ಕರ್ನಾಟಕದ 28 ಕ್ಷೇತ್ರಗಳ ಕುರಿತು ಮೋದಿ ನೇತೃತ್ವದಲ್ಲಿ ಸಭೆ: ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದ್ರೆ, ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಇನ್ನೂ ಬಗೆಹರಿಯುತ್ತಿಲ್ಲ.
ಇಂದು( ಮಂಗಳವಾರ ) ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾಳೆ- ನಾಡಿದ್ದು ಲೋಕಸಭಾ ಚುನಾವಣೆ ಸಂಬಂಧಿಸಿದ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಚುನಾವಣೆಗೆ ಸಂಬಂಧಿಸಿ ಎಲ್ಲ ಅಭ್ಯರ್ಥಿಗಳ ಕುರಿತು ಚರ್ಚೆ ನಡೆದಿದೆ ಎಂದು ಹೇಳಿದರು.
ಮೊದಲ ಹಂತದಲ್ಲಿ ಎಷ್ಟು ಅಭ್ಯರ್ಥಿಗಳನ್ನು ಘೋಷಿಸಬಹುದು ಎಂಬ ಪ್ರಶ್ನೆಗೆ 'ಅದ್ಯಾವುದೂ ಮಾಹಿತಿ ಇಲ್ಲ, 28 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಚರ್ಚೆ ಆಗಿದೆ' ಎಂದರು. ಅಪೇಕ್ಷಿತರ ಕುರಿತು ಚರ್ಚೆ ಆಗಿದೆ. ಅಂತಿಮವಾಗಿ ಕೇಂದ್ರದ ವರಿಷ್ಠರು ಕುಳಿತು ನಿರ್ಧಾರ ಮಾಡುತ್ತಾರೆ. ಬಹುಶಃ ಇನ್ನು ಎರಡ್ಮೂರು ದಿನಗಳಲ್ಲಿ ತಮ್ಮ ನಿರ್ಧಾರ ಘೋಷಿಸುತ್ತಾರೆ ಎಂದು ತಿಳಿಸಿದರು.
ಜೆಡಿಎಸ್ಗೆ ಎಷ್ಟು ಸೀಟು ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲವೂ ಚರ್ಚೆ ಆಗಿದೆ. ಜೆಡಿಎಸ್ ವರಿಷ್ಠರ ಜೊತೆಗೂ ಚರ್ಚೆ ಮಾಡಿ ಎರಡ್ಮೂರು ದಿನಗಳಲ್ಲಿ ಎಲ್ಲವೂ ಇತಿಶ್ರೀ ಆಗಲಿದೆ. 'ಹಾಲಿ ಸಂಸದರಿಗೆ ಟಿಕೆಟ್ ಇದೆಯೇ ಇಲ್ಲವೇ?' ಎಂದು ಕೇಳಿದಾಗ 'ಇವತ್ತು ಎಲ್ಲವೂ ಚರ್ಚೆ ಆಗಿದೆ. ಯಾರಿಗೆ ಕೊಡಲಿದ್ದಾರೆ. ಯಾರಿಗೆ ಇಲ್ಲ ಎಂಬುದು ಅಂತಿಮವಾಗಿ ನಿರ್ಧಾರ ಆಗಬೇಕಿದೆ' ಎಂದ ಅವರು, 'ಎರಡು ಹಂತಗಳಲ್ಲಿ ಬಿಜೆಪಿ ಪಟ್ಟಿ ಹೊರಬರಬಹುದು ಎಂದು ಹೇಳಿದರು.












Click it and Unblock the Notifications