ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ: ಮಹತ್ವದ ಹೇಳಿಕೆ ನೀಡಿದ ಬಿವೈ ವಿಜಯೇಂದ್ರ
ಬೆಂಗಳೂರು, ಫೆಬ್ರವರಿ05: ರಾಜ್ಯದಲ್ಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. 28 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಯಾರೆಂದು ಬಿಜೆಪಿ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಮಹತ್ವದ ಹೇಳಿಕೆಯನ್ನ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಸೂಕ್ತ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾಜೀ ಅವರು, ಇದೇ 10ರಂದು ಬೆಂಗಳೂರಿಗೆ ಬರಲಿದ್ದಾರೆ. ಇಲ್ಲಿ ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್ ಸಭೆಯಲ್ಲಿ ಭಾಗವಹಿಸುತ್ತಾರೆ. ನಂತರ ಕೋರ್ ಕಮಿಟಿ ಸದಸ್ಯರ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸರಕಾರಿ ಕಾರ್ಯಕ್ರಮವೂ ಇದೆ ಎಂದು ಕೇಳಿದ್ದೇವೆ ಎಂದರು.

ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯಿಂದ ಜನರು ಮಾತ್ರವಲ್ಲ, ಜಾನುವಾರುಗಳೂ ಈ ಸರಕಾರಕ್ಕೆ ಶಾಪ ಹಾಕುತ್ತಿವೆ. ರಾಜ್ಯದ ರೈತರು, ಬಡವರ ಕೋಪವಷ್ಟೇ ಅಲ್ಲ, ಜಾನುವಾರುಗಳ ಕೋಪಕ್ಕೂ ಕೂಡ ರಾಜ್ಯ ಸರಕಾರ ಸಿಲುಕಿದೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡುತ್ತಿದ್ದರು. ಅದರ ಪರಿಣಾಮವಾಗಿ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿದಿನ 80-85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಇಂದಿನ ಕಾಂಗ್ರೆಸ್ ಸರಕಾರವು ಹಾಲು ಉತ್ಪಾದಕ ರೈತರಿಗೆ 716 ಕೋಟಿ ಬಾಕಿ ಪ್ರೋತ್ಸಾಹಧನವನ್ನು ಉಳಿಸಿಕೊಂಡಿದೆ ಎಂದು ಟೀಕಿಸಿದರು. ಇದರ ಪರಿಣಾಮವಾಗಿ 10 ಲಕ್ಷ ಲೀಟರ್ನಷ್ಟು ಹಾಲು ಸಂಗ್ರಹಣೆ ಕಡಿಮೆ ಆಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹಿರಿಯರು ಬಿಜೆಪಿ ಬಗ್ಗೆ ಟೀಕಿಸುತ್ತಾರೆ. 'ಮಾನ ಮರ್ಯಾದೆ ಇದ್ದರೆ..' ಎನ್ನುತ್ತಾರೆ. ನಾನು ಆ ಭಾಷೆ ಬಳಸುವುದಿಲ್ಲ. ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರೈತರ ದುಡ್ಡು ಉಳಿಸಿಕೊಂಡ ಪಾಪದ ಸರಕಾರ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಸರಕಾರ ಪ್ರತಿಬಾರಿ ತನ್ನ ಹೊಣೆಗಾರಿಕೆ ಮರೆತು ಕೇಂದ್ರ ಸರಕಾರವನ್ನು ತೋರಿಸುತ್ತಿದೆ. ಹಣಕಾಸು ವಿಚಾರ ಬಂದೊಡನೆ 'ಮೋದಿಯವರು ಕೊಡುತ್ತಿಲ್ಲ; ಬಿಜೆಪಿಯವರಿಗೆ ಮಾನಮರ್ಯಾದೆ ಇದ್ದರೆ ಮೋದಿಯವರಿಗೆ ಮಾತನಾಡಲಿ' ಎನ್ನುವ ಮಾತು ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಂದ ಕೇಳುತ್ತಿದ್ದೇವೆ. ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಜನರು ಮತ್ತು ಜಾನುವಾರುಗಳು ಒಟ್ಟಿಗೆ ಸೇರಿ ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬರಲಿದೆ ಎಂದು ಎಚ್ಚರಿಸಿದರು.
ಗೌರವಾನ್ವಿತ ಮುಖ್ಯಮಂತ್ರಿಗಳು ಇವತ್ತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಮಾಹಿತಿ ಇದೆ. ರಾಜಸ್ವ ಸ್ವೀಕೃತಿ ಗುರಿ (ರೆವಿನ್ಯೂ ರಿಸೀಟ್) 2 ಲಕ್ಷ 38 ಸಾವಿರ ಕೋಟಿ ಇದ್ದು, ಡಿಸೆಂಬರ್ ಅಂತ್ಯಕ್ಕೆ 1 ಲಕ್ಷ 61 ಸಾವಿರ ಕೋಟಿ ರಾಜಸ್ವ ಮಾತ್ರ ಸ್ವೀಕಾರ ಆಗಿದೆ. ಕೇವಲ ಶೇ 67 ಇವರ ಸಾಧನೆ. ನಮ್ಮ ಸರಕಾರ ಇದ್ದಾಗ ಡಿಸೆಂಬರ್ ವೇಳೆಗೆ ಶೇ 82 ಗುರಿ ಸಾಧಿಸಿದ್ದೆವು. ಸಿಎಂ ಅವರಿಗೆ ಗುರಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಶೇ 82ರಿಂದ ಶೇ 67ಕ್ಕೆ ಇಳಿದುದಕ್ಕೆ ಮೋದಿಜೀ ಅವರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಯಾಕಾಗಿ ಗುರಿ ಮುಟ್ಟಲು ಸಾಧ್ಯವಾಗಿಲ್ಲ ಎಂದು ಜನರಿಗೆ ಉತ್ತರಿಸಿ ಎಂದು ಕೇಳಿದರು.












Click it and Unblock the Notifications