ಸಮ್ಮಿಶ್ರ ಸರ್ಕಾರಕ್ಕೆ ಉಪಚುನಾವಣೆ ಜ್ವರ: ಬಿಜೆಪಿಗೆ ಮರ್ಯಾದೆ ಪ್ರಶ್ನೆ
ಬೆಂಗಳೂರು, ಅಕ್ಟೋಬರ್ 6: ಕರ್ನಾಟಕದ ಮೂರು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಉಂಟಾಗಿದೆ.
ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಅಗ್ನಿ ಪರೀಕ್ಷೆ ತಂದೊಡ್ಡುತ್ತದೆ ಎನ್ನಲಾದ ಉಪಚುನಾವಣೆಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ಒಂದೆಡೆ ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಮತ್ತೊಂದೆಡೆ ಮಂಡ್ಯ, ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
ಕರ್ನಾಟಕ ಲೋಕಸಭೆ, ವಿಧಾನಸಭೆ ಉಪಚುನಾವಣೆಗಳಿಗೆ ಮುಹೂರ್ತ ನಿಗದಿ: ನ.3ರಂದು ಮತದಾನ
ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ಒಂದೇ ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 11ರಂದು ಫಲಿತಾಂಶ ಪ್ರಕಟವಾಗಲಿದೆ.
ಮಂಡ್ಯದಿಂದ ಜೆಡಿಎಸ್ ಕಣಕ್ಕೆ, ಬಿಜೆಪಿಯಿಂದ ಯಾರಾಗ್ತಾರೆ ಅಭ್ಯರ್ಥಿ
ಸಿಎಸ್ ಪುಟ್ಟರಾಜು ಅವರ ರಾಜಿನಾಮೆಯಿಂದ ತೆರವಾದ ಮಂಡ್ಯ ಲೋಕಸಭೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಬಹುತೇಕ ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದು ಬಿಜೆಪಿಯಿಂದ ಪದ್ಮನಾಭನಗರ ಕ್ಷೇತ್ರದ ಶಾಸಕ ಮಾಜಿ ಡಿಸಿಎಂ ಆರ್ ಅಶೋಕ್ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಆದರೆ, ಮುಂಬರುವ ಪೂರ್ಣ ಪ್ರಮಾಣದ ಲೋಕಸಭಾ ಚುನಾವಣೆ ವೇಳೆ ಅವರು ಅಭ್ಯರ್ಥಿಯಾಗುತ್ತಾರೆ ಎನ್ನಲಾಗುತ್ತಿದ್ದು, ಬಿಜೆಪಿಯಿಂದ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಈಗಲೂ ಪ್ರಶ್ನೆಯಾಗಿದೆ.
ಮತ್ತೊಂದೆಡೆ ಜೆಡಿಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ಭಾರತೀಯ ಕಂದಾಯ ಅಧಿಕಾರಿ ಡಾ. ಲಕ್ಷ್ಮೀ ಅಶ್ವಿನ್ ಅವರು ಅಭ್ಯರ್ಥಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮಂಡ್ಯದಲ್ಲಿ ನೇರ ಸ್ಪರ್ಧೆ ನಡೆಯಲಿದೆ.
LIVE: 5 ರಾಜ್ಯಗಳ ವಿಧಾನಸಭೆ ಚುನಾವಣೆ: ದಿನಾಂಕ ಘೋಷಿಸಿದ ಚು.ಆಯೋಗ
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿಎಸ್ ವೈ ಪುತ್ರ, ಜೆಡಿಎಸ್ ನಿಂದ ಮಧು
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಿಧಾನ ಸಭೆ ವಿರೋಧಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ, ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಜೆಡಿಎಸ್ ನ ಶಾಸಕ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಜೆಡಿಎಸ್ ಗೆ ಬೆಂಬಲ ನೀಡಲಿದ್ದು, ಬಳ್ಳಾರಿಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕೆ ಇಳಿಯಲಿದ್ದಾರೆ.
ಹೀಗಾಗಿ ಮುಂಬರುವ ಪೂರ್ಣ ಲೋಕಸಭಾ ಚುನಾವಣೆಯಲ್ಲೂ ಮಂಡ್ಯ ಮತ್ತು ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿಯ ಜೆಡಿಎಸ್ ಅಭ್ಯರ್ಥಿಗಳೇ ಕಣಕ್ಕಿಳಿಯಲಿದ್ದಾರೆ.
