BJP President: ರಾಜ್ಯಾಧ್ಯಕ್ಷರ ಬದಲಾವಣೆ: ಮಹತ್ವದ ಸುದ್ದಿಗೋಷ್ಠಿ ಕರೆದ ಬಿ ವೈ ವಿಜಯೇಂದ್ರ
ಬೆಂಗಳೂರು, ಫೆಬ್ರವರಿ 18: ರಾಜ್ಯ ಬಿಜೆಪಿಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ ವೈ ವಿಜಯೇಂದ್ರ ಬಣದ ನಡುವೆ ಬಣ ಬಡಿದಾಟ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಫೆಬ್ರವರಿ 20 ರಂದು ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದು, ಇದೀಗ ನಾಳೆ (ಬುಧವಾರ)ಸುದೀರ್ಘ ಪತ್ರಿಕಾಗೋಷ್ಠಿ ಕರೆದಿರುವುದು ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ನಾಳೆ ಸುದೀರ್ಘ ಪತ್ರಿಕಾಗೋಷ್ಠಿ ಕರೆಯಲಿದ್ದೇನೆ. ರಾಜ್ಯದ ಗ್ಯಾರಂಟಿ ಕುರಿತ ಬಿಕ್ಕಟ್ಟು, ರಾಜಕೀಯ ಬಿಕ್ಕಟ್ಟಿನ ಕುರಿತು ನಾಳೆ ಮಾತನಾಡುವೆ. ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸಭೆ ಕುರಿತು ಪ್ರಶ್ನಿಸಿದಾಗ, ಅವರು ಹಿರಿಯರಿದ್ದಾರೆ. ಸಭೆ ಕರೆದು ಪಕ್ಷವನ್ನು ಹೇಗೆ ಬಲಪಡಿಸಬೇಕೆಂಬ ಚರ್ಚೆ ಮಾಡುವುದಕ್ಕೆ ಯಾರು ಬೇಡ ಎನ್ನುತ್ತಾರೆ ಎಂದು ಪ್ರಶ್ನಿಸಿದರು.

ಮಾಜಿ ಪ್ರಧಾನ ಮಂತ್ರಿ- ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ ರಾಜ್ಯಕ್ಕೆ ಬಂದಾಗ ವೇದಿಕೆ ಹಂಚಿಕೊಂಡವರು, ಪ್ರವಾಸ ಮಾಡಿದ ಹಿರಿಯರ ಭೇಟಿ ಮಾಡಿ ಅವರ ಅನುಭವವನ್ನು ತಿಳಿದುಕೊಳ್ಳುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಇನ್ನೂ ಈ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ. ಸರಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಅಸಹಾಯಕರಾಗಿದ್ದಾರೆ. ಸರಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ; ಅಕ್ಕಿ ಸಿಕ್ಕಿಲ್ಲ; 2 ಸಾವಿರ ರೂ. ಆರು ತಿಂಗಳಿನಿಂದ ಬಂದಿಲ್ಲ. ಆರು ತಿಂಗಳಿನಿಂದ ವಂಚನೆ ಆಗಿದೆ ಎಂದು ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಯಾರಾಗಬೇಕೆಂಬ ಕಚ್ಚಾಟ, ಕಿತ್ತಾಟ ಮುಂದುವರೆದಿದೆ. ಅದರಲ್ಲೂ ಇನ್ನೊಂದು ರೀತಿಯ ಪ್ರಚಾರದಲ್ಲಿ ಈ ಸರಕಾರ ಇದೆ ಎಂದು ಅವರು ಆಕ್ಷೇಪಿಸಿದರು. ಬೆಟ್ಟಿಂಗ್ ದಂಧೆಯಲ್ಲಿ ಇವತ್ತು 3 ಜನರ ಪ್ರಾಣತ್ಯಾಗ ಆಗಿದೆ. ಆನ್ಲೈನ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಎಂದು ದೂರಿದರು. ಇದರ ಕಡೆ ಗಮನ ಹರಿಸಲು ಸರಕಾರಕ್ಕೆ ಸಮಯವೇ ಇಲ್ಲ; ಸರಕಾರ ನಡೆಸುವವರೇ ಈ ದಂಧೆಯಲ್ಲಿ ಪಾಲುದಾರರು ಎಂದು ಬಹಳ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನಲ್ಲಿ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಮಕ್ಕಳು ಅಸುನೀಗಿದ್ದಾರೆ. ಅದು ಕೊಲೆ ಎಂದು ಆಪಾದನೆಗಳಿವೆ. ನಾನು ಎಸ್ಪಿಯವರಿಗೂ ಮಾತನಾಡಿದ್ದೇನೆ. ಇದರ ಸಮಗ್ರ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದರು. ಈ ಸರಕಾರವು ಜನರ ಪ್ರಾಣ, ಮಾನದ ವಿಚಾರದಲ್ಲಿ ಒಂದು ರೀತಿಯ ಆಟ ಆಡುತ್ತಿದೆ ಎಂದು ಟೀಕಿಸಿದರು.
ಗುಲ್ಬರ್ಗದಲ್ಲಿ ಪಾರ್ಕಿಗಾಗಿ ಇಟ್ಟಿದ್ದ ಜಾಗವನ್ನು ಸಿದ್ಧಾರ್ಥ ವಿಹಾರ ಟ್ರಸ್ಟ್ ಪರಿವರ್ತನೆ ಮಾಡಿ ಕೊಡಿ ಎಂದು ಕೇಳಿದ ವಿಷಯವನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಕಾನೂನಿನಡಿ ಆ ರೀತಿ ಮಾಡಲು ಆಗುವುದಿಲ್ಲ. ಅದು ಆಟದ ಮೈದಾನ, ಪಾರ್ಕ್ಗೆ ಇಟ್ಟಿದ್ದರೆ ಅದನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಲು ಅಸಾಧ್ಯ ಎಂದು ನುಡಿದರು. ಅದನ್ನು ಪರಿವರ್ತಿಸಬಾರದು ಎಂಬ ಅಭಿಪ್ರಾಯ ತಮ್ಮದೂ ಕೂಡ ಆಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.












Click it and Unblock the Notifications