ಉಪ ಚುನಾವಣೆ; ಆರ್. ಆರ್. ನಗರ, ಶಿರಾದಲ್ಲಿ ಕಣದಲ್ಲಿ ಉಳಿದವರೆಷ್ಟು?
ಬೆಂಗಳೂರು, ಅಕ್ಟೋಬರ್ 19 : ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು ನಗರ ವ್ಯಾಪ್ತಿಯ ಆರ್. ಆರ್. ನಗರ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು, ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.
ಆರ್. ಆರ್. ನಗರ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್ನಿಂದ ಹೆಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಹಲವಾರು ಪಕ್ಷೇತರ ಅಭ್ಯರ್ಥಿಗಳು ಸಹ ಚುನಾವಣಾ ಕಣಕ್ಕಿಳಿದಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಟಿ. ಬಿ. ಜಯಚಂದ್ರ, ಬಿಜೆಪಿಯಿಂದ ಡಾ. ರಾಜೇಶ್ ಗೌಡ ಮತ್ತು ಜೆಡಿಎಸ್ನಿಂದ ಅಮ್ಮಾಜಮ್ಮ ಅಭ್ಯರ್ಥಿಗಳು. ಎರಡೂ ಕ್ಷೇತ್ರಗಳಲ್ಲಿ ನವೆಂಬರ್ 3ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 2018ರಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ಮುನಿರತ್ನ ಅವರ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿದೆ. ಶಿರಾದಲ್ಲಿ ಜೆಡಿಎಸ್ನಿಂದ ಆಯ್ಕೆಯಾಗಿದ್ದ ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಚುನಾವಣೆ ನಡೆಯುತ್ತಿದೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಉಪ ಚುನಾವಣೆ ಗೆಲ್ಲುವುದು ಪಕ್ಷದ ಪಾಲಿಗೆ ಪ್ರತಿಷ್ಠೆ. ಆದರೆ. 2018ರಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರಲಿಲ್ಲ.
ಉಪ ಚುನಾವಣೆಯ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಹೊಂದಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಆದ್ದರಿಂದ ಅವರ ಪ್ರತಿಷ್ಠೆ ಸಹ ಉಪ ಚುನಾವಣೆಯಲ್ಲಿ ಅಡಗಿದೆ.
ಶಿರಾ ಕ್ಷೇತ್ರದಲ್ಲಿ 2018ರಲ್ಲಿ ಜೆಡಿಎಸ್ ಪಕ್ಷ ಗೆದ್ದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಬ್ಬರದ ನಡುವೆ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಪಕ್ಷಕ್ಕೆ ಸವಾಲಿನ ಸಂಗತಿ. ಬಿ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ಕೊಟ್ಟಿರುವ ಪಕ್ಷ ಅನುಕಂಪದ ಮತಗಳ ನಿರೀಕ್ಷೆಯಲ್ಲಿದೆ.












Click it and Unblock the Notifications