ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂಕೋರ್ಟ್ಗೆ ಬಿಎಸ್ವೈ ಮೇಲ್ಮನವಿ, ಇಂದು ವಿಚಾರಣೆ
ನವದೆಹಲಿ, ಜನವರಿ 27: ದೇವನಹಳ್ಳಿಯಲ್ಲಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯು ಬುಧವಾರ ವಿಚಾರಣೆಗೆ ಬರಲಿದೆ.
ಯಡಿಯೂರಪ್ಪ, ನಿರಾಣಿ ಕೊರಳಿಗೆ ಉರುಳಾದ ಡಿನೋಟಿಫಿಕೇಷನ್ ಕೇಸ್
ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯಂ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠವು ಯಡಿಯೂರಪ್ಪ ಮತ್ತು ಮುರುಗೇಶ್ ನಿರಾಣಿ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ಇಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗಾಗಿ 26 ಎಕರೆ ಭೂಮಿ ಮಂಜೂರು ಮಾಡಿ, ಬಳಿಕ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಮ್ಮಿಂದ ವಾಪಸ್ ಪಡೆದಿದ್ದಾರೆ ಎಂದು ಉದ್ಯಮಿ ಎ. ಅಲಂ ಪಾಷಾ ಆರೋಪಿಸಿದ್ದರು. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
Recommended Video
ಅಲಂ ಪಾಷಾ ಅವರ ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದರ ಜತೆಗೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ 2019ರಲ್ಲಿ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಆದರೆ ಅವರಿಗೆ ಹಿನ್ನಡೆಯುಂಟಾಗಿತ್ತು. ಜನವರಿ 5ರಂದು ಯಡಿಯೂರಪ್ಪ ಅವರ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್, ವಿಚಾರಣೆ ನಡೆಸಲು ಆದೇಶಿಸಿತ್ತು.