ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನಾಗಿ ಬಿವೈ ವಿಜಯೇಂದ್ರ ಆಯ್ಕೆ ಮಾಡಲು ಆಗ್ರಹ
ಬೆಂಗಳೂರು, ಮೇ 17: ಒಂದೆಡೆ ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಚರ್ಚೆಯಾಗುತ್ತಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರಕ್ಕೆ ಸಂಬಂಧಿದಂತೆ ಚರ್ಚೆಗಳು ಶುರುವಾಗಿವೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯಲ್ಲಿ ಈಗ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಈ ನಡುವೆ ಪ್ರತಿಪಕ್ಷದ ನಾಯಕ ಆಯ್ಕೆಯಲ್ಲದರೂ ಚಾಣಕ್ಷತೆ ವಹಿಸಲು ಪಕ್ಷ ಮುಂದಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ಲಿಂಗಾಯತ ಸಮುದಾಯವನ್ನು ಎದುರು ಹಾಕಿಕೊಂಡದ್ದೇ ಕಾರಣ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರೆದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಪೂರ್ವಕವಾಗಿ ಬದಿಗೆ ಸರಿಸಿದ್ದು ಕೂಡ ಒಂದು ಪ್ರಮುಖ ಕಾರಣ ಎಂದು ಅಭಿಪ್ರಾಯಪಡಲಾಗುತ್ತಿದೆ. ಯಡಿಯೂರಪ್ಪನವರನ್ನು ಕಣ್ಣೀರು ಈ ಚುನಾವಣೆಯ ಫಲಿತಾಂಶ ಎಂದು ಜಗದೀಶ್ ಶೆಟ್ಟರ್ ಅವರು ಹೇಳಿರುವುದು ಕೂಡ ಇಲ್ಲಿ ಇದು ಸತ್ಯ ಎಂದು ಭಾವಿಸಲಾಗುತ್ತಿದೆ.
ಹೀಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರನ್ನು ನೇಮಿಸಲಾಗುತ್ತಿದೆ ಎಂದು ಮಾತುಗಳು ಕೇಳಿಬರುತ್ತಿವೆ.
ಇನ್ನು ಲಿಂಗಾಯತ ಸಂಘಟನೆಗಳು ಕೂಡ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡುವಂತೆ ಆಗ್ರಹ ಮಾಡುತ್ತಿವೆ. ಈ ಬಾರಿಯ ವಿಧಾನಸಭೆಯಲ್ಲಿ ದೆಹಲಿ ವ್ಯಕ್ತಿಯೊಬ್ಬರ ಏಕಮುಖ ನಿರ್ಣಯದಿಂದ ಎಂದು ಬಿಜೆಪಿಯ ಅನೇಕ ಪ್ರಮುಖ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ವೀರಶೈವ ಲಿಂಗಾಯತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಪಕ್ಷ ಹಾಗೂ ಕರ್ನಾಟಕದ ಹಿತದೃಷ್ಟಿಯಿಂದ ವಿರೋಧ ಪಕ್ಷದ ನಾಯಕರಾಗಿ ಸನ್ಮಾನ್ಯ ಶರಣ ಶ್ರೀ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿ ಬರೆದುಕೊಂಡಿದೆ. ಕರ್ನಾಟಕದಲ್ಲಿ ಸಂಚಾರ ಮಾಡಿ ಹಲವು ಮಠಗಳ ಸಂಪರ್ಕ ಮಾಡಿ ಗುರುತಿಸಿಕೊಂಡಿರುವ ವಿಜಯೇಂದ್ರ ಅವರು ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದರೆ ಮುಂದಿನ ದಿನಗಳಲ್ಲಿ ಲಿಂಗಾಯತ ಸಮುದಾಯ ಮತ್ತೆ ಬಿಜೆಪಿ ಕಡೆ ವಾಲುವ ಸಾಧ್ಯತೆ ಇದ್ದೇ ಇದೆ.
ಹೀಗಾಗಿ ಯವ ನಾಯಕರಾಗಿರುವ ಬಿವೈ ವೀಜಯೇಂದ್ರ ಅವರನ್ನು ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅಲ್ಲದೆ ಬಿಜೆಪಿಯಲ್ಲಿ ಹಿರಿಯ ನಾಯಕರಾಗಿರುವ ಆರ್ ಅಶೋಕ್, ಅರವಿಂದ್ ಬೆಲ್ಲದ್ ಅವರ ಹೆಸರು ಕೂಡ ಕೇಳಿಬರುತ್ತಿದೆ.












Click it and Unblock the Notifications