ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಕೊನೆಗೂ ಸ್ಥಾನ
ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಚ ಬಿ.ವೈ. ರಾಘವೇಂದ್ರ ಅವರಿಗೆ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿಗಳ ಪಟ್ಟಿಯಲ್ಲಿ ಕೊನೆಗೂ ಸ್ಥಾನ ನೀಡಲಾಗಿದೆ. ಹಾನಗಲ್ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಸೇರ್ಪಡೆಗೊಂಡಿದೆ.
ಬಿಜೆಪಿ ರಾಜ್ಯಘಟಕ ಭಾನುವಾರ ಬಿಡುಗಡೆ ಮಾಡಿದ್ದ ಚುನಾವಣಾ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಇರಲಿಲ್ಲ. ಇದಕ್ಕೆ ವಿಜಯೇಂದ್ರ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ನಾಯಕರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ಮಾಡಲಾಗಿತ್ತು. ಇದರಿಂದ ಸೋಮವಾರ ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಜಯೇಂದ್ರ ಅವರ ಹೆಸರನ್ನು ಹಾನಗಲ್ ಉಪಚುನಾವಣಾ ಉಸ್ತುವಾರಿಗಳ ಪಟ್ಟಿಯಲ್ಲಿ ಸೇರಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಯಾರು ಎಂಬುದಕ್ಕಿಂತ ಚುನಾವಣೆ ಉಸ್ತುವಾರಿ ಯಾರು ಎಂಬುದೇ ಸೋಮವಾರ ಬಹುಚರ್ಚಿತ ವಿಷಯವಾಗಿತ್ತು. ಚುನಾವಣಾ ಚಾಣಕ್ಯ, ಚುನಾವಣಾ ತಜ್ಞ ಎಂಬ ಹೆಸರುಗಳನ್ನು ಅಭಿಮಾನಿಗಳಿಂದ ಪಡೆದಿರುವ ವಿಜಯೇಂದ್ರ ಅವರ ಹೆಸರು ಉಪಚುನಾವಣೆಯ ಉಸ್ತುವಾರಿಗಳ ಪಟ್ಟಿಯಲ್ಲಿಯೇ ಇಲ್ಲದಿರುವುದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಅಭಿಮಾನಿಗಳಲ್ಲಿ ಅಕ್ರೋಶವನ್ನೂ ಉಂಟುಮಾಡಿತ್ತು. ಅಲ್ಲದೆ, ಪಕ್ಷದ ನಾಯಕರು ಮತ್ತು ಆರ್ಎಸ್ಎಸ್ ನಾಯಕರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದ ವಿಜಯೇಂದ್ರ, "ಪಕ್ಚದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ. ಇನ್ಯಾವುದೂ ಅಲ್ಲ. ಭಿನ್ನಾಭಿಪ್ರಾಯದ ಧ್ವನಿಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ಉಪಚುನಾವಣೆ ಘೋಷಣೆಯಾಗಿರುವ ಎರಡು ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎನ್ನುವ ಕಾರಣಕ್ಕೆ ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದು ಖಂಡಿತ ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ" ಎಂದು ಸ್ಪಷ್ಟನೆ ನೀಡಿದ್ದರು.
ಚುನಾವಣಾ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇಲ್ಲದಿರುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮತ್ತಷ್ಟು ಕಡೆಗಣಿಸಿದಂತೆ ಎಂದು ಹೇಳಲಾಗಿತ್ತು. ವಿಜಯೇಂದ್ರ ಅವ ಕುರಿತು ನಡೆದ ಚರ್ಚೆ ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂಬ ದೃಷ್ಟಿಯಿಂದ ಅವರ ಹೆಸರನ್ನು ಸೇರ್ಪಡೆಗೊಳಿಸಿ ಪರಿಷ್ಕೃತ ಪಟ್ಟಿ ಹೊರಡಿಸಲಾಗಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಮುರುಗೇಶ್ ನಿರಾಣಿ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ಪಾಟೀಲ, ಶಿವರಾಮ್ ಹೆಬ್ಬಾರ್, ಶಿವಕುಮಾರ್ ಉದಾಸಿ, ಎನ್. ರವಿಕುಮಾರ್, ಮಹೇಶ್ ಟೆಂಗಿನಕಾಯಿ, ರಾಜುಗೌಡ, ನೆಹರೂ ಓಲೇಕಾರ್, ಎಂ. ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಗುತ್ತೂರು ಅವರ ಹೆಸರುಗಳು ಇದ್ದವು. ಈಗ ಈ ಪಟ್ಟಿಯಲ್ಲಿ ಕೊನೆಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಸೇರ್ಪಡೆಯಾಗಿದೆ.
ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿಯನ್ನು ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ. ಪಾಟೀಲ, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಸಿದ್ದರಾಜು, ಬಸವನಗೌಡ ಪಾಟೀಲ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ, ಎ.ಎಸ್. ಪಾಟೀಲ ನಡಹಳ್ಳಿ, ಪಿ.ರಾಜೀವ್, ಶ್ರೀಕಾಂತ ಕುಲಕರ್ಣಿ, ಬಾಬುರಾವ ಚಿಂಚನಸೂರ ಅವರಿಗೆ ವಹಿಸಲಾಗಿದೆ.












Click it and Unblock the Notifications