ಲಾಕ್ಡೌನ್ ವಿಸ್ತರಣೆ ಕುರಿತು ಪ್ರಧಾನಿ ಜೊತೆ ಚರ್ಚಿಸಿ ನಾಳೆ ತೀರ್ಮಾನ: ಬಿಎಸ್ವೈ
ಬೆಂಗಳೂರು, ಏ. 09: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ಲಾಕ್ಡೌನ್ ವಿಸ್ತರಣೆ ಮಾಡಬೇಕೊ ಬೇಡವೊ ಎಂಬುದನ್ನು ನಾಳೆ(ಏಪ್ರಿಲ್ 10) ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಅವರು ಮಾತನಾಡಿದರು.
ರಾಜ್ಯದಲ್ಲಿ ಏ. 14ರಿಂದ ಮುಂದಿನ 15 ದಿನಗಳ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದಾರೆ. ಶುಕ್ರವಾರದಂದು ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕವಷ್ಟೇ ಲಾಕ್ಡೌನ್ ಮುಂದುವರಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ಎಚ್ಚರಿಕೆ ಸಂದೇಶ: ಈ ಲಾಕ್ ಡೌನ್ ಸಂದರ್ಭದಲ್ಲಿ ಜನತೆ ಮನೆಯಿಂದ ಹೊರಗೆ ಬರದೆ ಸಹಕರಿಸಬೇಕು. ಉಲ್ಲಂಘಿಸುವವರ ವಿರುದ್ದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಬೆಂಗಳೂರಿನಲ್ಲಿ ಲಾಕ್ಡೌನ್ ಉಲ್ಲಂಘಿಸಿದವರ ಸುಮಾರು 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ಕೊಟ್ಟರು.
ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ: ಸಚಿವರು ಹಾಗೂ ಶಾಸಕರುಗಳ ಶೇಕಡಾ 30 ರಷ್ಟು ವೇತನವನ್ನು ಕಡಿತಗೊಳಿಸಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಸಂಪುಟ ಸಭೆ ಬಳಿಕ ಹೇಳಿದರು. ಶಾಸಕರು ಹಾಗೂ ಸಚಿವರ ವೇತನ ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ. ಇದರಿಂದ ಉಳಿತಾಯವಾಗುವ 15 ಕೋಟಿ 36 ಲಕ್ಷಕ್ಕೂ ಹೆಚ್ಚಿನ ಹಣ ಕೊರೊನಾ ನಿಧಿಗೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಸುಗ್ರೀವಾಜ್ಞೆ ಮೂಲಕ ಈ ಆದೇಶ ಜಾರಿ ಮಾಡಲಾಗುವುದು ಎಂದಿದ್ದಾರೆ. ಅಕ್ರಮ ಸಕ್ರಮಕ್ಕೆ 94 ಎ ಅಡಿ ಅರ್ಜಿ ಹಾಕಿರುವವರ ಅರ್ಜಿ ಇತ್ಯರ್ಥ ಆಗುವ ತನಕ ಪ್ರಕರಣ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಕುಡಿಯುವ ನೀರಿಗಾಗಿ 49 ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ಹಾಗೂ ಗ್ರಾಮೀಣ ಪಟ್ಟಣ ಪಂಚಾಯಿತಿಗಳಿಗೆ 50 ಲಕ್ಷ ರೂ ಬಿಡುಗಡೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.












Click it and Unblock the Notifications