ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಯಡಿಯೂರಪ್ಪ ಮಾರ್ಗದರ್ಶನ ಅಗತ್ಯ: ಮುರುಗೇಶ್ ನಿರಾಣಿ
ಬೆಂಗಳೂರು, ಜು. 22: ಶಿಕಾರಿಪುರ ಕ್ಷೇತ್ರವನ್ನು ನೆಚ್ಚಿನ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಟ್ಟುಕೊಡುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿರುವುದು ಬಿಜೆಪಿ ನಾಯಕರಲ್ಲಿ ತಳಮಳ ಸೃಷ್ಟಿಸಿದೆ. ಯಡಿಯೂರಪ್ಪ ಅವರು ಸಕ್ರಿಯ ರಾಜಕಾರಣದಿಂದ ದೂರ ಸರಿದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂಬ ಸತ್ಯ ಅರಿತ ಬಿಜೆಪಿ ನಾಯಕರು ಬಿಎಸ್ ವೈ ಅವರ ನಾಯಕತ್ವ ಅಗತ್ಯತೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಬಿಎಸ್ ವೈ ಅವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸಿದರೆ ಮಾತ್ರ ಬಿಜೆಪಿಗೆ ಗೆಲುವು ಸಿಗಲಿದೆ ಎಂಬ ವಾಸ್ತವಾಂಶವನ್ನು ಹೇಳಲು ಆರಂಭಿಸಿದ್ದಾರೆ. ಅದೇ ದಾಟಿಯಲ್ಲಿ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕೂಡ ಹೇಳಿಕೆ ನೀಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಅವರ ಶಿಕಾರಿಪುರ ಘೋಷಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕರ್ನಾಟಕದಲ್ಲಿ ಕೇಸರಿ ಬಾವುಟ ಹಾರಿಸಲು ಬಿಎಸ್ ವೈ ಯಡಿಯೂರಪ್ಪ ಅವರ ಮಾರ್ಗದರ್ಶನ ಅಗತ್ಯ ಎಂದು ತಿಳಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಬಜೆಪಿಯನ್ನ ಬೇರುಮಟ್ಟದಿಂದ ಸಂಘಟಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನ ಅಗತ್ಯ ಎಂದು ಮುರುಗೇಶ್ ಆರ್ ನಿರಾಣಿ ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರೆ ಯಡಿಯೂರಪ್ಪ ಅವರ ಸಲಹೆ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಯಡಿಯೂರಪ್ಪ ಅವರು ಮತ್ತೆ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. 2023 ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕೇಸರಿ ಬಾವುಟ ಹಾರಬೇಕಾದರೆ ನಮಗೆ ಅವರ ನಾಯಕತ್ವ ಬೇಕು ಎಂದು ಹೇಳಿದರು.
ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದು ಮತ್ತು ನಿವೃತ್ತಿ ಘೋಷಣೆ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಯಾರಾದರೂ ಅಂದುಕೊಂಡರೆ ಅದು ತಪ್ಪು. ಯಡಿಯೂರಪ್ಪ ಅವರು ಈಗಲೂ 18 ರ ಯುವಕರು ನಾಚುವಂತೆ ಪಕ್ಷ ಸಂಘಟನೆ ಹಾಗೂ ಪ್ರವಾಸ ಮಾಡುತ್ತಾರೆ. ಅಡು ಮುಟ್ಟದ ಸೊಪ್ಪಿಲ್ಲ, ಬಿಎಸ್ವೈ ಹೋಗದ ಸ್ಥಳ ಕರ್ನಾಟಕದಲ್ಲಿ ಇಲ್ಲ ಎಂದು ನಿರಾಣಿ ಅವರು ಪ್ರಶಂಸೆ ಮಾಡಿದರು.
ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರವನ್ನು ಯಾರೊಬ್ಬರೂ ಮರೆಯುವಂತಿಲ್ಲ.
ಬಿ.ಬಿ.ಶಿವಪ್ಪ, ದಿ.ಅನಂತ್ ಕುಮಾರ್, ಶಂಕರಮೂರ್ತಿ, ಬಸವರಾಜ್ ಪಾಟೀಲ್ ಸೇಡಂ, ಅವರ ಜೊತೆ ಹಳ್ಳಿ ಹಳ್ಳಿ ಸುತ್ತಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಈ ದಿಢೀರ್ ನಿರ್ಧಾರ ನಮಗೂ ಆಶ್ಚರ್ಯ.ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪ ಇನ್ನು ಇರಬೇಕು ಎಂಬುದು ನನ್ನಂತಹ ಲಕ್ಷಾಂತರ ಕಾರ್ಯಕರ್ತರ ಒತ್ತಾಸೆಯಾಗಿದೆ. ಅವರು ಯಾವುದೇ ಒತ್ತಡಕ್ಕೆ ಮಣಿದು ಇಂತಹ ನಿರ್ಧಾರ ತೆಗೆದುಕೊಂಡಿಲ್ಲ. ನಮ್ಮ ಪಕ್ಷ ಯಾವುದೇ ಹಂತದಲೂ ಅವರನ್ನು ಕಡೆಗಣಿಸಿಲ್ಲ ಎಂದು ನಿರಾಣಿ ಇದೇ ವೇಳೆ ಸ್ಪಷ್ಟಪಡಿಸಿದರು.
ಶಿಕಾರಿಪುರ ಕ್ಷೇತ್ರದಿಂದ ಪುತ್ರ ವಿಜೇಯೇಂದ್ರ ಅವರಿಗೆ ಬಿಟ್ಟು ಕೊಡುವುದಾಗಿ ಹೇಳಿರುವುದು ಸ್ವಾಗತರ್ಹ ಬೆಳವಣಿಗೆ. ಇಡೀ ರಾಜ್ಯದಲ್ಲೇ ಅದೊಂದು ಮಾದರಿ ಕ್ಷೇತ್ರ ಎಂದು ನಿರಾಣಿ ಅವರು ಬಣ್ಣಿಸಿದರು.