ಶಿವಮೊಗ್ಗ ರಾಜಕೀಯ : ಶಿಕಾರಿಪುರದಿಂದ ಬಂದ ಹೊಸ ಸುದ್ದಿ!
ಶಿವಮೊಗ್ಗ, ಮಾರ್ಚ್ 14 : ಈ ಬಾರಿಯ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ. ಬಿ.ಎಸ್.ಯಡಿಯೂರಪ್ಪ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಹಾಲಿ ಶಾಸಕ ಬಿ.ವೈ.ರಾಘವೇಂದ್ರ ಅವರು ಎಲ್ಲಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.?
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಯಡಿಯೂರಪ್ಪ ಕರ್ನಾಟಕದ ಬಿಜೆಪಿಯ ಅಧ್ಯಕ್ಷರು, 2018ರ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ. ಶಿವಮೊಗ್ಗ ಸಂಸದರಾಗಿರುವ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಯಡಿಯೂರಪ್ಪ ಪುತ್ರ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ? ಎಂಬುದು ಸದ್ಯದ ಪ್ರಶ್ನೆ.
ಕ್ಷೇತ್ರ ಪರಿಚಯ : ಶಿಕಾರಿಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಯಾರು?
2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಶಿಕಾರಿಪುರದಿಂದ ಯಡಿಯೂರಪ್ಪ ಸ್ಪರ್ಧಿಸಿ ಗೆದ್ದಿದ್ದವರು. 2014ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ನಡೆದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಎಚ್.ಟಿ.ಬಳಿಗಾರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ತವರು ಕ್ಷೇತ್ರದಲ್ಲಿ ಯಡಿಯೂರಪ್ಪ ಅವರು ಎಷ್ಟು ಮತಗಳ ಅಂತರದಿಂದ ಗೆಲ್ಲುವರು ಎಂಬ ಲೆಕ್ಕಾಚಾರ ಆರಂಭವಾಗಿದೆ...
ಶಿಕಾರಿಪುರ ಯಡಿಯೂರಪ್ಪ ತವರು ಕ್ಷೇತ್ರ
ಶಿಕಾರಿಪುರ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸೋಲಿಲ್ಲದ ಸರದಾರರು ಅಲ್ಲ. 1999ರ ಚುನಾವಣೆಯಲ್ಲಿ ಕಾಂಗ್ರೆಸ್ನ ಬಿ.ಎಸ್.ಮಹಾಲಿಂಗಪ್ಪ ಅವರು 7561 ಮತಗಳ ಅಂತರದಿಂದ ಯಡಿಯೂರಪ್ಪ ಅವರನ್ನು ಸೋಲಿಸಿದ್ದರು.
ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಶೀಕಾರಿಪುರ ಕ್ಷೇತ್ರದಲ್ಲಿ ಭಾರೀ ಪ್ರಭಾವ ಹೊಂದಿದ್ದಾರೆ. ಅವರ ವಿರುದ್ಧ ಗೆಲ್ಲುವುದು ಅಷ್ಟು ಸುಲಭವಲ್ಲ. 2013ರ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಯಡಿಯೂರಪ್ಪ ಅವರು 69,126 ಮತಗಳನ್ನು ಪಡೆದಿದ್ದರು.
2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಯಡಿಯೂರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿ.ವೈ.ರಾಘವೇಂದ್ರ ಅವರು 71,547 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳು ಅಂತಿಮ, ಯಾರಿಗೆ ಎಲ್ಲಿ ಟಿಕೆಟ್?
ಬಿ.ವೈ.ರಾಘವೇಂದ್ರ ಎಲ್ಲಿಂದ ಸ್ಪರ್ಧೆ?
2018ರ ವಿಧಾನಸಭೆ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಅವರೇ ಆಗಿರುವುದರಿಂದ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ.ವೈ.ರಾಘವೇಂದ್ರ. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಿದರೆ ರಾಘವೇಂದ್ರ ಅವರು ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಎಂಬುದು ಪ್ರಶ್ನೆಯಾಗಿತ್ತು. ಅವರು ಹಾವೇರಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.
ಆದರೆ, ಸದ್ಯದ ಮಾಹಿತಿ ಪ್ರಕಾರ ಬಿ.ವೈ.ರಾಘವೇಂದ್ರ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ. 2019 ರ ಲೋಕಸಭೆ ಚುನಾವಣೆಗೆ ಅವರು ಶಿವಮೊಗ್ಗದಿಂದ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಯಾರೂ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.
