BY Vijayendra: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಮುಂದುವರಿಕೆ: ಯತ್ನಾಳ್ಗೆ ಭಾರೀ ಹಿನ್ನೆಡೆ
ಬೆಂಗಳೂರು, ಮಾರ್ಚ್ 26: : ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನ ಕೆಳಗಿಸುವ ನಿಟ್ಟಿನಲ್ಲಿ ಕಮಲ ಪಾಳಯದಲ್ಲ ಭಿನ್ನಮತ ಭುಗಿಲೆದಿತ್ತು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿರೋಧಿ ಬಣ ಬಹಿರಂಗವಾಗಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟಕ್ಕೆ ಪಟ್ಟು ಹಿಡಿದಿದ್ದು, ವಿರೋಧಿ ಬಣದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆದಿತ್ತು, ಆದರೆ, ಈ ಎಲ್ಲಾ ಚರ್ಚೆ,ಪಕ್ಷ ವಿರೋಧಿ ಚಟುವಟಿಗೆಗಳಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎನ್ನುವ ಚರ್ಚೆ ಕಮಲ ಪಾಳಯದಲ್ಲಿ ಬಹುದಿನಗಳಿಂದ ನಡೆಯುತ್ತಿದೆ. ಆದರೆ, ಭಿನ್ನಮತೀಯರ ವಿರೋಧವನ್ನು ಲೆಕ್ಕಿಸದೆ, ಕರ್ನಾಟಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಒಲವು ತೋರದ ಕೇಂದ್ರದ ಬಿಜೆಪಿ ವರಿಷ್ಠರು, ಹಾಲಿ ಅಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನ ಕೆಳಗಿಳಿಸಲು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಮಾಡುವ ಮೂಲಕ, ಬಿ ವೈ ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಿದೆ.

ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಸಹ ಪದೇ ಪದೇ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್ಗೆ 72 ಗಂಟೆಗಳ ಒಳಗೆ ಉತ್ತರಿಸುವಂತೆ ತಿಳಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ಅಲ್ಲದೇ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಬಿ ಉಚ್ಚಾಟಿಸಿದ್ದು, ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ ವೈ ವಿಜಯೇಂದ್ರ ಅವರನ್ನ ಕೆಳಗಿಳಿಸಲು ಭಾರೀ ಪ್ರಯತ್ನ ನಡೆಸಿದ್ದ ಯತ್ನಾಳ್ ಅಂಡ್ ಟೀಮ್ ಗೆ ಭಾರೀ ಹಿನ್ನಡೆಯಾಗಿದ್ದು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಯತ್ನಾಳ್ ಉಚ್ಛಾಟನೆ: ವಿಜಯೇಂದ್ರ ಪ್ರತಿಕ್ರಿಯೆ
ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸವನಗೌಡ ಪಾಟೀಲ್ ಯತ್ನಾಳ್ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ.
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.
ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ವಿಜಯೇಂದ್ರ ಅವರು ತಿಳಿಸಿದರು.












Click it and Unblock the Notifications