ಉಪ ಚುನಾವಣೆ ಉಸ್ತುವಾರಿ; ಸ್ಪಷ್ಟನೆ ಕೊಟ್ಟ ವಿಜಯೇಂದ್ರ
ಬೆಂಗಳೂರು, ಅಕ್ಟೋಬರ್ 04; ಕರ್ನಾಟಕದ ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಕರ್ನಾಟಕದ ಉಪ ಚುನಾವಣೆಗೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಸೋಮವಾರ ಅಥವ ಮಂಗಳವಾರ ಕೇಂದ್ರ ಚುನಾವಣಾ ಸಮಿತಿ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ. ಕರ್ನಾಟಕ ಬಿಜೆಪಿ ಘಟಕ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳಿಸಿದೆ.
ಎರಡೂ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಬಿಜೆಪಿ ತಂತ್ರವನ್ನು ರೂಪಿಸುತ್ತಿದೆ. ಇದಕ್ಕಾಗಿ ಉಪ ಚುನಾವಣೆ ಉಸ್ತುವಾರಿಗಳನ್ನು ಈಗಾಗಲೇ ನೇಮಕ ಮಾಡಿದೆ. ಅಕ್ಟೋಬರ್ 8 ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಜೆಡಿಎಸ್ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಕಾಂಗ್ರೆಸ್ ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಬೇಕಿದೆ.
ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಗೆ ಕರ್ನಾಟಕ ಬಿಜೆಪಿ ಸಚಿವರು, ಶಾಸಕರು, ಮಾಜಿ ಸಚಿವರು, ಸಂಸದರನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಆದರೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ, ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರಗೆ ಪಕ್ಷ ಉಸ್ತುವಾರಿಯನ್ನು ನೀಡಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ವಿಜಯೇಂದ್ರ ಸೋಮವಾರ ಸರಣಿ ಟ್ವೀಟ್ಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ.
|
ಬಲವಾಗಿ ಖಂಡಿಸುತ್ತೇನೆ
'ಉಪಚುನಾವಣೆ ಘೋಷಣೆಯಾಗಿರುವ ಎರಡು ಕ್ಷೇತ್ರಗಳ ಉಸ್ತುವಾರಿಗಳ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎನ್ನುವ ಕಾರಣಕ್ಕೆ ಕೆಲವು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದು ಖಂಡಿತಾ ಸರಿಯಲ್ಲ, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ' ಎಂದು ಬಿ. ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ವಿಪಕ್ಷಗಳಿಗೆ ನೆರವು ಕೊಟ್ಟಂತೆ ಆಗುತ್ತದೆ
'ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ, ಇನ್ನ್ಯಾವುದೂ ಅಲ್ಲ. ಭಿನ್ನಾಭಿಪ್ರಾಯದ ಧ್ವನಿಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ, ವಿಪಕ್ಷಗಳಿಗೆ ಪರೋಕ್ಷ ನೆರವು ನೀಡಿದಂತಾಗುತ್ತದೆ' ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಪಕ್ಷಕ್ಕೆ ಮುಜುಗರ ತರುವ ವಿಚಾರ
'ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ. ನಮ್ಮ ಎಲ್ಲಾ ಪ್ರಯತ್ನಗಳನ್ನೂ ಪಕ್ಷದ ಹಿತ ಮತ್ತು ಗೆಲುವಿಗಾಗಿಯೇ ವಿನಿಯೋಗಿಸೋಣ' ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಬಿ. ವೈ. ವಿಜಯೇಂದ್ರ ಸ್ಪಷ್ಟನೆ ಏಕೆ?
ವಿಜಯೇಂದ್ರಗೆ ಉಸ್ತುವಾರಿ ಸಿಗಲಿಲ್ಲ ಎಂದು ಆಕ್ರೋಶಗೊಂಡು ಫೇಸ್ ಬುಕ್ನಲ್ಲಿ ಹಲವು ಪೋಸ್ಟ್ಗಳನ್ನು ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರು ಟ್ವೀಟ್ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ.
'ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ - ಚುನಾವಣಾ ಉಸ್ತುವಾರಿಗಳ ಪಟ್ಟಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರರ ಹೆಸರನ್ನು ಬೇಕೆಂದೆ ಹಾಕದೆ' ಎಂದು ಪೋಸ್ಟ್ ಹಾಕಲಾಗಿದೆ.
Recommended Video

ವಿಜಯೇಂದ್ರ ಉಸ್ತುವಾರಿಯಾಗಿದ್ದರು
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ನಡೆದಿತ್ತು. ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಸಹ ನಡೆದಿತ್ತು. ಬಿ. ವೈ. ವಿಜಯೇಂದ್ರ ಎರಡೂ ಚುನಾವಣೆಗೆ ಉಸ್ತುವಾರಿಯಾಗಿದ್ದರು. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಗೆದಿದ್ದರು. ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲಾಗಿತ್ತು.












Click it and Unblock the Notifications