ಉಪ ಚುನಾವಣೆ; ಸಂಭಾವ್ಯ ಅಭ್ಯರ್ಥಿ ಪಟ್ಟಿ ಬದಲಾಯಿಸಿದ ಕಾಂಗ್ರೆಸ್?
ಬೆಂಗಳೂರು, ಅಕ್ಟೋಬರ್ 14 : 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತಂತ್ರವನ್ನು ರೂಪಿಸುತ್ತಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷ ಎಚ್ಚರಿಕೆ ಹೆಜ್ಜೆ ಇಡಲಿದೆ. ಪ್ರಸ್ತುತ ತಯಾರು ಮಾಡಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆಯಾಗಲಿದೆ.
ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮತ್ತೊಂದು ಕಡೆ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಅಕ್ಟೋಬರ್ 22ರ ಬಳಿಕ ನಡೆಯಲಿದೆ. ನ್ಯಾಯಾಲಯದ ಆದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ
Recommended Video
ಅಕ್ಟೋಬರ್ 15ರ ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?
ಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಈ ಬೆಳವಣಿಗೆಯನ್ನು ಗಮನಿಸಿರುವ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ಕಾದು ನೋಡುವ ತಂತ್ರವನ್ನು ಪಕ್ಷ ಅನುಸರಿಸಲಿದೆ.
15 ಕ್ಷೇತ್ರದ ಉಪ ಚುನಾವಣೆ; ಮತ ಎಣಿಕೆ ದಿನಾಂಕ ನಿಗದಿ
ಯಾವ-ಯಾವ ಕ್ಷೇತ್ರಗಳು
ಉಪ ಚುನಾವಣೆಗಾಗಿ ಕಾಂಗ್ರೆಸ್ ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಈ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗುತ್ತದೆ. ಅದರಲ್ಲೂ ಹೊಸಕೋಟೆ, ಹಿರೇಕೆರೂರು, ಗೋಕಾಕ್, ಕಾಗವಾಡ ಕ್ಷೇತ್ರದ ಅಭ್ಯರ್ಥಿಗಳು ಬದಲಾವಣೆಯಾಗಬಹುದು ಎಂಬ ಸುದ್ದಿ ಹಬ್ಬಿದೆ.
ಬಿಜೆಪಿಗೆ ಕಗ್ಗಂಟಾದ ಕ್ಷೇತ್ರಗಳು
ಅಚ್ಚರಿ ಎಂದರೆ ಬಿಜೆಪಿಗೆ ಕಗ್ಗಂಟಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲು ಹೊರಟಿದೆ. ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಚೇಗೌಡ, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಮತ್ತು ರಾಜು ಕಾಗೆ, ಹಿರೇಕೆರೂರು ಕ್ಷೇತ್ರದಲ್ಲಿ ಬಿ. ಸಿ. ಪಾಟೀಲ್ ಮತ್ತು ಯು. ಬಿ. ಬಣಕಾರ್ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ.
ವಲಸೆ ಬಂದರೆ ಟಿಕೆಟ್ ನೀಡಬೇಕೆ?
ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನಗೊಂಡು ನಾಯಕರು ಕಾಂಗ್ರೆಸ್ಗೆ ಬಂದರೆ ಟಿಕೆಟ್ ನೀಡಬೇಕೆ? ಎಂಬ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆದಿದೆ. ಮಾಜಿ ಶಾಸಕ ರಾಜು ಕಾಗೆ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಕಾಂಗ್ರೆಸ್ ಸೇರುವುದಾಗಿ ಈಗಾಗಲೇ ಘೋಷಣೆ ಮಾಡಿದ್ದು, ಬಿಜೆಪಿ ನಾಯಕರ ತಲೆ ನೋವಿಗೆ ಕಾರಣವಾಗಿದೆ.
ಸಂಭಾವ್ಯ ಅಭ್ಯರ್ಥಿಗಳು ಅಂತಿಮ
ಟಿಕೆಟ್ಗಾಗಿ ಪೈಪೋಟಿ ಇರುವ ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ಉಳಿದ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಗೋಕಾಕ್ ವಿಚಾರದಲ್ಲಿ ಪಕ್ಷ ಇನ್ನೂ ಚರ್ಚೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಪ್ರಬಲರನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದೆ.