ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಕರ್ನಾಟಕ ಬಿಜೆಪಿ
ಬೆಂಗಳೂರು, ಅಕ್ಟೋಬರ್ 10 : ಕರ್ನಾಟಕ ಬಿಜೆಪಿ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ. ನವೆಂಬರ್ 3ರಂದು ಎರಡು ವಿಧಾನಸಭಾ ಕ್ಷೇತ್ರ, ಮೂರು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದೆ.
ಕರ್ನಾಟಕ ಬಿಜೆಪಿ ಮಂಗಳವಾರ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಉಸ್ತುವಾರಿಗಳು ತಮಗೆ ವಹಿಸಿರುವ ಕ್ಷೇತ್ರದ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಪಕ್ಷ ಉಪ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.
ನವೆಂಬರ್ 3ರಂದು ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಉಸ್ತುವಾರಿಗಳ ಜೊತೆ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯಾವ ಕ್ಷೇತ್ರಕ್ಕೆ ಯಾರು ಉಸ್ತುವಾರಿ?

ಶಿವಮೊಗ್ಗಕ್ಕೆ ಉಸ್ತುವಾರಿಗಳು
ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ನಿಗದಿಯಾಗಿದೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಪಕ್ಷದ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.
ಕೆ.ಎಸ್.ಈಶ್ವರಪ್ಪ, ಜಿ.ಎಂ.ಸಿದ್ದೇಶ್ವರ, ಶಿವಕುಮಾರ್ ಉದಾಸಿ, ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಜೀವರಾಜ್ ಅವರು ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಉಸ್ತುವಾರಿಗಳಾಗಿದ್ದಾರೆ.

ಬಳ್ಳಾರಿಗೆ ಉಸ್ತುವಾರಿಗಳು
ಬಿ.ಶ್ರೀರಾಮುಲು ಅವರ ರಾಜೀನಾಮೆಯಿಂದ ತೆರವಾದ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನ.3ರಂದು ಚುನಾವಣೆ ನಡೆಯಲಿದೆ. ಬಿ.ಶ್ರೀರಾಮುಲು ಅವರ ಸಹೋದಿ ಜೆ.ಶಾಂತಾ ಅವರು ಅಭ್ಯರ್ಥಿಯಾಗಿದ್ದಾರೆ.
ರಮೇಶ್ ಜಿಗಜಿಣಗಿ, ಬಿ.ಶ್ರೀರಾಮುಲು, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್, ಪ್ರಭು ಚೌವ್ಹಾಣ್, ರಾಮಣ್ಣ ಲಮಾಣಿ ಅವರು ಬಳ್ಳಾರಿಯ ಉಸ್ತುವಾರಿಗಳು.

ಮಂಡ್ಯ ಉಪ ಚುನಾವಣೆ
ಸಿ.ಎಸ್.ಪುಟ್ಟರಾಜು ಅವರ ರಾಜೀನಾಮೆಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ.
ಆರ್.ಅಶೋಕ್, ಪ್ರತಾಪ್ ಸಿಂಹ, ನಾಗೇಂದ್ರ, ಡಿ.ಎಸ್.ವೀರಯ್ಯ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳಾಗಿದ್ದಾರೆ.

ರಾಮನಗರ ವಿಧಾನಸಭೆ ಉಪ ಚುನಾವಣೆ
ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಘೋಷಣೆಯಾಗಿಲ್ಲ.
ಡಿ.ವಿ.ಸದಾನಂದ ಗೌಡ, ಸಿ.ಪಿ.ಯೋಗೇಶ್ವರ, ಮುನಿರಾಜು ಗೌಡ, ಎ.ನಾರಾಯಣ ಸ್ವಾಮಿ ಅವರು ವಿಧಾನಸಭೆ ಉಪ ಚುನಾವಣೆಗೆ ಉಸ್ತುವಾರಿಗಳಾಗಿದ್ದಾರೆ.

ಜಮಖಂಡಿ ಉಪ ಚುನಾವಣೆ
ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ನಿಧನದಿಂದಾಗಿ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಜಗದೀಶ್ ಶೆಟ್ಟರ್, ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಪಿ.ಸಿ.ಗದ್ದಿಗೌಡರ್, ಪ್ರಭಾಕರ ಕೋರೆ ಅವರು ಉಪ ಚುನಾವಣೆ ಉಸ್ತುವಾರಿಗಳಾಗಿದ್ದಾರೆ.












Click it and Unblock the Notifications