ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಮುಹೂರ್ತ ನಿಗದಿ
ಬೆಂಗಳೂರು, ಅಕ್ಟೋಬರ್ 09: ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ದಿನಾಂಕ ನಿಗದಿ ಮಾಡಲಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. "ರಾಜರಾಜೇಶ್ವರಿ ನಗರದಲ್ಲಿ ಅಕ್ಟೋಬರ್ 14ರಂದು ಮತ್ತು ಅಕ್ಟೋಬರ್ 15ರಂದು ಶಿರಾದಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ರಾಜರಾಜೇಶ್ವರಿ ನಗರಕ್ಕೆ ಹೆಚ್. ಕುಸುಮಾ ಮತ್ತು ಶಿರಾ ಕ್ಷೇತ್ರಕ್ಕೆ ಟಿ. ಬಿ. ಜಯಚಂದ್ರ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಚುನಾವಣಾ ಆಯೋಗ ಅಧಿಸೂಚನೆಯನ್ನು ಪ್ರಕಟಿಸಲಿದ್ದು, ಅಕ್ಟೋಬರ್ 16ರ ತನಕ ನಾಮಪತ್ರ ಸಲ್ಲಿಸಬಹುದು.
ಬಿಜೆಪಿ ಎರಡೂ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿ ಘೋಷಣೆ ಮಾಡಬೇಕು. ಜೆಡಿಎಸ್ ಶಿರಾಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ್ದು, ಆರ್. ಆರ್. ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಸಿದ್ದರಾಮಯ್ಯ ಇರುತ್ತಾರೆ
"ಆಯೋಗ ಅಧಿಸೂಚನೆ ಹೊರಡಿಸುವುದನ್ನು ಕಾಯುತ್ತಿದ್ದೇವೆ. ಆರ್. ಆರ್. ನಗರದಲ್ಲಿ ಇದೇ 14ರಂದು, ಶಿರಾದಲ್ಲಿ 15ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಎರಡೂ ಕಡೆಗಳಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇರುತ್ತಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.

ರಾಜೇಶ್ ಗೌಡ ಯಾರು ಗೊತ್ತಿಲ್ಲ
ಶಿರಾ ಕ್ಷೇತ್ರದ ಬಗ್ಗೆ ಮಾತನಾಡಿದ ಡಿ. ಕೆ. ಶಿವಕುಮಾರ್, "ರಾಜೇಶ್ ಗೌಡ ಯಾರು ಎಂದು ನನಗೆ ಗೊತ್ತಿಲ್ಲ. ಕ್ಷೇತ್ರಕ್ಕೆ ರಾಜಣ್ಣ ಅವರು ಜಯಚಂದ್ರ ಹೆಸರು ಪ್ರಸ್ತಾಪ ಮಾಡಿದರು. ಪರಮೇಶ್ವರ ಅವರು ಅದಕ್ಕೆ ಒಪ್ಪಿಗೆ ನೀಡಿದರು. ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ" ಎಂದರು.

ಅಭ್ಯರ್ಥಿ ಅಂತಿಮಗೊಳಿಸಿದ್ದೇವೆ
"4 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ, ಎರಡೂ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ" ಎಂದು ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
Recommended Video

ಜನರ ಮುಂದೆ ಇಡಲಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ. ಕೆ. ಶಿವಕುಮಾರ್, "ನಾನು ಭ್ರಷ್ಟನೊ, ತತ್ವಜ್ಞಾನಿಯೋ ಎಂಬುದನ್ನು ಸಿ. ಟಿ. ರವಿ ಜನರ ಮುಂದೆ ಇಡಲಿ. ಕೆಲವರಿಗೆ ನನ್ನ ಹೆಸರು ಹೇಳಿದರೆ ಮಾರ್ಕೆಟ್ ಸಿಗುತ್ತದೆ" ಎಂದು ಲೇವಡಿ ಮಾಡಿದರು.












Click it and Unblock the Notifications