ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ!
ಬೆಂಗಳೂರು, ಆಗಸ್ಟ್ 8; ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಶನಿವಾರ ಈ ಕುರಿತು ಸರ್ಕಾರದಿಂದ ಆದೇಶ ಪ್ರಕಟವಾಗಿತ್ತು.
ಭಾನುವಾರ ತಮಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನ ಹಿಂಪಡೆಯಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರವನ್ನು ಸಹ ಬರೆದಿದ್ದಾರೆ. ಬಸವರಾಜ ಬೊಮ್ಮಾಯಿ ಭಾನುವಾರ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು.

ಮಾಜಿ ಮುಖ್ಯಮಂತ್ರಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳನ್ನು ಮಾತ್ರ ತಮಗೆ ನೀಡಿ. ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?; ಬಿ. ಎಸ್. ಯಡಿಯೂರಪ್ಪ ನಿಕಟ ಪೂರ್ವ ಮುಖ್ಯಮಂತ್ರಿ ಲೆಟರ್ ಹೆಡ್ನಲ್ಲಿ 8/8/2021ರಂದು ಬಸವರಾಜ ಬೊಮ್ಮಾಯಿ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಪತ್ರವನ್ನು ಬರೆಯಲಾಗಿದೆ.
ಟಿಪ್ಪಣಿ ದಿನಾಂಕ 7/8/2021ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಶ್ರೀ ಬಿ. ಎಸ್. ಯಡಿಯೂರಪ್ಪ ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ.
ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಈ ಮೂಲಕ ಕೋರುತ್ತೇನೆ ಎಂದು ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಆದೇಶದಲ್ಲಿ ಏನಿತ್ತು?; ಕರ್ನಾಟಕ ಸರ್ಕಾರದ ಸಚಿವಾಲಯ ವಿಧಾನಸೌಧ 7/8/2021ರಂದು ಬಿ. ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಲಾಗಿತ್ತು.
ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ರಾಜೇಶ್ ಶಂಕ್ರಪ್ಪ ಸೂಳಿಕೇರಿ ಆದೇಶ ಹೊರಡಿಸಿದ್ದರು.
ಸಂಕಲನಕಾರರು, ಕರ್ನಾಟಕ ರಾಜ್ಯಪತ್ರ, ಬೆಂಗಳೂರು-ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲು ಹಾಗೂ ಸರ್ಕಾರಕ್ಕೆ 100 ಪ್ರತಿಗಳನ್ನು ಕಳುಹಿಸಿಕೊಡಲು ಸೂಚನೆ ನೀಡಲಾಗಿತ್ತು.
ಅಧಿಸೂಚನೆ; ಶ್ರೀ ಬಿ. ಎಸ್. ಯಡಿಯೂರಪ್ಪ, ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ, ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜೀನಾಮೆ ಅಂಗೀಕರಿಸಿದ್ದರು. ಜುಲೈ 27ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.
ಜುಲೈ 28ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಿದ್ದು, ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಿಗೆ ಶಿಷ್ಟಾಚಾರದಂತೆ ಸಿಗುವ ಎಲ್ಲಾ ಸರ್ಕಾರಿ ಸೌಲಭ್ಯಗಳು ಅವರಿಗೆ ಸಿಗಲಿದೆ.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಮುಖ್ಯಮಂತ್ರಿಗಳ ಅಧಿಕೃತ ಸರ್ಕಾರಿ ನಿವಾಸ 'ಕಾವೇರಿ' ಖಾಲಿ ಮಾಡಿಲ್ಲ. ನಿವಾಸ ಖಾಲಿ ಮಾಡಲು ಸಮಯವನ್ನು ನೀಡಲಾಗುತ್ತದೆ. ಯಡಿಯೂರಪ್ಪ ಕಾವೇರಿ ಖಾಲಿ ಮಾಡಿದರೆ ಡಾಲರ್ಸ್ ಕಾಲೋನಿಯ 'ಧವಳಗಿರಿ' ಗೆ ವಾಪಸ್ ಆಗಲಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೆಲವು ತಿಂಗಳು ಧವಳಗಿರಿಯಲ್ಲಿಯೇ ಇದ್ದರು. ಬಳಿಕ ತಮ್ಮ ವಾಸ್ತವ್ಯವನ್ನು ಕಾವೇರಿಗೆ ಬದಲಾಸಿದ್ದರು.












Click it and Unblock the Notifications