Breaking:ಕೇಂದ್ರ ಬಿಜೆಪಿ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ ಯಡಿಯೂರಪ್ಪ
ಬೆಂಗಳೂರು ಆಗಸ್ಟ್ 17: ಬಿಜೆಪಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ತಮ್ಮನ್ನು ಸದಸ್ಯನನ್ನಾಗಿ ನೇಮಿಸಿದ ಕೆಂದ್ರದ ಬಿಜೆಪಿ ವರಿಷ್ಠರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃತಜ್ಞತೆ ತಿಳಿಸಿದ್ದಾರೆ.
ಕೇಂದ್ರ ಬಿಜೆಪಿಯ ಉನ್ನತ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಷಾ ಅವರಿಗೆ ಅಭಿನಂದನೆಗಳು. ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿದ್ದಾಕ್ಕಾಗಿ, ಉನ್ನತ ಸ್ಥಾನದ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಈಗಾಗಲೇ ಬಿಜೆಪಿ ಕೇಂದ್ರ ಚುನಾವಣೆಯ ಸಮಿತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಇನ್ನಿತರ 15ಮಂದಿ ಸದಸ್ಯರಿದ್ದಾರೆ. ಇದೀಗ ಆ ಸಮಿತಿಗೆ ಹೊಸದಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ನಿತಿನ್ ಗಡ್ಕರಿ ಕೈ ಬಿಟ್ಟ ವರಿಷ್ಠರು
ಇವರ ಜತೆಗೆ ಸರ್ಬಾನಂದ್ ಸೋನೊವಾಲ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ್, ಸತ್ಯನಾರಾಯಣ ಜಟಿಯಾ ಹಾಗೂ ಸುಧಾ ಯಾದವ್ ಅವರನ್ನು ಸಹ ಹೊಸದಾಗಿ ಮಂಡಳಿಗೆ ಸೇರ್ಪಡೆ ಮಾಡಲಾಗಿದೆ. ಅಲ್ಲದೇ ಇದೇ ವೇಳೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಮಿತಿಯಿಂದ ಹೊರಗಿಡಲಾಗಿದೆ.
ಈ ಕುರಿತು ಬುಧವಾರ ಕೇಂದ್ರ ಬಿಜೆಪಿ ವರಿಷ್ಠರಿಂದ ಆದೇಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕ ರಾಜ್ಯ ಬಿಜೆಪಿ ನಾಯಕರು ಶುಭಾಶಯಗಳ ಮಳೆಗರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ.ಕೆ.ಸುಧಾಕರ್, ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್, ಗೋವಿಂದ ಕಾರಜೋಳ, ಮುರಗೇಶ್ ನಿರಾಣಿ, ಬಿ.ಶ್ರೀರಾಮುಲು ಹಾಗೂ ಅನೇಕ ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪ ಅವರಿಗೆ ಶುಭಕೋರಿದ್ದಾರೆ.