BY Vijayendra ಕಾಂಗ್ರೆಸ್ ಸರ್ಕಾರದವರು ಮೂರೂ ಬಿಟ್ಟಿದ್ದಾರೆ: ವಿಜಯೇಂದ್ರ ಆಕ್ರೋಶ
ಬೆಳಗಾವಿ, ಡಿಸೆಂಬರ್ 12: ಕಾಂಗ್ರೆಸ್ ಸರಕಾರದವರು ಮೂರೂ ಬಿಟ್ಟಿದ್ದಾರೆ. 136 ಶಾಸಕರಿದ್ದೇವೆ, ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರ ಸರಕಾರ ಇದ್ದಂತಿದೆ. ಹಿಂದಿನ ಅವಧಿಯಲ್ಲೂ ಇದೇರೀತಿ ನಡೆದುಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಸದನದಲ್ಲಿ ಪ್ರಶ್ನಿಸುತ್ತೇವೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸ್ವಾಮೀಜಿ, ರೈತಾಪಿ ವರ್ಗದ ಧರಣಿ- ಹೋರಾಟದ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಬೇಕಿತ್ತು. ಮುಖ್ಯಮಂತ್ರಿಗಳಿಗೆ ಏನು ಧಾಡಿ ಆಗಿತ್ತು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇಲ್ಲೇ ಸುವರ್ಣ ಸೌಧದಲ್ಲಿ ಇದ್ದರೂ ಸಹ ಮುಖ್ಯಮಂತ್ರಿಗಳು ಮನಸ್ಸು ಮಾಡಲಿಲ್ಲ. ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡುವ ಸೌಜನ್ಯವನ್ನು ತೋರಲಿಲ್ಲ. ಬದಲಾಗಿ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಆಗಿರುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.
ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಪಡೆಯುತ್ತೇವೆ. ದರ್ಪದಿಂದ ಮೆರೆದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಎರಡೂ ಸದನದಲ್ಲಿ ಇದನ್ನು ಆಗ್ರಹಿಸಲಿವೆ ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದರು.
ಈ ವೇಳೆ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಮಾತನಾಡಿ, ರಾಜ್ಯದಲ್ಲಿ ಹಿಟ್ಲರ್ ರೀತಿ ಸರ್ಕಾರದ ನಡೆಯುತ್ತಿದೆ. ಅಧಿವೇಶನದಲ್ಲಿ ಬಾಣಂತಿ ಸಾವು, ರೇಷನ ಕಾರ್ಡ್ ಅವಾಂತರ ಚರ್ಚೆ ಆಗಬೇಕಿತ್ತು.
ಅಧಿವೇಶನ ನಡೆಸುವುದಕ್ಕೂ ಮೀನಾಮೇಷ ಮಾಡ್ತಿದೆ, ಕೇಳಿದ್ರೆ ಸಬೂಬ ಮೇಲೆ ಸಬೂಬ ಹೇಳುತ್ತಿದೆ. ನಾವು ಲಿಂಗಾಯತ ಲಾಠಿ ಹಲ್ಲೆ ಖಂಡಿಸಿ ಹೋರಾಟ ಮಾಡುತ್ತೇವೆ. ಇದೊಂದು ತುಘಲಕ್ ಸರ್ಕಾರ ಅಂತಾ ಹೋರಾಟ ಮಾಡುತ್ತೇವೆ. ಪೊಲೀಸರು ಕಂಟ್ರೋಲ್ ಮಾಡಬೇಕಿತ್ತು ದಂಗೆ ಏಳುವ ಹಾಗೆ ಮಾಡಿದ್ದಾರೆ ಎಂದು ಲಾಠಿ ಚಾರ್ಜ್ ಕುಡಿರು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮೀಸಲಾತಿ ನೀಡದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಪ್ರಾಣ ಕೊಟ್ಟೇವು ಮೀಸಲಾತಿ ಬಿಡೆವು, ಹೋರಾಟಗಾರರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಇವೇ ಮೊದಲಾದ ಭಿತ್ತಿಪತ್ರಗಳನ್ನು ಹಿಡಿದಿದ್ದ ಶಾಸಕರು, ವಿಧಾನಪರಿಷತ್ ಸದಸ್ಯರು ಸರಕಾರದ ಧೋರಣೆಯನ್ನು ಖಂಡಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯದ ಮಾಜಿ ಸಚಿವರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.












Click it and Unblock the Notifications