ಉಪ ಚುನಾವಣೆ : ಯಾವ ಕ್ಷೇತ್ರಕ್ಕೆ ಯಾರು ಕಾಂಗ್ರೆಸ್ ಉಸ್ತುವಾರಿ?
ಬೆಂಗಳೂರು, ಅಕ್ಟೋಬರ್ 15 : ಕರ್ನಾಟಕ ಕಾಂಗ್ರೆಸ್ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದೆ. 2 ವಿಧಾನಸಭಾ ಕ್ಷೇತ್ರ, 3 ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂಬುದು ಕಾಂಗ್ರೆಸ್ ಗುರಿ. ಆದ್ದರಿಂದ, ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆ ಮೈತ್ರಿಯನ್ನು ಮಾಡಿಕೊಳ್ಳಲಾಗಿದೆ. ಉಪ ಚುನಾವಣೆ ಫಲಿತಾಂಶ ಸಮ್ಮಿಶ್ರ ಸರ್ಕಾರದ ಮೇಲೆ ಪ್ರಭಾವ ಬೀರಲಿದೆಯೇ? ಕಾದು ನೋಡಬೇಕು.
ಮಂಡ್ಯ, ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭೆ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಮಗ್ರ ಉಸ್ತುವಾರಿಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಅದರಲ್ಲೂ ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಹೊಣೆ ಅವರ ಮೇಲಿದೆ.
ಮಂಡ್ಯ, ಶಿವಮೊಗ್ಗ ಮತ್ತು ರಾಮನಗರದಲ್ಲಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲ ಘೋಷಣೆ ಮಾಡಿದೆ. ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಯಾವ ಕ್ಷೇತ್ರಕ್ಕೆ ಯಾರು ಉಸ್ತುವಾರಿ ಇಲ್ಲಿದೆ ಮಾಹಿತಿ....

ಮಂಡ್ಯ ಲೋಕಸಭೆ ಉಪ ಚುನಾವಣೆ
ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಆದರೆ, ಪಕ್ಷ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಬೆಂಬಲ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸಚಿವ ಕೆ.ಜೆ.ಜಾರ್ಜ್ ಅವರನ್ನು ಮಂಡ್ಯಕ್ಕೆ ಉಸ್ತುವಾರಿಯನ್ನಾಗಿ ನೇಮಿಸಿದೆ.

ಆರ್.ದೇಶಪಾಂಡೆ ಉಸ್ತುವಾರಿ
ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಪಕ್ಷ ಬೆಂಬಲಿಸಿದೆ. ಕಾಂಗ್ರೆಸ್ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಶಿವಮೊಗ್ಗ ಚುನಾವಣೆ ಉಸ್ತುವಾರಿಯಾಗಿ ನೇಮಕ ಮಾಡಿದೆ.

ಬಳ್ಳಾರಿ ಲೋಕಸಭೆ ಉಪ ಚುನಾವಣೆ
ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿಗೆ ಪಕ್ಷ ಬೆಂಬಲ ನೀಡಿದೆ. ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಪಕ್ಷದ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕೊನೆ ದಿನ.

ರಾಮನಗರ ಉಪ ಚುನಾವಣೆ
ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯುತ್ತಿಲ್ಲ. ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಕಾಂಗ್ರೆಸ್ ಉಸ್ತುವಾರಿ. ಬಿಜೆಪಿಯಿಂದ ಎಲ್.ಚಂದ್ರಶೇಖರ್ ಅಭ್ಯರ್ಥಿ.

ಜಮಖಂಡಿ ಉಪ ಚುನಾವಣೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಉಪ ಮುಖ್ಯಮಂತ್ರಿ, ಸಚಿವ ಡಾ.ಜಿ.ಪರಮೇಶ್ವರ ಅವರು ಉಸ್ತುವಾರಿ. ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಆನಂದ್ ನ್ಯಾಮಗೌಡ ಆಯ್ಕೆಯಾಗಿದ್ದಾರೆ.











Click it and Unblock the Notifications