ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ್ದೇನು?
ಬೆಂಗಳೂರು, ಮಾರ್ಚ್ 08: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ ಕರ್ನಾಟಕ ಬಜೆಟ್ 2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಸ್ಥಾಪನೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ ಇದಕ್ಕಾಗಿ 50 ಕೋಟಿ ರೂಪಾಯಿ ವ್ಯಯಿಸಲಾಗುವುದು, ಇದರಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ. ನುರಿತ ಮಾನವ ಸಂಪನ್ಮೂಲ ಅಭಿವೃದ್ದಿಗೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ 150 ಸರ್ಕಾರಿ ತರಬೇತಿ ಸಂಸ್ಥೆಗಳಿಗೆ 4 ಸಾವಿರದ 636 ಕೋಟಿ ಅನುದಾನ ನೀಡಲಾಗುವುದು.

ಇದರಲ್ಲಿ 4080 ಕೋಟಿ ರೂಪಾಯಿಗಳನ್ನು ಟಾಟಾ ಟೆಕ್ನಾಲಜಿಸ್ ಲಿಮಿಟೆಡ್ ಭರಿಸಲಿದೆ. ಶಿಕ್ಷಕರ ತರಬೇತಿ ಕೇಂದ್ರಕ್ಕೆ 18 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಶೇ.40-50 ರಷ್ಟು ಮೀಸಲಾತಿ, ಶಿವಮೊಗ್ಗದ ಆಯುರ್ವೇದ ಕಾಲೇಜು ಆಯುಷ್ ವಿವಿಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದಿದ್ದಾರೆ.
ರಾಜ್ಯದ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭಿಸಲಾಗುವುದು, ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ರಾಜ್ಯದ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ಅವಕಾಶ ಕಲ್ಪಿಸಲಾಗುವುದು.












Click it and Unblock the Notifications