ ಎಲ್ಲಾ ಶಾಸಕರು ಪಕ್ಷದ ಕೇಂದ್ರ ಕಚೇರಿಗೆ ಬರಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮತ್ತೊಂದು ಕಡೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಇನ್ನೂ ಶಮನವಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಮೇಶ್ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಮತ್ತೊಂದು ಕಡೆ ಸತೀಶ್ ಜಾರಕಿಹೊಳಿ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ರಾಜನಾಥ್ ಸಿಂಗ್ ಬೆಂಗಳೂರಿಗೆ?
ಕರ್ನಾಟಕ ಬಿಜೆಪಿಯಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರಾಜನಾಥ್ ಸಿಂಗ್ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಯಡಿಯೂರಪ್ಪ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿರುವುದಕ್ಕೂ ರಾಜನಾಥ್ ಸಿಂಗ್ ಆಗಮಿಸುತ್ತಿರುವುದಕ್ಕೂ ಏನಾದರೂ ಸಂಬಂಧವಿದೆಯೇ? ಕಾದು ನೋಡಬೇಖು. ಮಂಗಳವಾರ ಬಿಜೆಪಿ ಪಾಳಯ ಹಲವು ಚಟುವಟಿಕೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ
ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, 'ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಗಟ್ಸ್ ಇದ್ದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ. ತಮ್ಮ ಸರ್ಕಾರದ ಶಾಸಕರನ್ನು ಒಟ್ಟಿಗೆ ಸೇರಿಸಿ ಹೇಳಿಕೆ ಕೊಡಿಸಲಿ. ಯಾರು ಅವರ ಪರವಾಗಿ ಇದ್ದಾರೆ ಎಂಬುದು ತಿಳಿಯಲಿದೆ. ಬಿಜೆಪಿ ಯಾವುದೇ ಆಪರೇಷನ್ ಮಾಡುತ್ತಿಲ್ಲ. ಕುಮಾರಸ್ವಾಮಿ ಇದೇ ವಿಚಾರ ಇಟ್ಟುಕೊಂಡು ಹೈಡ್ರಾಮ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

ರೆಸಾರ್ಟ್ ರಾಜಕೀಯ
ಕರ್ನಾಟಕ ಬಿಜೆಪಿ ರೆಸಾರ್ಟ್ ರಾಜಕೀಯ ಆರಂಭ ಮಾಡುವ ಸಾಧ್ಯತೆ. ಮಂಗಳವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಶಾಸಕರನ್ನು ರೆಸಾರ್ಟ್ಗೆ ಕಳಿಸುವ ಸಾಧ್ಯತೆ ಇದೆ. ಬಿಜೆಪಿಯಲ್ಲಿನ ಬೆಳವಣಿಗೆಗಳು ಆಪರೇಷನ್ ಕಮಲ ನಡೆಯುತ್ತಿದೆಯೇ? ಎಂಬ ಅನುಮಾನವನ್ನು ಹುಟ್ಟು ಹಾಕಿದೆ.

ಯಡಿಯೂರಪ್ಪ ಸಿಎಂ ಆಗಲ್ಲ
'ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನಗೊಂಡರೂ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬರುತ್ತದೆ. ಯಡಿಯೂರಪ್ಪ ಸಿಎಂ ಆಗುವುದಿಲ್ಲ' ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. 'ಯಡಿಯೂರಪ್ಪ ಸಿಎಂ ಆಗುವುದಕ್ಕೆ ಸಾಧ್ಯವಿಲ್ಲ ಎಂದು ಅವರ ಪಕ್ಷದ ನಾಯಕರೇ ಹೇಳುತ್ತಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಬರಬಹುದು ಎಂದು ಬಿಜೆಪಿಯವರೇ ನನ್ನ ಬಳಿ ಹೇಳಿದ್ದಾರೆ' ಎಂದರು.












Click it and Unblock the Notifications