ಮೂರು ಕ್ಷೇತ್ರಗಳಲ್ಲಿ ಯಡಿಯೂರಪ್ಪ ಎಲ್ಲಿಂದ ಸ್ಪರ್ಧಿಸಬಹುದು?
ಬೆಂಗಳೂರು, ಸೆಪ್ಟೆಂಬರ್ 18 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಮಾಡುವುದು ಖಚಿತವಾಗಿದೆ. 2018ರ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಯಡಿಯೂರಪ್ಪ, ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ.
ಬಿಜೆಪಿ ವಲಯದಲ್ಲಿನ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳನ್ನು ಯಡಿಯೂರಪ್ಪ ಅವರ ಸ್ಪರ್ಧೆಗೆ ಅಂತಿಮಗೊಳಿಸಲಾಗಿದೆ. ಇವುಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ? ಎಂಬುದು ಖಚಿತವಾಗಿಲ್ಲ. ಇವುಗಳಲ್ಲಿ ಎರಡು ಕ್ಷೇತ್ರಗಳು ಬಾಗಲಕೋಟೆ ಜಿಲ್ಲೆಯಲ್ಲಿದ್ದರೆ ಮತ್ತೊಂದು ಕ್ಷೇತ್ರ ಹಾವೇರಿ ಜಿಲ್ಲೆಗೆ ಸೇರಿದ್ದಾಗಿದೆ.

ಪಕ್ಷದ ರೈತ ಮೋರ್ಚಾ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, 'ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ' ಎಂಬುದು ನಾಯಕರ ಅಭಿಪ್ರಾಯವಾಗಿದೆ' ಎಂದರು.
'ಪಕ್ಷದ ಕಾರ್ಯಕರ್ತರು ಬಳ್ಳಾರಿ, ವಿಜಯಪುರ ಅಥವ ಹಾವೇರಿಯಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಈ ಕುರಿತು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.
ಸದ್ಯ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದ ಸಂಸದರು. 1983ರಿಂದ ಏಳು ಬಾರಿ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಸದ್ಯ ಶಿಕಾರಿಪುರದ ಶಾಸಕರು.
ಬಿಜೆಪಿ ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಅಲ್ಲಿಂದಲೇ ಯಡಿಯೂರಪ್ಪ ಅವರು ಸ್ಪರ್ಧಿಸಿದರೆ ಪಕ್ಷಕ್ಕೆ ಹೆಚ್ಚಿನ ಸ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಆದ್ದರಿಂದ, ಅಲ್ಲಿಂದ ಸ್ಪರ್ಧಿಸಲು ಯಡಿಯೂರಪ್ಪಗೆ ನಾಯಕರು ಸಲಹೆ ನೀಡಿದ್ದಾರೆ.
ಬಿಜೆಪಿ ವಲಯದಲ್ಲಿ ಕೇಳಿಬರುತ್ತಿರುವ ಸುದ್ದಿಯಂತೆ ಯಡಿಯೂರಪ್ಪ ಸ್ಪರ್ಧೆಗೆ ರಾಣೆಬೆನ್ನೂರು (ಹಾವೇರಿ ಜಿಲ್ಲೆ), ಬಾದಾಮಿ, ತೆರದಾಳ (ಬಾಗಲಕೋಟೆ) ಜಿಲ್ಲೆಯ ಕ್ಷೇತ್ರಗಳನ್ನು ಅಂತಿಮಗೊಳಿಸಲಾಗಿದೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ರಾಣೆಬೆನ್ನೂರು ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.












Click it and Unblock the Notifications