ಬಿ.ವೈ.ರಾಘವೇಂದ್ರ ಸಂಸದರಾಗಿದ್ದರು
2009ರ ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಕ್ಷೇತ್ರದಲ್ಲಿ 4,82,783 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿದ್ದರು. 2019ರ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಬಿ.ಎಸ್.ಯಡಿಯೂರಪ್ಪ 2013ರ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಕೆಜೆಪಿ ಮೂಲಕ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ 606,216 ಮತಗಳನ್ನು ಪಡೆದು ಜಯಗಳಿಸಿದ್ದರು.
ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಕ್ಷೇತ್ರವನ್ನು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ತಂದೆ-ಮಗ ಕ್ಷೇತ್ರ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ.
ಕುತೂಹಲ ಹುಟ್ಟಿಸುವ ಕ್ಷೇತ್ರ
ಶಿಕಾರಿಪುರ ಕ್ಷೇತ್ರ ಪ್ರತಿ ಚುನಾವಣೆಯಲ್ಲಿಯೂ ಕುತೂಹಲ ಕೆರಳಿಸುವ ಕ್ಷೇತ್ರ. 2008ರ ವಿಧಾನಸಭೆ ಚುನಾವಣೆಯಲ್ಲಿಯೂ ಎಸ್.ಬಂಗಾರಪ್ಪ ಅವರು ಸಮಾಜವಾದಿ ಪಕ್ಷದಿಂದ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದಾಗ ಕ್ಷೇತ್ರ ಕುತೂಹಲ ಹುಟ್ಟಿಸಿತ್ತು.
2014ರ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಸ್ಪರ್ಧಿಸಿದಾಗಲೂ ಕುತೂಹಲ ಕೆರಳಿಸಿದ ಕ್ಷೇತ್ರವಾಗಿತ್ತು. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಕಾಂಗ್ರೆಸ್ ಜೊತೆ ಕೈ ಜೋಡಿಸಿತ್ತು. ರಾಘವೇಂದ್ರ ಅವರು 71,547 ಮತ ಪಡೆದರೆ, ಕಾಂಗ್ರೆಸ್ನ ಶಾಂತವೀರಪ್ಪ ಗೌಡ 65,117 ಮತಗಳನ್ನು ಪಡೆದಿದ್ದರು.
ಶಿಕಾರಿಪುರ ಕ್ಷೇತ್ರದಲ್ಲಿ ಅಪ್ಪ-ಮಗನ ಪಾರುಪತ್ಯವನ್ನು ಮುರಿಯುವುದು ಅಷ್ಟು ಸುಲಭದ ಮಾತಲ್ಲ. ಈ ಬಾರಿಯ ಚುನಾವಣೆಗೆ ಜೆಡಿಎಸ್ ಎಚ್.ಟಿ.ಬಳಿಗಾರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂದು ಕಾದು ನೋಡಬೇಕಿದೆ.
ಶಿವಮೊಗ್ಗ ಕ್ಷೇತ್ರದ ಟಿಕೆಟ್ ಅಂತಿಮ
2018ರ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಸೇರಿದ್ದು ಜಿಲ್ಲೆಯ ರಾಜಕೀಯ ಚಿತ್ರಣವನ್ನು ಬದಲಾವಣೆ ಮಾಡಿದೆ.
ತೀರ್ಥಹಳ್ಳಿಯಿಂದ ಆರಗ ಜ್ಞಾನೇಂದ್ರ, ಶಿವಮೊಗ್ಗ ನಗರದಿಂದ ಕೆ.ಎಸ್.ಈಶ್ವರಪ್ಪ, ಸೊರಬದಿಂದ ಕುಮಾರ್ ಬಂಗಾರಪ್ಪ, ಸಾಗರ ಕ್ಷೇತ್ರದಿಂದ ಹಾರತಾಳು ಹಾಲಪ್ಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಶಿಕಾರಿಪುರ ಕ್ಷೇತ್ರದಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು 2018ರ ಚುನಾವಣೆಯ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆ ಮಾಡಲಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳು ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ. ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳು ಅಂತಿಮಗೊಳ್ಳುವ ಸಾಧ್ಯತೆ ಇದೆ.