ಫೆಬ್ರವರಿ ತಿಂಗಳಲ್ಲಿ ಆಯವ್ಯಯ ಮಂಡನೆ: ಬಸವರಾಜ ಬೊಮ್ಮಾಯಿ
ಹಾವೇರಿ, ಡಿಸೆಂಬರ್ 24 : ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು
ಈ ಕುರಿತು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಜೆಟ್ ಗೆ ಸಂಬಂಧಿಸಿದಂತೆ ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ನಿಯಂತ್ರಣಾ ಕ್ರಮ
ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್ ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರೋನಾ ಮುಂಜಾಗ್ರತಾ ಕ್ರಮ
ಹಾವೇರಿಯಲ್ಲಿ ಜ.6ರಿಂದ 8ವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು. ಇನ್ನೂ ಈ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕು. ಎಲ್ಲಡೆ ಕನ್ನಡದ ಕಂಪು ಹರಡಬೇಕು. ಇತರೆ ಸಮ್ಮೇಳನಕ್ಕಿಂತ ಈ ಸಮ್ಮೇಳನ ಉತ್ಕೃಷ್ಟವಾಗಿರುತ್ತದೆ. ಕನ್ನಡ ಭಾಷೆ, ನೆಲ,ಜಲ ಹಾಗೂ ಜನರನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ಕನ್ನಡ ನಾಡು ಶ್ರೀಮಂತ ನಾಡು. ಕನ್ನಡ,ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇದು ಎಲ್ಲ ಕನ್ನಡಿಗರ ಕಾರ್ಯಕ್ರಮವಾಗಿದ್ದು ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕೊರೋನಾದಿಂದಾಗಿ ಎರಡು ವರ್ಷಗಳಿಂದ ಹಲವು ಸಲ ಮುಂದೂಡುತ್ತಾ ಬಂದು, ಜ.6ರಿಂದ ಮೂರು ದಿನಗಳ ಕಾಲ ನಿಗದಿಯಾಗಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೊರೋನಾ ಕಾರ್ಮೋಡ ಕವಿದಿದೆ. ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆರಂಭದಿಂದಲೂ ಕೊರೋನಾ ಕಾಡುತ್ತಲೇ ಬಂದಿದೆ. 2020ರ ಫೆಬ್ರವರಿಯಲ್ಲಿ ಕಲಬುರಗಿಯಲ್ಲಿ ಜರುಗಿದ 85ನೇ ಸಾಹಿತ್ಯ ಸಮ್ಮೇಳನದಲ್ಲಿ 86ನೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಹಾವೇರಿಗೆ ನೀಡಲಾಗಿತ್ತು. ಅದೇ ವರ್ಷಾಂತ್ಯಕ್ಕೆ ಹಾವೇರಿಯಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಚರ್ಚೆಯಾಗಿತ್ತು. ಎಲ್ಲವೂ ಸರಿಯಾಗಿದ್ದರೆ ಸಮ್ಮೇಳನ ಮುಗಿದು ಎರಡು ವರ್ಷಗಳೇ ಕಳೆದಿರುತ್ತಿತ್ತು. ಆದರೆ, ಒಂದನೇ ಅಲೆ, ಎರಡನೇ ಅಲೆಯಿಂದಾಗಿ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಿದ್ದರಿಂದ ಕಳೆದ ಮೇ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ದಿನಾಂಕ ನಿಗದಿ ಮಾಡಲಾಗಿತ್ತು.












Click it and Unblock the Notifications