ಡಿಕೆಶಿಗೆ ಬಹಿರಂಗ ಆಹ್ವಾನ ನೀಡಿದ ಬಿಎಸ್ ಯಡಿಯೂರಪ್ಪ: ಕಾರಣವೇನು?
ಬೆಂಗಳೂರು,ನವೆಂಬರ್ 11: ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಣೆ ಹಾಕಿದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆಕ್ಟಿವ್ ಆಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಹೌದು, ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಬಿ ಎಸ್ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡಿ, ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ, ನೀವೂ ಬನ್ನಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಡಿಸಿಎಂ ಡಿ.ಕೆ.ಶಿವಕುಮಾರರಿಗೆ ಆಹ್ವಾನ ನೀಡಿದ್ದಾರೆ.

ಈಗ ತಾನೇ ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸ ನೋಡಿದ್ದೇವೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಶಿವಕುಮಾರ್ ಅವರನ್ನು ಪ್ರಶ್ನಿಸುವುದಾಗಿ ತಿಳಿಸಿದರು.
ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ ಎಂದು ಆಕ್ಷೇಪಿಸಿದರು.
ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲೇ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೇ ಸರಕಾರ ಕಡೆಗಣನೆ ಮಾಡಿದೆ. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ ಪುನರುಜ್ಜೀವನ ಮಾಡುವ ನಿಟ್ಟಿಗೆ ಮುಂದಾಗಬೇಕಿದೆ.

ಕೆಆಆರ್ಐಡಿಎಲ್ ಮೂಲಕ ಅಭಿವೃದ್ದಿ ಮಾಡಬೇಕಿದೆ. ಶಿವಕುಮಾರ್ ಅವರು ಉಸ್ತುವಾರಿ ಇದ್ದಾರೆ. ಇದಕ್ಕೆ ಹಣ ಕೊಡಲು ಸಾಧ್ಯವಾಗುವುದಿಲ್ಲವೇ? ಈ ಸರಕಾರ ದಿವಾಳಿ ಆಗಿದೆಯೇ ಎಂದು ಕೇಳಿದರು. ಸುಮ್ಮನೆ ದಿನ ದೂಡಲಾಗುತ್ತಿದೆ. ಒಂದೇ ಒಂದು ಕಡೆ ಒಂದು ಕಿ.ಮೀ ರಸ್ತೆ ಮಾಡಿಲ್ಲ. ಸರಕಾರವು ಜನವಿರೋಧಿ ಕೆಲಸ ಮಾಡುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಜನರಿಗೆ ವಾಸ್ತವ ಪರಿಸ್ಥಿತಿ ತಿಳಿಸುವ ಕೆಲಸ ಮಾಡುತ್ತಿಲ್ಲ. ಶಿವಕುಮಾರ್ ಅವರೇ ನಿಮ್ಮ ಜೊತೆ ನಾನು ಬರ್ತೀನಿ, ನೀವು ಬನ್ನಿ, ಈ ಜನರ ಸಮಸ್ಯೆ ಆಲಿಸೋಣ ಎಂದು ಸವಾಲೆಸೆದರು.
ನಮ್ಮ ಶಾಸಕರು ಕೂಡ ಪರಿಶೀಲನೆಗೆ ಬರುತ್ತಾರೆ. ವಿಪಕ್ಷ ಅನ್ನೋ ಕಾರಣಕ್ಕೆ ಕೊಟ್ಟಿರುವ ಅನುದಾನ ವಾಪಸ್ ಪಡೆಯಲಾಗುತ್ತಿದೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲಾಗಲ್ಲ. ಹೋರಾಟ ಮಾಡುವ ಮೊದಲು ಸಮಸ್ಯೆ ಬಗೆಹರಿಸಿ ಎಂದು ಎಚ್ಚರಿಕೆ ನೀಡಿದರು. ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ಧಿ ಆಗಿದೆ ಅಂತ ಇಲ್ಲಿನ ಜನ ಹೇಳುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಏನಾಗಿದೆ ಎಂದು ಕೇಳಿದರಲ್ಲದೆ, ನಮ್ಮೆಲ್ಲಾ ಶಾಸಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಡಿಸಿಎಂ ಅವರ ಬ್ರಾಂಡ್ ಬೆಂಗಳೂರು ವಿಚಾರದ ಕುರಿತು ಕೇಳಿದಾಗ, ಸುಮ್ಮನೆ ಬೊಗಳೆ ಬಿಡೋದಲ್ಲ. ವಾಸ್ತವ ವಿಚಾರ ಮಾತಾಡಬೇಕು. ಬನ್ನಿ ಜನರ ಮಧ್ಯದಲ್ಲಿ ಕುಳಿತು ಮಾತಾಡೋಣ ಎಂದು ಆಹ್ವಾನಿಸಿದರು. ಬರ ಅಧ್ಯಯನ ವರದಿ ತಯಾರಿ ಮಾಡಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರಕ್ಕೆ ಒಂದು ವರದಿ ಕೊಡುತ್ತೇವೆ ಎಂದು ಅವರು ತಿಳಿಸಿದರು.












Click it and Unblock the Notifications