Breaking; ದೆಹಲಿಗೆ ಹೊರಟ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ?
ಬೆಂಗಳೂರು, ಅಕ್ಟೋಬರ್ 17; ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.
ಮಂಗಳವಾರ ಸಂಸದೀಯ ಮಂಡಳಿ ಸಭೆಯಲ್ಲಿ ಪಾಳ್ಗೊಳ್ಳಲು ಬಿ. ಎಸ್. ಯಡಿಯೂರಪ್ಪ ದೆಹಲಿಗೆ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಜನಸಂಕಲ್ಪ ಸಮಾವೇಶದ ಕುರಿತು ಮಾಹಿತಿ ನೀಡುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ದೆಹಲಿಗೆ ಹೋಗುವುದಾಗಿ ಘೋಷಣೆ ಮಾಡಿದ್ದರು. ಇಂತಹ ಸಂದರ್ಭದಲ್ಲಿಯೇ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಹೈಕಮಾಂಡ್ ನಾಯಕರು ಯಡಿಯೂರಪ್ಪ ಜೊತೆ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 5 ಸಚಿವ ಸ್ಥಾನಗಳು ಖಾಲಿ ಇದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬ ಒತ್ತಡ ಶಾಸಕರ ಕಡೆಯಿಂದಲೂ ಇದೆ.
ಬಸವರಾಜ ಬೊಮ್ಮಾಯಿ ಹಿಂದೆ ಹಲವು ಸಲ ದೆಹಲಿ ಪ್ರವಾಸ ಮಾಡಿದರೂ ಸಂಪುಟ ವಿಸ್ತರಣೆ ಮಾಡಲು ಮಾತ್ರ ಒಪ್ಪಿಗೆ ಸಿಕ್ಕಿಲ್ಲ. ಇದರಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಅಸಮಾಧಾನವೂ ಇದೆ. ಈಗ ಮತ್ತೆ ಸಂಪುಟ ವಿಸ್ತರಣೆ ಚರ್ಚೆಗಳು ಆರಂಭವಾಗಿದೆ.
ಹೈಕಮಾಂಡ್ ನಾಯಕರ ಭೇಟಿ ಸಂದರ್ಭದಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳುವಂತೆ ನಾಯಕರಿಗೆ ಮನವಿ ಮಾಡುವ ಸಾಧ್ಯತೆಯೂ ಇದೆ. ಬಸವರಾಜ ಬೊಮ್ಮಾಯಿ ಎಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
ನಾನೂ ಆಕಾಂಕ್ಷಿ; ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುವಾಗಲೇ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, "ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಗೊತ್ತು. ಕೇಂದ್ರ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ" ಎಂದರು.
"ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿ. ಕೇಂದ್ರ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ" ಎಂದು ಈಶ್ವರಪ್ಪ ಹೇಳಿದರು.












Click it and Unblock the Notifications