ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ, ಏಪ್ರಿಲ್ 9: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯದ ನಾಯಕರು ಮತ್ತೊಂದು ಪುಟ್ಟ ಚುನಾವಣೆಯ ಸವಾಲನ್ನು ಎದುರಿಸಬೇಕಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ಸಾವಿನಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದೆ. ಮೇ 19ರಂದು ಚುನಾವಣೆ ನಡೆಯಲಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿರುವ ಮೇ 23ರಂದೇ ಕುಂದಗೋಳ ಉಪ ಚುನಾವಣೆಯ ಫಲಿತಾಂಶ ಕೂಡ ಪ್ರಕಟವಾಗಲಿದೆ.
ರಾಜ್ಯ ಪೌರಾಡಳಿತ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ (57) ಅವರು ಮಾರ್ಚ್ 22ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಕುಂದಗೋಳ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಸಾಮಾನ್ಯವಾಗಿ ಉಪ ಚುನಾವಣೆಯ ದಿನಾಂಕ ಘೋಷಣೆಗೆ ಕೆಲವು ತಿಂಗಳು ಬೇಕಾಗುತ್ತದೆ. ಆದರೆ, ಶಿವಳ್ಳಿ ಅವರು ನಿಧನರಾಗಿ 18 ದಿನಗಳಲ್ಲಿಯೇ ಉಪ ಚುನಾವಣೆ ಘೋಷಿಸಲಾಗಿದೆ.
ಶಿವಳ್ಳಿ ಅವರು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಜಯಗಳಿಸಿದ್ದರು. 2008ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅವರು ಸೋಲು ಕಂಡಿದ್ದರು. ಬಳಿಕ 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಿದ್ದಾರೆ. ಕುಂದಗೋಳದ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.












Click it and Unblock the Notifications