ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ರು: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು,ಅಕ್ಟೋಬರ್ 20: ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಈ ಕುರಿತು ಶುಕ್ರವಾರ ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳ ಜೊತೆಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು.

ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ವಿರೋಧ ಪಕ್ಷಗಳ ಆರೋಪಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ (ಮಾಧ್ಯಮದವರು) ಮಿಕ್ಕಿದವರ ಮಾತಿಗೆಲ್ಲಾ ಕಿವಿಗೊಡಬಾರದು ಎಂದು ಹೇಳಿದರು.

ಇನ್ನೂ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪಕ್ಷ ಸೇರ್ಪಡೆ ಹಾಗೂ ಕಾಡುಗೊಲ್ಲ ಸಮುದಾಯದ ವಿರೋಧ ವಿಚಾರವಾಗ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್, ಪ್ರಬಲವಾಗಿರುವವರನ್ನು ಪ್ರಬಲವಾಗಿ ವಿರೋಧ ಮಾಡುವುದು ರಾಜಕೀಯದಲ್ಲಿ ಸಹಜ. More Strong More Enemy ಎಂಬಂತೆ ರಾಜಕೀಯದಲ್ಲಿ ಪ್ರಬಲರಿಗೆ ವಿರೋಧಿಗಳು ಹೆಚ್ಚು. ಪೂರ್ಣಿಮಾ ಶ್ರೀನಿವಾಸ್ ಅವರು ಶಾಸಕಿಯಾಗಿದ್ದರು, ಅವರದೇ ಆದ ಶಕ್ತಿ ಇದೆ. ಅವರ ತಂದೆ ನಮ್ಮ ಪಕ್ಷದಲ್ಲಿದ್ದು, ಮಂತ್ರಿಯಾಗಿದ್ದರು. ಇಂದು ಬಿಜೆಪಿ ಜೆಡಿಎಸ್ ಮೈತ್ರಿ ಸರಿಯಿಲ್ಲ ಎಂದು ಭಾವಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications