ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಯಾದ ಯಡಿಯೂರಪ್ಪ
ಬೆಂಗಳೂರು, ನವೆಂಬರ್ 18 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಇದು ಮೊದಲ ಭೇಟಿಯಾಗಿದೆ.
ಬುಧವಾರ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದಾರೆ. ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಅವರು ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದರು.

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಉಪ ಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಹೈಕಮಾಂಡ್ ನಾಯಕರನ್ನು ಭೇಟಿಯಾದರು.
ಸಚಿವ ಸಂಪುಟ ಸಭೆಯ ಬಳಿಕ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಹುಟ್ಟಿಸಿತ್ತು. ಆದರೆ, ಇಂದು ರಾತ್ರಿಯೇ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ ಆಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಚಿವ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ನಾಯಕರು ತಕ್ಷಣ ಒಪ್ಪಿಗೆ ನೀಡಿಲ್ಲ ಎಂಬ ಸುದ್ದಿಗಳು ಹಬ್ಬಿವೆ. ಮುಂದಿನ ಎರಡು ದಿನದಲ್ಲಿ ಈ ಕುರಿತು ಹೈಕಮಾಂಡ್ನಿಂದ ಸೂಚನೆ ಸಿಗುವ ನಿರೀಕ್ಷೆ ಇದೆ.
ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಎಚ್. ವಿಶ್ವನಾಥ್ ಸಂಪುಟ ಸೇರಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಆರ್. ಆರ್. ನಗರ ಚುನಾವಣೆಯಲ್ಲಿ ಗೆದ್ದ ಮುನಿರತ್ನ ಸಚಿವರಾಗಲಿದ್ದಾರೆ ಎಂಬ ಸುದ್ದಿಯೂ ಇದೆ.
ಸಂಪುಟ ವಿಸ್ತರಣೆಯೋ?, ಪುನಾರಚನೆಯೋ? ಎಂಬುದಕ್ಕೆ ಇನ್ನೂ ಖಚಿತವಾದ ಉತ್ತರ ಸಿಕ್ಕಿಲ್ಲ. ಮೂವರು ಸಚಿವರನ್ನು ಕೈಬಿಟ್ಟು, ಹಿರಿಯ ಶಾಸಕರಿಗೆ ಅವಕಾಶ ನೀಡಲಾಗುತ್ತದೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.












Click it and Unblock the Notifications