ಮುಂದಿನ ಸಿಎಂ ಘೋಷಣೆವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರಿಕೆ
ಬೆಂಗಳೂರು, ಜುಲೈ 26: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಿಗ್ಗೆ ಘೋಷಣೆ ಮಾಡಿದ್ದು, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಥಾವರ್ ಚಂದ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕರಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಘೋಷಣೆವರೆಗೂ ಹಂಗಾಮಿ ಸಿಎಂ ಆಗಿ ಯಡಿಯೂರಪ್ಪ ಮುಂದುವರೆಯಲಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ
ಸಂಸತ್ ಅಧಿವೇಶನ ಮುಗಿಯುವವರೆಗೂ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವ ಸಾಧ್ಯತೆ ಇದೆ.
ರಾಜೀನಾಮೆ ಬೆನ್ನಲ್ಲೇ ರಾಜ್ಯದ ಮುಂದಿನ ಸಿಎಂ ಯಾರು ಎಂಬ ಕುರಿತ ಚರ್ಚೆ ಜೋರಾಗಿದೆ. ಇಂದೇ ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಮತ್ತೊಂದೆಡೆ ಕರ್ನಾಟಕದ ಮುಂದಿನ ಸಿಎಂ ಆಯ್ಕೆ ಕುರಿತು ಪಕ್ಷದ ವರಿಷ್ಠರು ನವದೆಹಲಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಬಸವರಾಜ ಬೊಮ್ಮಾಯಿ ಅವರ ಹೆಸರು ಕೇಳಿಬರುತ್ತಿದೆ.
"ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಹೆಸರು ಶಿಫಾರಸ್ಸು ಮಾಡಲು ಇಷ್ಟಪಡುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ರಾಜ್ಯದ ಬೆಳವಣಿಗೆಗೆ ಸಹಕಾರ ನೀಡುತ್ತೇನೆ" ಎಂದು ಯಡಿಯೂರಪ್ಪ ಹೇಳಿದ್ದಾರೆ.
Recommended Video
ವಿಧಾನಸೌಧದಲ್ಲಿ ಸೋಮವಾರ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ತಾವು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿ, "75 ವರ್ಷ ಮೀರಿದ ಯಾರಿಗೂ ಮುಖ್ಯಮಂತ್ರಿಯಾಗಲು ಅವಕಾಶ ನೀಡಿರಲಿಲ್ಲ. ಆದರೆ ನನ್ನ ಮೇಲೆ ನಂಬಿಕೆ ಇಟ್ಟು ಎರಡು ವರ್ಷ ನನಗೆ ಮುಖ್ಯಮಂತ್ರಿಯಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಇದಕ್ಕಾಗಿ ಧನ್ಯವಾದ" ಎಂದು ಹೇಳಿದ್ದರು.