ಮಾ.04ರಂದು ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಬೊಮ್ಮಾಯಿ; ನಿರೀಕ್ಷೆಗಳೇನು?
ಬೆಂಗಳೂರು, ಫೆಬ್ರವರಿ 18: ಕರ್ನಾಟಕ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ಗೆ ದಿನಗಣನೆ ಆರಂಭವಾಗಿದೆ.
ಮಾರ್ಚ್ 4ರಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು 2022-23ರ ಆಯವ್ಯಯ ಮಂಡಿಸಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಬಜೆಟ್ ಮಂಡನೆಯ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2023ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿಯ ಬಜೆಟ್ ಮೇಲೆ ಜನರು ಹಲವು ನಿರೀಕ್ಷೆ ಹೊಂದಿದ್ದಾರೆ.

ಜನಪ್ರಿಯ ಬಜೆಟ್ ಮಂಡನೆಗೆ ರಾಜ್ಯ ಬಿಜೆಪಿ ಸರ್ಕಾರ ಕೂಡ ಭರ್ಜರಿ ತಯಾರಿ ನಡೆಸಿದೆ. ಆದರೆ ಹಣಕಾಸು ಇಲಾಖೆಯ ಮೂಲದ ಪ್ರಕಾರ ರಾಜ್ಯ ಸರ್ಕಾರದ ಖಜಾನೆ ಸಂಪನ್ನವಾಗಿಲ್ಲ ಅನ್ನುವ ಮಾತುಗಳು ಕೇಳಿ ಬರುತ್ತಿವೆ.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ ಮಾಡಲಿದ್ದು, ಹೀಗಾಗಿ ರಾಜ್ಯ ಬಜೆಟ್ ಮೇಲೆ ಜನರು ಭಾರೀ ನಿರೀಕ್ಷೆ ಹೊಂದಿದ್ದಾರೆ. ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಎಷ್ಟು ಅನುದಾನ ನೀಡಲಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಅನುದಾನ ಸಿಗಲಿದೆ ಅನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ಪ್ರವಾಸಿ ತಾಣಗಳ ಅಭಿವೃದ್ಧಿ
ಕಳೆದ ಎರಡು ವರ್ಷಗಳಿಂದ ಕೋವಿಡ್ ಮಾಹಾಮಾರಿ ರಾಜ್ಯವನ್ನು ಇನ್ನಿಲ್ಲದಂತೆ ಕಾಡಿದ್ದು, ಬಡ ಹಾಗೂ ಮಧ್ಯಮ ವರ್ಗಗಳು ಸಂಕಷ್ಟದಲ್ಲಿವೆ. ರಾಜ್ಯ ಬಜೆಟ್ನಲ್ಲಿ ಏನದರೂ ಸಹಾಯ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

ಅದೇ ರೀತಿ ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಸೆಳೆಯುವುದು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಗೆ ಯೋಜನೆ ರೂಪಿಸಬಹುದೇ ನಿರೀಕ್ಷಿಸಲಾಗಿದೆ.
ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರೋಪಯವಾಗಿ ರಸ್ತೆ, ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯ ಕೇಳಿಬಂದಿದೆ. ಇನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದ್ದು, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಹಾಗೂ ನಗರಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯಲ್ಲಿ ಜನರಿದ್ದಾರೆ.
ಕೃಷಿಗೆ ಹೆಚ್ಚು ಒತ್ತು ನೀಡಲಿದೆಯೇ ರಾಜ್ಯ ಬಜೆಟ್
ಈ ಬಾರಿಯ ಬಜೆಟ್ನಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಮಾರುಕಟ್ಟೆ, ಬೆಳೆಗೆ ನಿರ್ದಿಷ್ಟ ಬೆಲೆ, ಕನಿಷ್ಟ ಬೆಂಬಲ ಬೆಲೆ ಹೆಚ್ಚಳ, ಮಣ್ಣಿನ ಫಲವತ್ತತೆ ಹೆಚ್ಚಿಸಲು, ರಾಸಾಯನಿಕ ಗೊಬ್ಬರ, ಹಸಿರೆಲೆ ಗೊಬ್ಬರ, ಬಿತ್ತನೆ ಬೀಜ ಸಮರ್ಪಕ ವಿತರಣೆ, ಪ್ರತಿ ಗ್ರಾಮಕ್ಕೂ ಸಬ್ಸಿಡಿ ದರದಲ್ಲಿ ಒಕ್ಕಣೆ ಯಂತ್ರ ಹಾಗೂ ಎರೆಹುಳ ಗೊಬ್ಬರ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡಲು ರೈತರು ಆಗ್ರಹಿಸಿದ್ದಾರೆ.
ಅದೇ ರೀತಿ ಹಲವು ಕ್ಷೇತ್ರಗಳಿಂದ ರಾಜ್ಯ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಾವ ಕ್ಷೇತ್ರಗಳ ಕೈ ಹಿಡಿಯಲಿದ್ದಾರೆ ಮತ್ತು ಯಾವ ಜಿಲ್ಲೆಗಳಿಗೆ ಎಷ್ಟು ಅನುದಾನ ನೀಡಲಿದ್ದಾರೆ ಎಂಬುದಕ್ಕೆ ಮಾ.4ರ ಬಜೆಟ್ ದಿನವೇ ಉತ್ತರ ಸಿಗಲಿದೆ.












Click it and Unblock the Notifications