ಚುನಾವಣಾ ಆಯೋಗದ ಸಾಚಾತನ: ಕಾಂಗ್ರೆಸ್ ಅನುಮಾನ
ಬಳ್ಳಾರಿ: ಬಿಜೆಪಿಯಿಂದ ಶಾಂತಾ ಕಣಕ್ಕೆ, ಕಾಂಗ್ರೆಸ್ ಅಭ್ಯರ್ಥಿ ಹುಡುಕಾಟ
ಮಾಜಿ ಸಚಿವ ಬಿ ಶ್ರೀರಾಮುಲು ಅವರ ರಾಜಿನಾಮೆಯಿಂದ ತೆರವಾದ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀರಾಮುಲು ಸಹೋದರಿ ಶಾಂತಾ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಾಂಗ್ರೆಸ್ ನಿಂದ ಮಾಜಿ ಶಾಸಕ ಎನ್ ವೈ ಹನುಮಂತಪ್ಪ, ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಕಾಂಗ್ರೆಸ್ ನಲ್ಲಿ ಹಿಂದಿನಿಂದಲೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಈ ಬಾರಿ ಯಾರು ಅಭ್ಯರ್ಥಿಯಾಗುತ್ತಾರೆ ಎನ್ನುವ ಕುತೂಹಲ ಮುಂದುವರೆದಿದೆ.
ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೂ ಎಎಪಿಯಿಂದ ಸ್ಪರ್ಧೆ
ಜಮಖಂಡಿಯಲ್ಲಿ ನ್ಯಾಮಗೌಡ ಪುತ್ರ, ಬಿಜೆಪಿಯಿಂದ ಶ್ರೀಕಾಂತ್ ಕುಲಕರ್ಣಿ
ಜಮಖಂಡಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಜಮಖಂಡಿಯಿಂದ ದಿವಂಗತ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ್ ನ್ಯಾಮಗೌಡ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡಲಿದೆ. ಬಿಜೆಪಿ ಯಿಂದ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಕಣಕ್ಕಿಳಿಯಲಿದ್ದು, ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಕೂಡ ಪ್ರಯತ್ನ ನಡೆಸಿದ್ದಾರೆ. ಆದರೆ ಈಗಾಗಲೇ ಪಕ್ಷದಿಂದ ಅಮಾನತುಗೊಂಡಿರುವ ಮುರುಗೇಶ್ ಸಹೋದರನಿಗೆ ಟಿಕೆಟ್ ಸಿಗುವುದು ಅನುಮಾನ ಹಾಗಾಗಿ ಜಮಖಂಡಿಯಲ್ಲಿ ನ್ಯಾಮಗೌಡ ಪುತ್ರ ಹಾಗೂ ಶ್ರೀಕಾಂತ್ ಕುಲಕರ್ಣಿ ನಡುವೆ ನೇರ ಹಣಾಹಣಿ ನಡೆಯಲಿದೆ.
ರಾಮನಗರದಿಂದ ಯಾರಾಗ್ತಾರೆ ಜೆಡಿಎಸ್ ಅಭ್ಯರ್ಥಿ?
ರಾಮನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಕಣಕ್ಕಿಣಿಯುವ ಸಾಧ್ಯತೆಗಳಿವೆ. ಈಗಾಗಲೇ ಒಂದು ಹಂತದ ಸಭೆ ರಾಮನಗರದಲ್ಲಿ ಇತ್ತೀಚೆಗೆ ನಡೆದಿದ್ದು, ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಬಿಜೆಪಿಯಿಂದ ಡಾ ನಂದಿನಿ ಗೌಡ ಹಾಗೂ ರುದ್ರೇಶ್ ನಡುವೆ ಪೈಪೋಟಿ ಇದ್ದು, ಯಡಿಯೂರಪ್ಪ ರುದ್ರೇಶ್ ಪರ ವಲವು ತೋರಿದ್ದಾರೆ.ಹೀಗಾಗಿ ಅನಿತಾ ಕುಮಾರಸ್ವಾಮಿ ಹಾಗೂ ರುದ್ರೇಶ್ ನಡುವೆ ಪೈಪೋಟಿ ನಡೆಯಲಿದೆ.
ಉಪ ಚುನಾವಣೆ ಆಗುತ್ತಾ ಸರ್ಕಾರದ ಭವಿಷ್ಯಕ್ಕೆ ದಿಕ್ಸೂಚಿ
ಈಗ ಎದುರಾಗಿರುವ ವಿಧಾನಸಭಾ ಚುನಾವಣೆಯ ಫಲಿತಾಂಶ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಬಹುತೇಕ ಸ್ಥಾನಗಳನ್ನು ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆದ್ದುಕೊಂಡರೆ ಸರ್ಕಾರದ ಭವಿಷ್ಯ ಭದ್ರವಾಗಲಿದೆ. ಒಂದು ವೇಳೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಉಭಯ ಪಕ್ಷಗಳು ಸೋತರೆ ಸಮ್ಮಿಶ್ರ ಸರ್ಕಾರಕ್ಕೆ ಮುಂದೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳಿಗೆ ಈ ಚುನಾವಣೆ ಭಾರೀ ಸವಾಲನ್ನು ತಂದೊಡ್ಡಿದೆ.