ಉಪ ಚುನಾವಣೆ; ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಸಭೆ
ಬೆಂಗಳೂರು, ನವೆಂಬರ್ 10 : 15 ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಹತ್ವ ಸಭೆ ನಡೆಸಿದರು. ನವೆಂಬರ್ 11ರ ಸೋಮವಾರ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ.
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಡಿ. ಕೆ. ಶಿವಕುಮಾರ್, ಎಂ. ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಕೆ. ಜೆ. ಜಾರ್ಜ್ ಮುಂತಾದವರು ಪಾಲ್ಗೊಂಡಿದ್ದರು.
15 ಕ್ಷೇತ್ರದ ಉಪ ಚುನಾವಣೆ; ನ.11ರಿಂದ ನೀತಿ ಸಂಹಿತೆ ಜಾರಿ
ಸೋಮವಾರ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗುತ್ತಿದೆ. ಬುಧವಾರ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ತೀರ್ಪು ಪ್ರಕಟವಾಗುತ್ತಿದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಸಿದ್ದರಾಮಯ್ಯ ನಾಯಕರ ಜೊತೆ ಮಾತುಕತೆ ನಡೆಸಿದರು.
ಹುಣಸೂರು ಉಪ ಚುನಾವಣೆ; ಬಿಜೆಪಿಯ ಅಚ್ಚರಿಯ ನಡೆ!
15 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 8 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಳಿದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಎರಡು ದಿನದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಕಾಗವಾಡ ಉಪ ಚುನಾವಣೆ; ಬಿಜೆಪಿಗೆ ಹಿನ್ನಡೆ ತಂದ ಮಾಜಿ ಶಾಸಕ
ಸಿದ್ದರಾಮಯ್ಯ ಹೇಳಿದ್ದೇನು?
ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ, "ಉಳಿದ 7 ಕ್ಷೇತ್ರಗಳ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಿದ್ದೇವೆ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ತೀರ್ಮಾನಿಸಿದ್ದೇವೆ. ಅಧ್ಯಕ್ಷರು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಾರೆ" ಎಂದು ಹೇಳಿದರು.
ಯಾರು ಬಂದರೂ ಸ್ವಾಗತ
ಕಾಗವಾಡ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, "ಪಕ್ಷದ ಸಿದ್ದಾಂತ ಒಪ್ಪಿ ಯಾರೇ ಬಂದರೂ ಸ್ವಾಗತ. ಉಪ ಚುನಾವಣೆ ಟಿಕೆಟ್ ಅನ್ನು ಅವರಿಗೆ ನೀಡುವ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ" ಎಂದು ಹೇಳಿದರು.
ಯಾವ-ಯಾವ ಕ್ಷೇತ್ರ ಬಾಕಿ?
ಕಾಂಗ್ರೆಸ್ ಉಪ ಚುನಾವಣೆ ನಡೆಯುವ ಯಶವಂತಪುರ, ಶಿವಾಜಿನಗರ, ಕೆ. ಆರ್. ಪೇಟೆ, ಗೋಕಾಕ್, ಅಥಣಿ, ಕಾಗವಾಡ, ವಿಜಯನಗರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಾಗಿದೆ. ಉಪ ಚುನಾವಣೆ ಸಂಪೂರ್ಣ ಉಸ್ತುವಾರಿಯನ್ನು ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ವಹಿಸಿದೆ.
ಸೋಮವಾರ ಅಧಿಸೂಚನೆ
ಚುನಾವಣಾ ಆಯೋಗ ಉಪ ಚುನಾವಣೆಗೆ ನ.11ರಂದು ಅಧಿಸೂಚನೆ ಪ್ರಕಟಿಸಲಿದೆ. ನವೆಂಬರ್ 18ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.