BY Vijayendra: ಬಳ್ಳಾರಿಯಲ್ಲಿ 7 ಬಾಣಂತಿಯರು ಸಾವು: ನ್ಯಾಯಾಂಗ ತನಿಖೆ ವಿಜಯೇಂದ್ರ ಆಗ್ರಹ
ಬೆಂಗಳೂರು,ಡಿಸೆಂಬರ್ 07: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ಸೂಕ್ತ ನ್ಯಾಯಾಂಗ ತನಿಖೆ ಮಾಡಿಸಬೇಕು ಹಾಗೂ ಮೃತ ಗರ್ಭಿಣಿಯರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುವಂತಾಗಿದೆ ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಇವರು ಐವಿ ಗ್ಲುಕೋಸ್ ಖರೀದಿಸಿದ್ದರು. ಬಳ್ಳಾರಿ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ದುರ್ಘಟನೆಯಲ್ಲಿ 7 ಜನ ಬಾಣಂತಿಯರು ಮತ್ತು ಮಗು ಸಾವನ್ನಪ್ಪಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಇಲ್ಲಿಗೆ ಭೇಟಿ ಕೊಟ್ಟಿಲ್ಲ ಎಂದು ಟೀಕಿಸಿದರು.

ಜಮೀರ್ ಅಹ್ಮದ್ ಬಿಡಿ; ಉಸ್ತುವಾರಿ ಸಚಿವರು. ಅವರಿಗೂ ಇದಕ್ಕೂ ಸಂಬಂಧವೇ ಇಲ್ಲ. ಅವರು ವಕ್ಫ್ ವಿಚಾರದಲ್ಲಿ ಬ್ಯುಸಿ ಇದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಸರಕಾರದ ಅಮಾನವೀಯ ನಡೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು. ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಯಿಂದ ಖರೀದಿ ಮಾಡಿದ್ದು, ರಾಜ್ಯ ಸರಕಾರವೇ ಈ ದುರ್ಘಟನೆಗೆ ಹೊಣೆ ಹೊರಬೇಕೆಂದು ಆಗ್ರಹಿಸಿದರು.
ಇನ್ನೂ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಅವರ ತಂಡವು ಲೋಕಾಯುಕ್ತವನ್ನು ಇವತ್ತು ಭೇಟಿ ಮಾಡಲಿದೆ. ರಾಜ್ಯ ಸರಕಾರ ತನ್ನ ಜವಾಬ್ದಾರಿ ಮರೆತಿದೆ. ನಿನ್ನೆ ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಲು ಮುಖ್ಯಮಂತ್ರಿ ಹೊರಟರೆ, ಜನಕಲ್ಯಾಣ ಸಮಾವೇಶವೆಂದು ಹೆಸರು ಬದಲಿಸಿ ಕಾರ್ಯಕ್ರಮ ಮಾಡಿದ್ದಾರೆ. ಜನಕಲ್ಯಾಣ ಸಮಾವೇಶ ಇರಲಿ, ರಾಜ್ಯದ ಪರಿಸ್ಥಿತಿ ಏನೆಂದು ಮುಖ್ಯಮಂತ್ರಿ ಗಮನಿಸಬೇಕೆಂದು ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಪ್ರವಾಸ ಮಾಡಿ ಬಂದಿದ್ದೇನೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತೊಗರಿ ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಒಂದು ಎಕರೆಗೆ ಆರೇಳು ಕ್ವಿಂಟಲ್ ಬೆಳೆ ಬದಲು ಒಂದೂವರೆ ಎರಡು ಕ್ವಿಂಟಲ್ ಬೆಳೆ ಬಂದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಕಲಬುರ್ಗಿ ಜಿಲ್ಲೆಯೊಂದರಲ್ಲೇ ಆರರಿಂದ 7 ಲಕ್ಷ ಎಕರೆಯಲ್ಲಿ ತೊಗರಿ ಬೆಳೆಯುತ್ತಾರೆ. ಆದರೆ, ಶೇ 80 ರಷ್ಟು ಬೆಳೆ ರೋಗದಿಂದ ನಾಶವಾಗಿದೆ. ರಾಜ್ಯ ಸರಕಾರವು ಸರ್ವೇ, ಹಾನಿಯ ಕುರಿತು ನಿರ್ಧರಿಸುವ ಕಷ್ಟವನ್ನೇ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರ ಸರ್ವೇ ಮಾಡಿ ಹಾನಿಯ ಪ್ರಮಾಣವನ್ನು ತಿಳಿದುಕೊಂಡು ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಒಂದೆಡೆ ರೈತರು ಬೀದಿಗೆ ಬಂದಿದ್ದರೆ ಮತ್ತೊಂದೆಡೆ ಇವರ ಯೋಗ್ಯತೆಗೆ ಜನಕಲ್ಯಾಣ ಸಮಾವೇಶ ಎಂದು ಟೀಕಿಸಿದರು. ಈ ಸರಕಾರದ ಬೇಜವಾಬ್ದಾರಿ ವರ್ತನೆಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದರು.












Click it and Unblock the Notifications