ಸಚಿವರ ಸಭೆ ಕರೆದ ಬಿಎಸ್ವೈ; ಕಡ್ಡಾಯ ಹಾಜರಿಗೆ ಸೂಚನೆ!
ಬೆಂಗಳೂರು, ಸೆಪ್ಟೆಂಬರ್ 07 : ಕೋವಿಡ್ ಲಾಕ್ ಡೌನ್ ಎಲ್ಲಾ ಮುಗಿದು ರಾಜ್ಯದಲ್ಲಿ ಜಮ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇಂತಹ ಸಂದರ್ಭದಲ್ಲಿ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
Recommended Video
ಸೋಮವಾರ ಸಂಜೆ 6 ಗಂಟೆಗೆ ಸಚಿವರ ಸಭೆಯನ್ನು ಯಡಿಯೂರಪ್ಪ ಕರೆದಿದ್ದಾರೆ. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಸಭೆ ನಡೆಯಲಿದೆ. ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.
ಕೋವಿಡ್ ನಿಯಂತ್ರಣ, ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ, ಮುಂದೆ ನಡೆಯಲಿರುವ ವಿಧಾನಸಭಾ ಅಧಿವೇಶನ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಯಡಿಯೂರಪ್ಪ ಚರ್ಚೆ ನಡೆಸುವ ಸಾಧ್ಯತೆ ಇದೆ.

ಸೆ. 21ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ವಿವಿಧ ಇಲಾಖೆಗಳ ವಿಚಾರಗಳನ್ನು ಪ್ರಸ್ತಾಪಿಸಲಿವೆ. ಆದ್ದರಿಂದ, ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಯಡಿಯೂರಪ್ಪ ನಿರ್ದೇಶ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಉಸ್ತುವಾರಿ ಸಚಿವರುಗಳು ಜಿಲ್ಲೆಗೆ ಭೇಟಿ ನೀಡುವವಂತೆ ಯಡಿಯೂರಪ್ಪ ಕಳೆದ ವಾರ ಸೂಚಿಸಿದ್ದರು. ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಅವರು ಪಡೆದುಕೊಳ್ಳಲಿದ್ದಾರೆ.
ಎಲ್ಲಾ ಸಚಿವರು ಸಭೆಗೆ ಆಗಮಿಸಬೇಕು ಎಂದು ಸೂಚನೆ ನೀಡಲಾಗಿದೆ. ಕೋವಿಡ್ ಸೋಂಕಿಗೆ ತುತ್ತಾಗಿರುವ ಸಚಿವರಾದ ಕೆ. ಎಸ್. ಈಶ್ವರಪ್ಪ, ಶಿವರಾಂ ಹೆಬ್ಬಾರ್ ಸಭೆಗೆ ಗೈರಾಗುವ ಸಾಧ್ಯತೆ ಇದೆ.












Click it and Unblock the Notifications