ಯಡಿಯೂರಪ್ಪ ಸಂಪುಟ ವಿಸ್ತರಣೆ; ಯಾರು, ಏನು ಹೇಳಿದರು?
ಬೆಂಗಳೂರು, ಸೆಪ್ಟೆಂಬರ್ 18: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆದಿವೆ. ಸೆ.21ರಿಂದ ವಿಧಾನ ಮಂಡಲ ಅಧಿವೇಶ ಆರಂಭವಾಗಲಿದೆ. ಅಷ್ಟರೊಳಗೆ ಸಂಪುಟ ವಿಸ್ತರಣೆ ಆಗಲಿದೆಯೇ? ಕಾದು ನೋಡಬೇಕು.
ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದರೆ ಭಾನುವಾರ ಸಂಪುಟ ವಿಸ್ತರಣೆ ಅಥವ ಪುನಾರಚನೆ ಆಗುವ ಸಾಧ್ಯತೆ ಇದೆ. ಸಂಪುಟದಿಂದ ಕೈ ಬಿಡಬಹುದಾದ ಸಚಿವರ ಪಟ್ಟಿಯನ್ನು ಹಿಡಿದುಕೊಂಡು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ.
ಶುಕ್ರವಾರ ಸಂಜೆ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ. ಅಮಿತ್ ಶಾ ಭೇಟಿ ಮಾಡಲು ಅವರು ಬಯಸಿದ್ದಾರೆ. ಆದರೆ, ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅಮಿತ್ ಶಾ ಯಾರನ್ನೂ ಸಹ ಭೇಟಿ ಮಾಡುವ ಸಾಧ್ಯತೆ ಕಡಿಮೆ.
ಎಂ. ಪಿ. ರೇಣುಕಾಚಾರ್ಯ, ಎಚ್. ವಿಶ್ವನಾಥ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿ 5 ಸಚಿವ ಸ್ಥಾನಗಳು ಖಾಲಿ ಇದೆ. ಯಾರಿಗೆ ಸಂಪುಟ ಸೇರುವ ಅವಕಾಶ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಗಳ ಪರಮಾಧಿಕಾರ
ದೆಹಲಿಯಲ್ಲಿ ಮಾತನಾಡಿದ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ, "ಯಾರನ್ನು ಹೊಸದಾಗಿ ಸೇರಿಸಿಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿಗಳು ರಾಷ್ಟ್ರೀಯ ಅಧ್ಯಕ್ಷರು ಹೈಕಮಾಂಡ್ ನಾಯಕರು ಚರ್ಚಿಸಿ ತೀರ್ಮಾನಿಸುತ್ತಾರೆ. ದಾವಣಗೆರೆ ಜಿಲ್ಲೆಯ ಶಾಸಕರು ಚರ್ಚೆ ಮಾಡಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಪ್ರಾದೇಶಿಕ ಅಸಮತೋಲನ ಬಗೆಹರಿಸಬೇಕು ಎಂದು ಮನವಿ ಮಾಡಿದ್ದೇವೆ" ಎಂದರು.

ಎಚ್. ವಿಶ್ವನಾಥ್ ಹೇಳಿಕೆ
"ಸಚಿವ ಸ್ಥಾನ ಕೇಳುವುದು ನಮ್ಮ ಧರ್ಮ. ನಿರ್ಧಾರ ಅವರದ್ದು. ಯಾರನ್ನು ಮಂತ್ರಿ ಮಾಡಬೇಕು ಎಂಬುದು ಹೈಕಮಾಂಡ್ ಮತ್ತು ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ" ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

ಅಧಿವೇಶನದೊಳಗೆ ಮಾಡುತ್ತೇವೆ
"ಸಚಿವ ಸ್ಥಾನದ ಬಗ್ಗೆ ಹಿಂದೆ ಅನೇಕ ಬಾರಿ ಪ್ರಸ್ತಾಪ ಮಾಡಿದ್ದೆವು. ಈಗಾಗಲೇ ಸಾಕಷ್ಟು ತಡ ಆಗಿದೆ. ಅಧಿವೇಶನದೊಳಗೆ ಮಂತ್ರಿ ಮಾಡುತ್ತೇವೆ ಎಂದು ಹಿಂದೆ ಭರವಸೆ ಕೊಟ್ಟಿದ್ದರು" ಎಂದು ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಹೇಳಿದ್ದಾರೆ.
Recommended Video

ಯಾರ ಹೆಸರು ಕೇಳಿ ಬರುತ್ತಿದೆ?
ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಅವರ ಹೆಸರು ಸಚಿವ ಸ್ಥಾನಕ್ಕೆ ಕೇಳಿ ಬರುತ್ತಿದೆ. ಉಳಿದಂತೆ ಉಮೇಶ್ ಕತ್ತಿ, ಜಿ. ಎಚ್. ತಿಪ್ಪಾರೆಡ್ಡಿ, ಅರವಿಂದ ಲಿಂಬಾವಳಿ ಅವರ ಹೆಸರುಗಳು ಸಹ ಕೇಳಿ ಬರುತ್ತಿವೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ? ಎಂದು ಕಾದು ನೋಡಬೇಕು.












Click it and Unblock the Notifications